ಜೆಡಿಎಸ್'ಗೆ ಸೇರ್ಪಡೆಗೊಂಡು ಬಿಜೆಪಿಗೆ ಪಾಠ ಕಲಿಸಿ: ಎನ್ಆರ್ ರಮೇಶ್ ಗೆ ಬೆಂಬಲಿಗರ ಒತ್ತಾಯ

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ 2 ಪಟ್ಟಿಯನ್ನು ಬಿಜೆಪಿ ಘೋಷಣೆ ಮಾಡಿದ ಬೆನ್ನಲ್ಲೇ, ಬಂಡಾಯದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ 2 ಪಟ್ಟಿಯನ್ನು ಬಿಜೆಪಿ ಘೋಷಣೆ ಮಾಡಿದ ಬೆನ್ನಲ್ಲೇ, ಬಂಡಾಯದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.

ಜಯನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರಿಗೆ ಟಿಕೆಟ್ ಸಿಗದಿರುವುದಕ್ಕೆ ಅವರ ಬೆಂಬಲಿಗರು ತೀವ್ರವಾಗಿ ಅಸಮಾಧಾನಗೊಂಡಿದ್ದು, ಜೆಡಿಎಸ್ ಸೇರಿ ಪದ್ಮನಾಭನಗರ ಹಾಗೂ ಜಯನಗರ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಪಟ್ಟು ಹಿಡಿದಿದ್ದಾರೆ.

ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಯಡಿಯೂರು ವಾರ್ಡ್ ನಾಗರಿಕರ ವೇದಿಕೆ ಅಧ್ಯಕ್ಷ ಅನಿಲ್ ಕುಮಾರ್ ಅವರು, ರಮೇಶ್ ಅವರು ಜೆಡಿಎಸ್ ಸೇರಿ ಎರಡು ಸ್ಥಾನಗಳಲ್ಲಿ ಸ್ಪರ್ಧಿಸಬೇಕು, ಎರಡೂ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.

ರಮೇಶ್ ಅವರು ಕಳೆದ 24 ವರ್ಷಗಳಿಂದ ಬಿಜೆಪಿಗಾಗಿ ಅವಿರತವಾಗಿ ಶ್ರಮಿಸಿದ್ದಾರೆ ಮತ್ತು ಪಕ್ಷವನ್ನು ಉನ್ನತ ಮಟ್ಟಕ್ಕೆ ಏರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ನೂರಾರು ದೊಡ್ಡ ಹಗರಣಗಳು ಮತ್ತು ಭ್ರಷ್ಟಾಚಾರಗಳನ್ನು ಅವರು ಬಹಿರಂಗಪಡಿಸಿದ್ದರಿಂದಲೇ ರಾಜ್ಯದಲ್ಲಿ ಬಿಜೆಪಿ ಎತ್ತರಕ್ಕೆ ಹೋಗಲು ಸಾಧ್ಯವಾಯಿತು.

ಸುಶಿಕ್ಷಿತರ ಪಕ್ಷ ಎಂದು ಬಿಂಬಿಸಿಕೊಳ್ಳುವ ಬಿಜೆಪಿ, ಸರ್ಕಾರಿ ಭೂಕಬಳಿಕೆ ಹಾಗೂ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ ಎಂದರು.

ಪದ್ಮನಾಭನಗರ ಶಾಸಕ ಹಾಗೂ ಕಂದಾಯ ಸಚಿವ ಆರ್.ಅಶೋಕ ಅವರು ಕಾಂಗ್ರೆಸ್ ಮುಖಂಡರಾದ ಎನ್.ಎ.ಹರೀಸ್ ಮತ್ತು ಇತರರೊಂದಿಗೆ ರಹಸ್ಯ ಒಪ್ಪಂದ ಮಾಡಿಕೊಂಡಿದ್ದಾರೆ, ಹೀಗಾಗಿ ಚಾಮರಾಜಪೇಟೆ, ಬಿಎಂಟಿ ಲೇಔಟ್ ಮತ್ತಿತರ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಕಾರ್ಯಕರ್ತರು ಭಯದಲ್ಲಿದ್ದಾರೆಂದು ಆರೋಪಿಸಿದ್ದಾರೆ. ಬೆಂಬಲಿಗರು ಜೆಡಿಎಸ್ ಸೇರುವಂತೆ ಒತ್ತಾಯಿಸುತ್ತಿದ್ದರೂ ರಮೇಶ್ ಅವರು ಮಾತ್ರ ಟಿಕೆಟ್ ಹಂಚಿಕೆಯಾಗದಿರುವ ಕುರಿತು ಇನ್ನೂ ಯಾವುದೇ ರೀತಿಯ ಪ್ರತಿಕ್ರಿಯೆಯನ್ನು ನೀಡಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com