ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ ಕುರಿತು ಮಾತುಕತೆ ನಡೆಸಿದ್ದಾರೆ.
ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಅಪಘಾತ ತಪ್ಪಿಸಲು ಪ್ರವೇಶ ಹಾಗೂ ನಿರ್ಗಮನ ಬೈಪಾಸ್ ಗಳನ್ನು ಒದಗಿಸಬೇಕು, ಜೊತೆಗೆ ರಸ್ತೆ ಬದಿ ಸೌಕರ್ಯಗಳನ್ನು ಕಲ್ಪಿಸುವಂತೆ ಮನವಿ ಮಾಡಿದ್ದು, ಹೆದ್ದಾರಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ತಜ್ಞರ ತಂಡವೊಂದನ್ನು ಹೆದ್ದಾರಿ ವೀಕ್ಷಣೆಗೆ ಕಳುಹಿಸಿ ಲೋಪ ದೋಷ ಸರಿಪಡಿಸುವುದಾಗಿ ಗಡ್ಕರಿ ಅವರು ತಿಳಿಸಿದರು ಎನ್ನಲಾಗಿದೆ.
ಇದೇ ವರ್ಷ ಉದ್ಘಾಟನೆಯಾದ 117 ಕಿಲೋ ಮೀಟರ್ ದೂರದ ಬೆಂಗಳೂರು - ಮೈಸೂರು ಎಕ್ಸ್ಪ್ರೆಸ್ ವೇ ನಲ್ಲಿ ಸಂಭವಿಸಿದ ಅಪಘಾತದಲ್ಲಿ ನೂರಾರು ಸಾವುಗಳು ಆಗಿವೆ. 350ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು - ಮೈಸೂರು ಹೆದ್ದಾರಿಯನ್ನು ಪರಿಶೀಲನೆ ನಡೆಸಿದ್ದರು. ರಸ್ತೆ ಸುರಕ್ಷತೆ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳ ಜೊತೆಗೆ ಸಭೆಯನ್ನು ನಡೆಸಿದ್ದರು.
ಇದೇ ಸಂದರ್ಭಲ್ಲಿ ಶಿರಾಡಿ ಘಾಟ್ ಸುರಂಗ ಮಾರ್ಗ, ಕೇರಳ- ಕರ್ನಾಟಕ ಗಡಿಯನ್ನು ಗುಂಡ್ಲುಪೇಟೆಯಿಂದ ಕೊಳ್ಳೇಗಾಲ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 766ರ ಅಗಲೀಕರಣ, ಮಳವಳ್ಳಿ ಮತ್ತು ಕೊಳ್ಳೇಗಾಲ ಮಾರ್ಗವಾಗಿ ಕನಕಪುರದಿಂದ ಕರ್ನಾಟಕ- ತಮಿಳುನಾಡು ಸಂಪರ್ಕ ಕಲ್ಪಿಸುವ 164.36 ಕಿ.ಮೀ ಉದ್ಧದ ರಸ್ತೆಯನ್ನು ಚತುಷ್ಪಥಕ್ಕೆ ವಿಸ್ತರಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅನುಮೋದನೆ ಸೇರಿದಂತೆ ಹಲವು ಯೋಜನೆಗಳ ಕುರಿತು ಮುಖ್ಯಮಂತ್ರಿಗಳು ಕೇಂದ್ರ ಸಚಿವರೊಂದಿಗೆ ಮಾತುಕತೆ ನಡೆಸಿದ್ದಾರೆ.
10 ಸಾವಿರ ಕೋಟಿ ರೂ. ಮೊತ್ತದ ವಾರ್ಷಿಕ ಯೋಜನೆಗಳಡಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅನುದಾನ ಮಂಜೂರಾತಿ ನೀಡಬೇಕು, ರಾಜ್ಯ ರಸ್ತೆ ಹಾಗೂ ಜಿಲ್ಲಾ ರಸ್ತೆಗಳ ಅಭಿವೃದ್ಧಿಗಾಗಿ 2023-24 ನೇ ಸಾಲಿನಲ್ಲಿ 1,000 ಕೋಟಿ ರೂ. ಕೇಂದ್ರ ರಸ್ತೆ ಮೂಲಸೌಕರ್ಯ ನಿಧಿ ಬಿಡುಗಡೆ ಮಾಡಬೇಕೆಂದು ಕೇಂದ ಸಚಿವರಲ್ಲಿ ಕೋರಿದ್ದಾರೆ. ಇದೇ ವೇಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಜರಿದ್ದರು.
ಇದಕ್ಕೂ ಮುನ್ನಾ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಎಸ್ ಟಿ ಸೇರಿದಂತೆ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಿದ್ದಾರೆ.
Advertisement