ಎಷ್ಟು ಕೆಸರು ಎರಚುತ್ತಾರೋ ಅಷ್ಟು ಕಮಲ ಅರಳಲಿದೆ: ಬೀದರ್'ನಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಗಡಿ ಜಿಲ್ಲೆ ಬೀದರ್​ಗೆ ಶನಿವಾರ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಿರುಸಿನ ಪ್ರಚಾರ ಆರಂಭಿಸಿದ್ದಾರೆ,
ಬೀದರ್ ನಲ್ಲಿ ಪ್ರಧಾನಿ ಮೋದಿ.
ಬೀದರ್ ನಲ್ಲಿ ಪ್ರಧಾನಿ ಮೋದಿ.

ಬೀದರ್: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಗಡಿ ಜಿಲ್ಲೆ ಬೀದರ್​ಗೆ ಶನಿವಾರ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಿರುಸಿನ ಪ್ರಚಾರ ಆರಂಭಿಸಿದ್ದಾರೆ.

ಬೀದರ್​ನ ಹುಮನಾಬಾದ್​ನಲ್ಲಿ ಆಯೋಜಿಸಿರುವ ಬಿಜೆಪಿ ಬೃಹತ್ ಸಮಾವೇಶದಲ್ಲಿ ಭಾಗವಹಿಸಿರುವ ಮೋದಿಯವರು, ಕನ್ನಡದಲ್ಲಿಯೇ ಭಾಷಣ ಆರಂಭಿಸಿ ಬಸವೇಶ್ವರರನ್ನು ನೆನೆದರು.

ಈ ವಿಧಾನಸಭೆ ಚುನಾವಣೆಗೆ ನನ್ನ ಈ ಯಾತ್ರೆ ಬೀದರ್​​ನಿಂದ ಆರಂಭವಾಗುತ್ತಿರುವುದು ನನ್ನ ಭಾಗ್ಯ. ಬಸವೇಶ್ವರರ ಅನುಗ್ರಹ ನಮಗೆ ಶಕ್ತಿ ತುಂಬುತ್ತದೆ. ಕರ್ನಾಟಕದ ಕಿರೀಟ ಬೀದರ್​​ನ ಆಶೀರ್ವಾದ ನನಗೆ ಸಿಕ್ಕಿದೆ ಎಂದು ಹೇಳಿದ್ದಾರೆ.

ಈ ಚುನಾವಣೆ ಬರೀ ಐದು ವರ್ಷದ ಚುನಾವಣೆಯಲ್ಲ, ವಿಶ್ವದಲ್ಲಿ ಕರ್ನಾಟಕವನ್ನು ನಂಬರ್ ಒನ್ ಮಾಡುವ ಚುನಾವಣೆ, ಕೇಂದ್ರ ಮತ್ತು ರಾಜ್ಯದಲ್ಲಿನ ಬಿಜೆಪಿ ಸರಕಾರವು ಕರ್ನಾಟಕವನ್ನು ನಂಬರ್ ಒನ್ ರಾಜ್ಯ ಮಾಡಲಿದೆ, ರಾಜ್ಯದ ಮೂಲೆ ಮೂಲೆಯನ್ನು ಅಭಿವೃದ್ಧಿ ಮಾಡುತ್ತೇವೆ. ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿ ಹೆಚ್ಚಾಗಲಿದೆ. ಕರ್ನಾಟಕದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ನೀಡುವಂತೆ ಮನವಿ ಮಾಡಿದರು.

ಇಂದು ಬೀದರ್ ಜಿಲ್ಲೆಗೆ ಬಂದಿರುವುದು ನನ್ನ ಸೌಭಾಗ್ಯ, ಕರ್ನಾಟಕದ ಕಿರೀಟ ಬೀದರ್ ಜನರ ಆಶೀರ್ವಾದ ಈ ಹಿಂದೆಯೂ ಬಿಜೆಪಿ ಮೇಲಿತ್ತು. ನೀರಾವರಿ ಯೋಜನೆ ಸೇರಿದಂತೆ ಹಲವು ಅಭಿವೃದ್ದಿ ಕೆಲಸಗಳನ್ನು ಬೀದರ್ ಜಿಲ್ಲಾ ವ್ಯಾಪ್ತಿಯಲ್ಲಿ ಮಾಡಲಾಗಿದೆ. ರಾಜ್ಯದ ಮೂಲೆ ಮೂಲೆಯಲ್ಲಿ ಅಭಿವೃದ್ಧಿ ಮಾಡುತ್ತೇವೆ, ಡಬಲ್ ಇಂಜಿನ್ ಸರ್ಕಾರಕ್ಕೆ ಬೆಂಬಲ ನೀಡಿ ಎಂದು ತಿಳಿಸಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ಬಂಡವಾಳ ಹರಿದುಬರುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರಿಗೆ ದ್ರೋಹ ಮಾಡಿದೆ. ಬಿಜೆಪಿ ಸರ್ಕಾರ ರೈತರಿಗೆ ಅನುಕೂಲ ಮಾಡಿಕೊಟ್ಟಿದೆ. ರೈತರ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಶ್ರಮಿಸುತ್ತಿದೆ. ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಲಾಭವಾಗಿದೆ ಎಂದರು.

