ಬೆಂಗಳೂರು: ಮೈಸೂರು ರಸ್ತೆಯಲ್ಲಿ ಸ್ಕೂಟರ್‌ಗೆ ಡಿಕ್ಕಿ, ಲಾರಿ ಹರಿದು ಮಹಿಳೆ ಸಾವು, ಒಬ್ಬರಿಗೆ ಗಂಭೀರ ಗಾಯ

ಮೈಸೂರು ರಸ್ತೆಯಲ್ಲಿ ಭಾನುವಾರ ಲಾರಿ ಹರಿದ ಪರಿಣಾಮ 29 ವರ್ಷದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ತಾಯಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮೈಸೂರು ರಸ್ತೆಯಲ್ಲಿ ಭಾನುವಾರ ಲಾರಿ ಹರಿದ ಪರಿಣಾಮ 29 ವರ್ಷದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ತಾಯಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಅತ್ತಿಗುಪ್ಪೆ ನಿವಾಸಿ ಅನುಷಾ ಎಂದು ಗುರುತಿಸಲಾಗಿದ್ದು, ಅವರು ಪ್ಲೈವುಡ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ತಾಯಿ ವನಜಾಕ್ಷಿ (50) ಅವರ ಕಾಲಿನ ಮೇಲೆ ಲಾರಿ ಹರಿದಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದು, ಅನುಷಾ ಅವರ ಏಳು ವರ್ಷದ ಮಗ ಆರ್ಯನ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಮೂವರು ಮೈಸೂರು ರಸ್ತೆಯಲ್ಲಿರುವ ಮಾಲ್‌ಗೆ ಶಾಪಿಂಗ್ ಮಾಡಲು ಹೋಗುತ್ತಿದ್ದಾಗ ಪಂತರಪಾಳ್ಯ ಬಸ್ ನಿಲ್ದಾಣದ ಬಳಿ ಮುಖ್ಯರಸ್ತೆ ಸೇರುವೆಡೆ ವೇಗವಾಗಿ ಬಂದ ಲಾರಿ ಅವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಈ ವೇಳೆ ಅನುಷಾ ಅವರ ತಲೆಯ ಮೇಲೆ ಲಾರಿ ಹರಿದಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ನಿಲ್ಲುವ ಮುನ್ನವೇ ಬಿಎಂಟಿಸಿ ಬಸ್‌ಗೂ ಡಿಕ್ಕಿ ಹೊಡೆದಿದೆ. ಸಾರ್ವಜನಿಕರ ಆಕ್ರೋಶಕ್ಕೆ ಹೆದರಿ ಲಾರಿ ಚಾಲಕ ವಾಹನವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗುತ್ತಿದ್ದಾಗ ದಾರಿಹೋಕರು ಆತನನ್ನು ಹಿಡಿಯಲು ಮುಂದಾದರೂ ಪ್ರಯೋಜನವಾಗಿಲ್ಲ.

ಅಪಘಾತದಿಂದ ರೊಚ್ಚಿಗೆದ್ದ ಸ್ಥಳೀಯರು ಲಾರಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಸುಮಾರು 30 ನಿಮಿಷಕ್ಕೂ ಹೆಚ್ಚು ಕಾಲ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಗುಂಪನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು.

ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com