ಗ್ರಾಮ ಪಂಚಾಯ್ತಿ ಸದಸ್ಯ ದೀಪಕ್ ಹತ್ಯೆ ಪ್ರಕರಣ: ನ್ಯಾಯಕ್ಕಾಗಿ ಅಲೆಯುತ್ತಿದ್ದ ಪತ್ನಿ ಮನನೊಂದು ಆತ್ಮಹತ್ಯೆ!
ಗ್ರಾಮ ಪಂಚಾಯ್ತಿ ಸದಸ್ಯ ದೀಪಕ್ ಪಠದಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಅಲೆಯುತ್ತಿದ್ದ ದೀಪಕ್ ಪತ್ನಿ ಪುಷ್ಫಾ ಆತ್ಮಹತ್ಯೆಗೆ ಶರಣಾಗಿದ್ದಾರೆ.
Published: 29th September 2022 01:39 AM | Last Updated: 29th September 2022 02:12 PM | A+A A-

ಸಂಗ್ರಹ ಚಿತ್ರ
ಹುಬ್ಬಳ್ಳಿ: ಗ್ರಾಮ ಪಂಚಾಯ್ತಿ ಸದಸ್ಯ ದೀಪಕ್ ಪಠದಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಅಲೆಯುತ್ತಿದ್ದ ದೀಪಕ್ ಪತ್ನಿ ಪುಷ್ಫಾ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಳೆದ ವಾರವಷ್ಟೇ ದೀಪಕ್ ಪಠದಾರಿ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಲಾಗಿತ್ತು. ಈ ಮಧ್ಯೆ ಪತಿಯ ಸಾವಿಗೆ ನ್ಯಾಯಕ್ಕಾಗಿ ಪುಷ್ಪಾ ಹೋರಾಡುತ್ತಿದ್ದರು. ಆದರೆ ಇಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನವನಗರದ ಸಂಬಂಧಿ ಮನೆಯಲ್ಲಿ ಪುಷ್ಪ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜುಲೈ 4ರಂದು ರಾಯನಾಳ ಬಳಿ ದೀಪಕ್ ಪಠದಾರಿ ಹತ್ಯೆ ಮಾಡಲಾಗಿತ್ತು. ಸಿಐಡಿ ಪ್ರಕರಣದ ತನಿಖೆ ನಡೆಸುತ್ತಿರುವಾಗಲೇ ಪುಷ್ಪಾ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಕೊಲೆ ನಡೆದ ಮೂರು ತಿಂಗಳ ಬಳಿಕ ಆಡಿಯೋವೊಂದು ಹೊರಬಿದ್ದಿದ್ದು ಈ ಆಡಿಯೋ ಪೊಲೀಸರ ವಿರುದ್ಧವೇ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕುವಂತೆ ಮಾಡಿತ್ತು. ಹೀಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು.