ಬಿಜೆಪಿ ಶಾಸಕ ಓಲೆಕಾರ್‌ ವಿರುದ್ಧದ ದೋಷಿ ಆದೇಶಕ್ಕೆ ಹೈಕೋರ್ಟ್‌ ತಡೆ

ಕರ್ನಾಟಕದಲ್ಲಿ ನಕಲಿ ಬಿಲ್ ಪ್ರಕರಣದಲ್ಲಿ ದೋಷಿಯಾಗಿ 2 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕ ನೆಹರು ಸಿ. ಓಲೇಕಾರ್​ಗೆ ಹೈಕೋರ್ಟ್ ಬಿಗ್ ರಿಲೀಫ್​ ನೀಡಿದೆ.
ಬಿಜೆಪಿ ಶಾಸಕ ನೆಹರು ಸಿ. ಓಲೇಕಾರ್
ಬಿಜೆಪಿ ಶಾಸಕ ನೆಹರು ಸಿ. ಓಲೇಕಾರ್

ಬೆಂಗಳೂರು: ಕರ್ನಾಟಕದಲ್ಲಿ ನಕಲಿ ಬಿಲ್ ಪ್ರಕರಣದಲ್ಲಿ ದೋಷಿಯಾಗಿ 2 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕ ನೆಹರು ಸಿ. ಓಲೇಕಾರ್​ಗೆ ಹೈಕೋರ್ಟ್ ಬಿಗ್ ರಿಲೀಫ್​ ನೀಡಿದೆ.

ಓಲೆಕಾರ್‌ ಅವರನ್ನು ದೋಷಿ ಎಂದು ತೀರ್ಮಾನಿಸಿದ್ದ ವಿಚಾರಣಾಧೀನ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ಕೆಲ ದಿನಗಳ ಹಿಂದಷ್ಟೇ ಇದೇ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ ವಿಧಿಸಿದ್ದ ಎರಡು ವರ್ಷ ಶಿಕ್ಷೆಯನ್ನು ಹೈಕೋರ್ಟ್‌ ಅಮಾನತ್ತಿನಲ್ಲಿರಿಸಿತ್ತು. ದೋಷಿ ಮತ್ತು ಶಿಕ್ಷೆ ಆದೇಶಗಳೆರಡಕ್ಕೂ ತಡೆಯಾಗಿರುವುದರಿಂದ ಓಲೆಕಾರ್‌ ಅವರು ಹಾಲಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಹಾದಿ ಸುಗಮವಾಗಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಧಿಸಿರುವ ಎರಡು ವರ್ಷಗಳ ಶಿಕ್ಷೆ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿ ಓಲೆಕಾರ್‌ ಅವರನ್ನು ಸಲ್ಲಿಸಿದ್ದ ಮಧ್ಯಂತರ ವಿಚಾರಣೆ ನಡೆಸಿ, ಮಾರ್ಚ್‌ 31ರಂದು ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಕೆ ನಟರಾಜನ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಇಂದು ಪ್ರಕಟಿಸಿತು. ವಿಸ್ತೃತ ಆದೇಶ ಇನ್ನಷ್ಟೇ ಲಭ್ಯವಾಗಬೇಕಿದೆ.

ಹಾವೇರಿ ನಗರಸಭೆ ಕಾಮಗಾರಿಯಲ್ಲಿ ನಕಲಿ ಬಿಲ್ ಸೃಷ್ಟಿಸಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ಹಣ ನಷ್ಟ ಉಂಟುಮಾಡಿದ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಓಲೆಕಾರ್‌, ಅವರ ಇಬ್ಬರು ಪುತ್ರರು ಮತ್ತು ಅಧಿಕಾರಿಗಳನ್ನು ದೋಷಿಗಳು ಎಂದು ಪರಿಗಣಿಸಿ ತಲಾ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

ಇದನ್ನು ಪ್ರಶ್ನಿಸಿ ಓಲೆಕಾರ್‌ ಅವರು ಫೆಬ್ರವರಿ 23ರಂದು ಹೈಕೋರ್ಟ್‌ ಕದ ತಟ್ಟಿದ್ದರು. ವಿಚಾರಣಾಧೀನ ನ್ಯಾಯಾಲಯವು ಖಾಸಗಿ ದೂರನ್ನು ಪರಿಗಣಿಸುವ ಕಾನೂನು ಪಾಲಿಸಿಲ್ಲ ಎಂದು ವಾದಿಸಿದ್ದರು. ಇದನ್ನು ಪುರಸ್ಕರಿಸಿದ್ದ ಪೀಠವು ಮೊದಲಿಗೆ ಜೈಲು ಶಿಕ್ಷೆ ಆದೇಶವನ್ನು ಅಮಾನತ್ತಿನಲ್ಲಿರಿಸಿತ್ತು. ಇದರ ಆಧಾರದ ಮೇಲೆ ದೋಷಿ ಎನ್ನುವ ಆದೇಶಕ್ಕೆ ತಡೆ ನೀಡುವಂತೆ ಕೋರಿ ಮತ್ತೊಂದು ಮಧ್ಯಂತರ ಅರ್ಜಿಯನ್ನು ದಾಖಲಿಸಲಾಗಿತ್ತು. ಈಗ ಅದನ್ನೂ ಹೈಕೋರ್ಟ್‌ ಮಾನ್ಯ ಮಾಡಿರುವುದರಿಂದ ಓಲೆಕಾರ್‌ ಅವರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com