ಒಂದು ವೇಳೆ ಡಬಲ್ ಎಂಜಿನ್ ಸರ್ಕಾರ ಇಲ್ಲದಿದ್ದರೆ ಅಭಿವೃದ್ಧಿಗೆ ವೇಗ ದೊರೆಯುತ್ತಿರಲಿಲ್ಲ. ಬೀದರ್​​ನಲ್ಲಿಯೂ ಏತ ನೀರಾವರಿ ಯೋಜನೆ ಸೇರಿದಂತೆ ಅನೇಕ ಯೋಜನೆಗಳು ವೇಗ ಪಡೆದುಕೊಂಡಿವೆ. ನೀವೆಲ್ಲ ನೋಡುತ್ತಿದ್ದೀರಿ. ಕಿಸಾನ್ ಸಮ್ಮಾನ್ ನಿಧಿ ರೈತರಿಗೆ ಬಹಳಷ್ಟು ನೆರವಾಗಿದೆ. ಸಣ್ಣಪುಟ್ಟ ಖರ್ಚಿಗೆ ರೈತರಿಗೆ ನೆರವಾಗಿದೆ. ಯೋಜನೆ ಶುರು ಮಾಡಿದ್ದಾಗ ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ಇಲ್ಲಿತ್ತು. ಆಗ ಜನರಿಗೆ ಕೇಂದ್ರದ ಯೋಜನೆ ಸರಿಯಾಗಿ ತಲುಪುತ್ತಿರಲಿಲ್ಲ. ಫಲಾನುಭವಿಗಳ ಪಟ್ಟಿಯನ್ನೂ ಇಲ್ಲಿನ ಮೈತ್ರಿ ಸರ್ಕಾರ ನೀಡಿರಲಿಲ್ಲ. ರಾಜ್ಯ ಸರ್ಕಾರ ಒಂದು ಪೈಸೆ ಕೊಡುವುದು ಬೇಕಿರಲಿಲ್ಲ. ಆದರೂ ಅವರು ಪಟ್ಟಿ ಕೊಡಲಿಲ್ಲ. ಯಾಕೆಂದರೆ ಅದರಿಂದ ಅವರಿಗೆ ಲಾಭ ಆಗುತ್ತಿರಲಿಲ್ಲ. ಹಾಗಾಗಿ ಅವರು ಫಲಾನುಭವಿಗಳ ಪಟ್ಟಿಯನ್ನೂ ಕೊಡಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡಿದ್ದು, ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಸಂಕಷ್ಟಕ್ಕೆ ಸಿಲುಕಿತ್ತು. ಬಡವರ ಹೋರಾಟ ಮತ್ತು ನೋವನ್ನು ಕಾಂಗ್ರೆಸ್ ಎಂದಿಗೂ ಅರ್ಥಮಾಡಿಕೊಳ್ಳುವುದಿಲ್ಲ. ಕಾಂಗ್ರೆಸ್ ಕೇವಲ ಸೀಟುಗಳ ಬಗ್ಗೆ ಕಾಳಜಿ ವಹಿಸುತ್ತದೆಯೇ ಹೊರತು ರಾಜ್ಯದ ಜನರ ಬಗ್ಗೆ ಅಲ್ಲ. ರಾಜ್ಯದಲ್ಲಿನ ಅಭಿವೃದ್ಧಿಯನ್ನು ಕಾಂಗ್ರೆಸ್ ಕುಂಠಿತಗೊಳಿಸಿದೆ. ಅಭಿವೃದ್ಧಿಗೆ ಕಾಂಗ್ರೆಸ್ ಅಡ್ಡಗಾಲು ಹಾಕುತ್ತಿದ್ದು, ಬಿಜೆಪಿಯು ಬಡವರಿಗೆ ಮನೆ ಕಲ್ಪಸುವ ಯೋಜನೆಗೆ ವೇಗ ನೀಡಿದೆ. ಕರ್ನಾಟಕದಲ್ಲಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಟ್ಟಿದ್ದೇವೆ. ಡಬಲ್ ಎಂಜಿನ್ ಸರ್ಕಾರದಿಂದ ಇದು ಸಾಧ್ಯವಾಗಿದೆ. ಜಲ್​ಜೀವನ್​ ಮಿಷನ್​ ಯೋಜನೆಯಡಿ ದೇಶದಲ್ಲಿ 9  ಕೋಟಿ ಕುಟುಂಬಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಇಂದು ದೇಶದಲ್ಲಿ 9 ಕೋಟಿ ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ಕರ್ನಾಟಕದಲ್ಲಿಯೂ ಲಕ್ಷಾಂತರ ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸಲಾಗಿದೆ.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪಿಎಂ ಕಿಸಾನ್ ಸಮ್ಮಾನ್ ನಿಧಿಗೆ ರಾಜ್ಯ ಸರ್ಕಾರವೂ ಹಣ ಸೇರಿಸಿ ನೀಡಲಾರಂಭಿಸಿತು. ರಾಜಸ್ಥಾನದಲ್ಲಿ ಕಾಂಗ್ರೆಸ್​​ ಸರ್ಕಾರ ಸಾಲಮನ್ನಾ ಮಾಡುವುದಾಗಿ ಸುಳ್ಳು ಹೇಳಿ ರೈತರಿಗೆ ವಂಚನೆ ಮಾಡಿದೆ. ಇದು ಕಾಂಗ್ರೆಸ್​​ನ ಅಸಲೀ ಮುಖವಾಗಿದೆ.

