ಸಿಆರ್‌ಪಿಎಫ್ ನೇಮಕಾತಿಗೆ ಸ್ಥಳೀಯ ಭಾಷೆಯಲ್ಲಿಯೇ ಮರುಪರೀಕ್ಷೆ ನಡೆಸಿ: ಎಚ್‌ಡಿ ಕುಮಾರಸ್ವಾಮಿ

ಕೇಂದ್ರೀಯ ಮೀಸಲು ರಕ್ಷಣಾ ಪಡೆ (ಸಿಆರ್‌ಪಿಎಫ್) ನೇಮಕಾತಿ ಪರೀಕ್ಷೆಯನ್ನು ಸ್ಥಳೀಯ ಭಾಷೆಯಲ್ಲಿ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸದ ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿರುವ ಜೆಡಿಎಸ್, ಮರು ಪರೀಕ್ಷೆ ನಡೆಸಬೇಕು ಎಂದು ಸೋಮವಾರ ಒತ್ತಾಯಿಸಿದೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಕೇಂದ್ರೀಯ ಮೀಸಲು ರಕ್ಷಣಾ ಪಡೆ (ಸಿಆರ್‌ಪಿಎಫ್) ನೇಮಕಾತಿ ಪರೀಕ್ಷೆಯನ್ನು ಸ್ಥಳೀಯ ಭಾಷೆಯಲ್ಲಿ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸದ ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿರುವ ಜೆಡಿಎಸ್, ಮರು ಪರೀಕ್ಷೆ ನಡೆಸಬೇಕು ಎಂದು ಸೋಮವಾರ ಒತ್ತಾಯಿಸಿದೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ಕೇಂದ್ರ ಸರ್ಕಾರ ಮತ್ತೊಮ್ಮೆ ಕನ್ನಡಿಗರಿಗೆ ಮೋಸ ಮಾಡಿದೆ. ಸಿಆರ್‌ಪಿಎಫ್‌ಗೆ ಭಾನುವಾರ ನಡೆದ ಕಂಪ್ಯೂಟರ್ ಪರೀಕ್ಷೆಯಲ್ಲಿ ಸ್ಥಳೀಯ ಭಾಷೆಗೆ ಅವಕಾಶವಿರಲಿಲ್ಲ. ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ಪರೀಕ್ಷೆಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ. ಇದು ಅತ್ಯಂತ ಖಂಡನೀಯ ಎಂದು ಹೇಳಿದರು.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, 9212 ಹುದ್ದೆಗಳಿಗೆ ಈ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಕರ್ನಾಟಕದ 466 ಹುದ್ದೆಗಳೂ ಸೇರಿವೆ. ದುರಂತವೆಂದರೆ, ಇಷ್ಟು ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳು ಹಿಂದಿ, ಇಂಗ್ಲಿಷ್‌ನಲ್ಲಿ ಪರೀಕ್ಷೆ ಬರೆದಿದ್ದಾರೆ. ಈ ಭಾಷೆಯಲ್ಲೇ ಬರೆಯುವ ಅನಿವಾರ್ಯ ಸೃಷ್ಟಿಸಲಾಗಿದೆ. ಮಾತೃಭಾಷೆಯಲ್ಲಿ ಬರೆಯುವುದನ್ನು ನಿರಾಕರಿಸುವುದು ಎಂದರೆ ಸಂವಿಧಾನಕ್ಕೆ ಎಸಗಿದ ಅಪಚಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ತನ್ನ ಸುಪರ್ದಿಯಲ್ಲಿ ನಡೆಸುವ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ಹಿಂದಿ, ಇಂಗ್ಲಿಷಿನಲ್ಲೇ ನಡೆಸುತ್ತಿದೆ. ಕೇವಲ ಹಿಂದಿ ಕೇಂದ್ರಿತ ನೇಮಕಾತಿ ಪ್ರಕ್ರಿಯೆ ಇತರೆ ಭಾಷಿಕರನ್ನು ಉದ್ಯೋಗ ವಂಚಿತರನ್ನಾಗಿಸುವುದು ಮಾತ್ರವಲ್ಲ, ಅನ್ಯಭಾಷೆಗಳನ್ನು ಹತ್ತಿಕ್ಕಿ ಹಿಂದಿ ಹೇರಿಕೆ ಮಾಡುವುದಷ್ಟೇ ದುರುದ್ದೇಶ. ಇದು ಸ್ಪಷ್ಟ ಎಂದಿದ್ದಾರೆ.

ಈ ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳು ಹಿಂದಿ ಭಾಷೆಗೆ ಸಂಬಂಧಿಸಿದವು. ಅಲ್ಲಿಗೆ, ಹಿಂದಿಯೇತರ ಅಭ್ಯರ್ಥಿಗಳು ಈ ನೇಮಕಾತಿಯಲ್ಲಿ ಆಯ್ಕೆ ಆಗಲೇಬಾರದು ಎಂದು, ಉದ್ದೇಶಪೂರ್ವಕವಾಗಿಯೇ ಹೀಗೆ ಮಾಡಲಾಗಿದೆ. ಒಕ್ಕೂಟ ವ್ಯವಸ್ಥೆಗೆ ಇದು ಕೇಂದ್ರವೇ ಕೊಟ್ಟ ಮಾರಣಾಂತಿಕ ಪೆಟ್ಟು. ತಮ್ಮ ರಾಜ್ಯಗಳಲ್ಲಿ ಉದ್ಯೋಗ ಪಡೆಯಲು ಅನ್ಯಭಾಷೆಯಲ್ಲಿ ಪರೀಕ್ಷೆ ಬರೆಯಬೇಕಾದ ಕರ್ಮ ದಕ್ಷಿಣ ಭಾರತ ರಾಜ್ಯಗಳ ಜನರದ್ದು. ಕನ್ನಡಿಗರೂ ಸೇರಿ ದಕ್ಷಿಣದ ಎಲ್ಲ ಭಾಷಿಕರು ಈ ಬಗ್ಗೆ ವಿರೋಧ ಮಾಡುತ್ತಲೇ ಇದ್ದರೂ ಕೇಂದ್ರ ಸರ್ಕಾರ ಹಿಂದಿ ಹೇರಿಕೆಯನ್ನು ಮುಂದುವರಿಸಿದೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮುಲಾಜಿಲ್ಲದೆ ಸಿಆರ್‌ಪಿಎಫ್ ನೇಮಕಾತಿಯ  ಮರು ಪರೀಕ್ಷೆ ನಡೆಸಬೇಕು ಹಾಗೂ ಕನ್ನಡ ಸೇರಿ ದೇಶದ ಎಲ್ಲ ಭಾಷೆಗಳಲ್ಲೂ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು. ಇಲ್ಲವಾದರೆ, ಈ ತಾರತಮ್ಯ ಹಾಗೂ ಹಿಂದಿ ಹೇರಿಕೆ ಇನ್ನೊಂದು ದೊಡ್ಡ ಹೋರಾಟಕ್ಕೆ ನಾಂದಿ ಆದೀತು ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com