ದಸರಾ ಎನ್ನುವುದು ಸ್ತ್ರೀಶಕ್ತಿಯ ಆರಾಧನೆ ಮಾಡುವ ಹಬ್ಬ, ಮಹಿಳೆಯರಿಗೆ ಬಲ ತುಂಬೋಣ: ರಾಷ್ಟ್ರಪತಿ ದ್ರೌಪದಿ ಮುರ್ಮು

ಕನ್ನಡ ನಾಡಿಗೆ ಬಂದು, ಮೈಸೂರು ದಸರಾ ಹಬ್ಬಕ್ಕೆ ಚಾಲನೆ ನೀಡಿ ಕನ್ನಡದಲ್ಲಿ ಮಾತು ಆರಂಭಿಸಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ವಿಶೇಷವಾಗಿತ್ತು. 
ಮೈಸೂರು ದಸರಾ 2022ನ್ನು ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸನ್ಮಾನಿಸಿದರು
ಮೈಸೂರು ದಸರಾ 2022ನ್ನು ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸನ್ಮಾನಿಸಿದರು

ಮೈಸೂರು: ಕನ್ನಡ ನಾಡಿಗೆ ಬಂದು, ಮೈಸೂರು ದಸರಾ ಹಬ್ಬಕ್ಕೆ ಚಾಲನೆ ನೀಡಿ ಕನ್ನಡದಲ್ಲಿ ಮಾತು ಆರಂಭಿಸಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ವಿಶೇಷವಾಗಿತ್ತು. 

ಇಂದು ವಿಶ್ವವಿಖ್ಯಾತ ಮೈಸೂರು ದಸರಾ 2022ಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಇದೇ ಮೊದಲ ಬಾರಿಗೆ ದಸರಾ ಉದ್ಘಾಟನೆಯಲ್ಲಿ ಭಾಗಿಯಾದ ಭಾರತದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕನ್ನಡದಲ್ಲಿ ಮಾತನಾಡುವ ಮೂಲಕ ರಾಜ್ಯದ ಜನರ ಮನಸ್ಸು ಗೆದ್ದಿದ್ದಾರೆ. ದೇವಿ ಚಾಮುಂಡೇಶ್ವರಿಗೆ ನನ್ನ ಮನಃಪೂರ್ವಕ ನಮಸ್ಕಾರಗಳು, ಎಲ್ಲ ಸಹೋದರ ಸಹೋದರಿಯರಿಗೆ ನನ್ನ ಹೃದಯಪೂರ್ವಕ ನಮಸ್ಕಾರಗಳು ಎಂದು ರಾಷ್ಟ್ರಪತಿ ಕನ್ನಡದಲ್ಲಿ ಎರಡು ವಾಕ್ಯ ಹೇಳಿದ ನಂತರ ಸಂಸ್ಕೃತದ ಚಾಮುಂಡೇಶ್ವರಿ ಶ್ಲೋಕ ಪಠಿಸಿದರು. ನೆರೆದಿದ್ದ ಜನರು ಚಪ್ಪಾಳೆ ತಟ್ಟಿ ಹರ್ಷ ವ್ಯಕ್ತಪಡಿಸಿದರು.

ಇದು ಆದಿಶಕ್ತಿಯ ಸ್ಥಾನ
ಹಿಂದೆ ಗಣೇಶನ ಹಬ್ಬದ ಸಂದರ್ಭದಲ್ಲಿ ನಾನು ಕರ್ನಾಟಕಕ್ಕೆ ಬಂದಿದ್ದೆ. ಈಗ ದಸರಾ ಉದ್ಘಾಟನೆಯ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ ಎಂದುಕೊಳ್ಳುತ್ತೇನೆ. ಇದು ಆದಿಶಕ್ತಿಯ ಸ್ಥಾನ. ಅಧ್ಯಾತ್ಮಿಕವಾಗಿ ಉನ್ನತ ಸ್ಥಾನ ಪಡೆದಿರುವ ದೇವಿಯ ಸ್ಥಳ ಇದು. ಹೀಗಾಗಿಯೇ ದೂರದೂರದಿಂದಲೂ ಜನರು ದೇವಿಯ ದರ್ಶನಕ್ಕಾಗಿ ಬರುತ್ತಾರೆ ಎಂದು ರಾಷ್ಟ್ರಪತಿ ಹೇಳಿದರು.