ಎಥೆನಾಲ್ ಉತ್ಪಾದನೆ ಹೆಚ್ಚಿಸಲಾಗಿತ್ತು. ಅದರಿಂದ ರೈತರಿಗೆ ಲಾಭವಾಗಲಿದೆ. ಪೆಟ್ರೋಲ್ ಮೇಲಿನ ಅವಲಂಬನೆಯೂ ಕಡಿಮೆಯಾಗಲಿದೆ. ಸಿರಿಧಾನ್ಯದ ಮಹತ್ವದ ಬಗ್ಗೆ ಅರಿವು ಮೂಡಿಸಲು ಕ್ರಮ ಕೈಗೊಂಡಿದ್ದೇವೆ. ಇದರಿಂದಲೂ ರೈತರಿಗೆ ಪ್ರಯೋಜನವಾಗಿದೆ ಎಂದು ಹೇಳಿದರು. ಈ ವರೆಗೂ ಒಂಬತ್ತು ಲಕ್ಷ ಮನೆಗಳ ನಿರ್ಮಾಣ ಮಾಡಲಾಗಿದ್ದು, ಬೀದರ್ ಜಿಲ್ಲೆಯೊಂದರಲ್ಲೇ ಮೂವತ್ತು ಸಾವಿರ ಮನೆಗಳ ನಿರ್ಮಾಣವಾಗಿವೆ. ಮಹಿಳೆಯರ ಹೆಸರಲ್ಲಿ ಮನೆಗಳನ್ನು ನಿರ್ಮಾಣ ಮಾಡಿಕೊಡಲಾಗಿದೆ. ಇದು ಡಬಲ್ ಎಂಜಿನ್ ಸರ್ಕಾರದಿಂದ ಸಾಧ್ಯವಾಗಿದೆ ಎಂದು ಹೇಳಿದರು.

ಹಿಂದುಳಿದ ಸಮುದಾಯಗಳಿಗೆ ಕಾಂಗ್ರೆಸ್ ಸರ್ಕಾರ ಏನೂ ಮಾಡಿರಲಿಲ್ಲ. ನಾವು ಹಿಂದುಳಿದ ಸಮುದಾಯಗಳಿಗೆ ಭೂಮಿ ಹಕ್ಕು, ಮೀಸಲಾತಿ ನೀಡಿದ್ದೇವೆ. ನಮ್ಮ ಸರ್ಕಾರ ಕಂದಾಯ ಗ್ರಾಮ ಹಕ್ಕು ಪತ್ರ ವಿತರಣೆ ಮಾಡಿದೆ. ಕಾಂಗ್ರೆಸ್ ಪಕ್ಷ ಜಾತಿ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿದೆ. ಸಮಾಜದಲ್ಲಿ ಕಂದಕ ಸೃಷ್ಟಿಸುವ ಕೆಲಸ ಕಾಂಗ್ರೆಸ್​ ಮಾಡುತ್ತಿದೆ.

ಈ ಹಿಂದೆ ಹಳ್ಳಿಗಳಲ್ಲಿ ಶೌಚಾಲಯ ಇರಲಿಲ್ಲ, ಪ್ರತಿ ಮನೆಗೆ ಕುಡಿಯುವ ನೀರು ಬರುತ್ತಿರಲಿಲ್ಲ ಬಿಜೆಪಿ ಸರ್ಕಾರ ಇಂದು ಎಲ್ಲಾ ಮನೆಗಳಿಗೆ ಶೌಚಾಲಯ ನೀಡಿದೆ, ಪ್ರತಿ ಮನೆಗೆ ಕುಡಿಯುವ ನೀರು ಬರುತ್ತಿದೆ. ನಾನು ದೆಹಲಿಯಲ್ಲಿ ಕೂತಿರುವ ನಿಮ್ಮ ಮನೆ ಮಗ, ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದೇನೆಂದು ಹೇಳಿದರು.

ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್​​ನವರು ನನ್ನನ್ನು ನಿಂದಿಸುತ್ತಿದ್ದಾರೆ. 91 ಬಾರಿ ಕಾಂಗ್ರೆಸ್​​ನವರು ನನಗೆ ಬೈದಿದ್ದಾರೆ. ನನಗೆ ಬೈಯ್ಯುವುದರಲ್ಲೇ ಕಾಂಗ್ರೆಸ್​​ನವರು ಸಮಯ ವ್ಯರ್ಥ ಮಾಡುತ್ತಿದ್ದಾರೆ. ಒಳ್ಳೆಯ ಕೆಲಸ ಮಾಡುವವರನ್ನು ನಿಂದಿಸುವುದು ಕಾಂಗ್ರೆಸ್​​ನವರ ಚಾಳಿ. ಮೊದಲು ಚೌಕೀದಾರ್ ಚೋರ್ ಎಂದರು. ನನ್ನನ್ನು ನಿಂದಿಸಿದಾಗಲೆಲ್ಲ ಅವರಿಗೆ ಶಿಕ್ಷೆಯಾಗಿದೆ. ಡಾ.ಅಂಬೇಡ್ಕರ್​​ ಅವರನ್ನು ಕೂಡ ಕಾಂಗ್ರೆಸ್​​ನವರು ನಿಂದಿಸಿದ್ದಾರೆ. ಬಾಬಾ ಸಾಹೇಬ್ ಅವರನ್ನು ರಾಕ್ಷಸ, ರಾಷ್ಟ್ರದ್ರೋಹಿ ಎಂದಿದ್ದರು. ಅವರಂತ ಮಹಾನ್ ಪುರುಷರನ್ನೂ ಕಾಂಗ್ರೆಸ್​ ನಿಂದಿಸಿದೆ ಎಂದು ಆರೋಪಿಸಿದರು.

ಅವರು ನನ್ನನ್ನು ಬೈಯುತ್ತಿರಲಿ ನಾನು ದೇಶದ, ದೇಶದ ಜನರ ಸೇವೆಯನ್ನು ಮುಂದುವರೆಸುತ್ತೇನೆ. ಕಾಂಗ್ರೆಸ್‌ನವರು ಬೈದಾಗಲೆಲ್ಲಾ ಜನ ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಈ ಬಾರಿ ಕೂಡ ಅವರಿಗೆ ಜನ ಪಾಠ ಕಲಿಸಲಿದ್ದಾರೆ.

ಕರ್ನಾಟಕದಲ್ಲಿ ಡಬಲ್ ಎಂಜಿನ್ ಸರ್ಕಾರ ಬೇಕು. ಇದರಿಂದ ಮೂಲಸೌಕರ್ಯ, ವಿದೇಶಿ ಹೂಡಿಕೆ ಉತ್ತಮವಾಗಲಿದೆ. ಕರ್ನಾಟಕಕ್ಕೆ ಯಾಕೆ ಡಬಲ್ ಎಂಜಿನ್ ಸರ್ಕಾರ ಬೇಕೆಂದರೆ ಈ ರಾಜ್ಯ ಕಾಂಗ್ರೆಸ್ ಎಟಿಎಂ ಆಗಬಾರದು. ನನಗೆ ವಿಶ್ವಾಸವಿದೆ. ಮತಗಟ್ಟೆಗೆ ತೆರಳಿ ಕಮಲದ ಚಿಹ್ನೆಗೆ ಮತ ನೀಡಿ.

ಈ ಬಾರಿಯ ಮತ ಕರ್ನಾಟಕವನ್ನು ನಂಬರ್ 1 ಮಾಡಲು, ಅಮೃತ ಕಾಲಕ್ಕೆ ಕೊಡುಗೆ ನೀಡಲು ಎಂಬುದು ನೆನಪಿಡಿ. ನಿಮ್ಮ ಸೇವೆ ಮಾಡಲು ಆಶೀರ್ವಾದ ಮಾಡಿ. ಮೇ 10ರಂದು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಗೆ ಮತ ನೀಡಿ. ಕರ್ನಾಟಕದ ಜನರ ಸೇವೆ ಮಾಡಲು ಮತ್ತೊಮ್ಮೆ ಅವಕಾಶ ನೀಡಿ. ಹಗಲಿರುಳು ನಿಮ್ಮೆಲ್ಲರ ಸೇವೆಗೂ ನಾನು ಬದ್ಧನಾಗಿದ್ದೇನೆ. ನಿಮ್ಮ ಆಶೀರ್ವಾದದಿಂದ ಬೈಗುಳಗಳು ಮಣ್ಣಲ್ಲಿ ಮಣ್ಣಾಗುತ್ತೆ. ಎಷ್ಟು ಕೆಸರು ಎರಚುತ್ತಾರೋ ಅಷ್ಟು ಕಮಲ ಅರಳುತ್ತೆ. ನಿಮ್ಮ ಸೇವಕ ಮೋದಿಯಿಂದ ನಿಮಗೆಲ್ಲ ನಮಸ್ಕಾರಗಳು ಎಂದು ಹೇಳಿದರು.

ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ
ಇದಕ್ಕೂ ಮುನ್ನ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಲಿಂಗಾಯತ ನಾಯಕರನ್ನು ಭ್ರಷ್ಟರು ಎನ್ನುವ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಾಚಿಕೆಯಾಗಬೇಕು. ಅತ್ಯಂತ ಭ್ರಷ್ಟ ಸರ್ಕಾರ ರಾಜ್ಯ ಕಂಡಿರುವುದು ಸಿದ್ದರಾಮಯ್ಯನವರದ್ದು. ಕಡುಭ್ರಷ್ಟ ಸರ್ಕಾರ ಸಿದ್ದರಾಮಯ್ಯನವರದ್ದಾಗಿತ್ತು ಎಂದು ವಾಗ್ದಾಳಿ ನಡೆಸಿದರು.

ಮೋದಿ ಬಗ್ಗೆ ಖರ್ಗೆ ಅವರು ಕೆಟ್ಟ ಪದ ಬಳಸಿ ಟೀಕಿಸಿದರು. ಮೋದಿ ಎಂದರೆ ಕಾಂಗ್ರೆಸ್​​ಗೆ ಸೋಲು ಎಂದೇ ಅರ್ಥ. ಕಾಂಗ್ರೆಸ್​​ ನಾಯಕರು ಹತಾಶೆಯಿಂದ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ವಿಷವನ್ನು ಕುಡಿದು ಜನರಿಗೆ ಒಳಿತನ್ನು ಮಾಡುವ ನಾಯಕ ಮೋದಿ ಎಂದು ಬಣ್ಣಿಸಿದರು.

ಬಳಿಕ ಸರ್ಕಾರ ಸಾಧನೆಗಳ ಕುರಿತು ಮಾತನಾಡಿದ ಅವರು, ಕರ್ನಾಟಕಕ್ಕೆ 17 ಲಕ್ಷ ಮನೆಗಳನ್ನು ಮಂಜೂರು ಮಾಡಿದ್ದು ನರೇಂದ್ರ ಮೋದಿಯವರು. ಒಂದೇ ವರ್ಷದಲ್ಲಿ 40 ಲಕ್ಷ ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸಲಾಗಿದೆ. 12 ಲಕ್ಷ ಶೌಚಾಲಯ ನಿರ್ಮಾಣ ಮಾಡಲಾಗಿದೆ ಎರಡೂವರೆ ಲಕ್ಷ ಜನರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದರು.

ಡಬಲ್ ಎಂಜಿನ್ ಸರ್ಕಾರದಿಂದ ಗಮನಾರ್ಹ ಸಾಧನೆ ಮಾಡಿದ್ದೇವೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಮೋದಿ ವಿಶೇಷ ಕೊಡುಗೆಗಳನ್ನು ನೀಡಿದ್ದಾರೆ. ಕಲಬುರಗಿಯ ಮೆಗಾ ಟೆಕ್ಸ್​ಟೈಲ್ ಪಾರ್ಕ್​ನಿಂದಾಗಿ ಒಂದು ಲಕ್ಷ ಉದ್ಯೋಗ ಸೃಷ್ಟಿಯಾಗಿದೆ. ರಾಷ್ಟ್ರೀಯ ಹೆದ್ದಾರಿ, ರೈಲ್ವೆಗೆ ಹೆಚ್ಚಿನ ಕೊಡುಗೆ ನೀಡಿದ ಧೀಮಂತ ನಾಯಕ ಮೋದಿಯವರು ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com