ಕರ್ನಾಟಕದ ಅಧ್ಯಾತ್ಮಿಕ ಪರಂಪರೆ
ಮೈಸೂರು ದಸರಾ ಭಾರತೀಯ ಸಂಸ್ಕೃತಿಯ ಗೌರವ ಹೆಚ್ಚಿಸಿದೆ. ಕರ್ನಾಟಕದಲ್ಲಿ ಜೈನ ಮತ್ತು ಬೌದ್ಧ ಪರಂಪರೆಗಳು ಬೆಸೆದುಕೊಂಡಿವೆ. ಆದಿಶಂಕರಾಚಾರ್ಯರು ಪೀಠ ಸ್ಥಾಪಿಸಿ ನಾಡಿನ ಘನತೆ ಹೆಚ್ಚಿಸಿದ್ದಾರೆ. ಬಸವಣ್ಣನವರು ಅನುಭವ ಮಂಟಪದ ಮೂಲಕ ಸಮಾನತೆ ಮತ್ತು ಪ್ರಜಾಪ್ರಭುತ್ವದ ಆಶಯ ಸಾರಿ ಹೇಳಿದರು. ಅನುಭವ ಮಂಟಪದ ಮೂಲಕ ಅಧ್ಯಾತ್ಮಿಕ ಮತ್ತು ಸಾಮಾಜಿಕ ಚರ್ಚೆಗಳು ನಡೆಯುತ್ತಿದ್ದವು ಎಂದು ರಾಷ್ಟ್ರಪತಿ ಹೇಳಿದರು. 

ಮಹಿಳೆಯರಿಗೆ ಬಲ ತುಂಬೋಣ: ದ್ರೌಪದಿ ಮುರ್ಮು

ಕರ್ನಾಟಕವು ಮಹಿಳಾ ಸಮಾನತೆಗೂ ಹೆಸರುವಾಸಿ. ಮಹಿಶಾಸುರ ಸೇರಿದಂತೆ ಹಲವು ರಾಕ್ಷಸರನ್ನು ದೇವಿ ಸಂಹಾರ ಮಾಡಿ ಜನರನ್ನು ರಕ್ಷಿಸಿದ್ದಾಳೆ. ದೇವಿಯು ಶಕ್ತಿಸ್ವರೂಪಳೂ ಹೌದು, ತಾಯಿಯಾಗಿ ಭಕ್ತರನ್ನು ಕಾಪಾಡುವ ತಾಯಿ ಸ್ವರೂಪಳೂ ಹೌದು. ದಸರಾ ಎನ್ನುವುದು ಸ್ತ್ರೀಶಕ್ತಿಯ ಆರಾಧನೆ ಮಾಡುವ ಹಬ್ಬ. ಕರ್ನಾಟಕದಲ್ಲಿ ಕಿತ್ತೂರು ಚೆನ್ನಮ್ಮಾ, ಓಬವ್ವರಂಥ ಮಹಾನ್ ಹೋರಾಟಗಾರ್ತಿಯರು ಇದ್ದ ನಾಡು. ಮಹಿಳೆಯರು ಹಲವು ಆಯಾಮಗಳಲ್ಲಿ ಈಗ ಪ್ರಗತಿ ತೋರುತ್ತಿದ್ದಾರೆ. ಅವರಿಗೆ ನಾವು ಇನ್ನಷ್ಟು ಬಲ ತುಂಬಬೇಕಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಪರಂಪರೆಯೊಂದಿಗೆ ಜೋಡಣೆಯಾಗಲು ನನಗೆ ಅವಕಾಶಕೊಟ್ಟರು. ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಅತಿವೃಷ್ಟಿಯಿಂದ ರಾಜ್ಯದಲ್ಲಿ ಅನಾಹುತಗಳು ಸಂಭವಿಸಿದವು. ರಾಜ್ಯ ಸರ್ಕಾರವು ಅದನ್ನು ನಿರ್ವಹಿಸಲು ಶ್ರಮಿಸುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಸಮೃದ್ಧಿ ನೆಲೆಸಲಿ.

ಕರ್ನಾಟಕದಲ್ಲಿ ದೇಶದ ಸಾಫ್ಟ್​ವೇರ್ ಮತ್ತು ಹಾರ್ಡ್​ವೇರ್​ ಉದ್ಯಮಗಳು ನೆಲೆ ನಿಂತಿವೆ. ಬೆಂಗಳೂರು ದೇಶದ ಸ್ಟಾರ್ಟ್​ಅಪ್​ ಹಬ್ ಎನಿಸಿಕೊಂಡಿದೆ. ಆವಿಷ್ಕಾರಗಳು ಹಾಗೂ ನವೋದ್ಯಮಗಳಲ್ಲಿಯೂ ಕರ್ನಾಟಕ ಮುಂಚೂಣಿಯಲ್ಲಿದೆ. ಕೇಂದ್ರ ಸರ್ಕಾರದ ಹಲವು ಯೋಜನೆಗಳು ಕರ್ನಾಟಕದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿವೆ. ಇದು ಇನ್ನಷ್ಟು ಮುನ್ನಡೆ ಸಾಧಿಸಬೇಕು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com