ಆಟೋ ರಿಕ್ಷಾ ಓವರ್‌ಟೇಕ್ ಮಾಡಿದ ಕೆಎಸ್​ಆರ್​ಟಿಸಿ ಬಸ್​​​ ಚಾಲಕನ ಮೇಲೆ ಹಲ್ಲೆ: ಮೂವರ ಬಂಧನ

ಆಟೋ ರಿಕ್ಷಾವನ್ನು ಓವರ್‌ಟೇಕ್ ಮಾಡಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕ ಸೇರಿ ಮೂವರನ್ನು ದೊಡ್ಡಬೆಳವಂಗಲ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಆಟೋ ರಿಕ್ಷಾವನ್ನು ಓವರ್‌ಟೇಕ್ ಮಾಡಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕ ಸೇರಿ ಮೂವರನ್ನು ದೊಡ್ಡಬೆಳವಂಗಲ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಆರೋಪಿಗಳನ್ನು ಆಟೋ ಚಾಲಕ ನರಸಿಂಹರಾಜು, ಆತನ ಸ್ನೇಹಿತರಾದ ಗೋವಿಂದರಾಜು ಮತ್ತು ಹನುಮಂತರಾಜು ಎಂದು ಗುರುತಿಸಲಾಗಿದೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಮಾದೇಶ್ವರ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನ ಚಾಲಕ ಪ್ರಸನ್ನಕುಮಾರ್ ಆಟೋ ರಿಕ್ಷಾವನ್ನು ಓವರ್ ಟೇಕ್ ಮಾಡಿದ್ದರು. ಇದರಿಂದ ಸಿಟ್ಟಿಗೆದ್ದ ನರಸಿಂಹರಾಜು ಮತ್ತು ಆತನ ಸ್ನೇಹಿತರು ಬಸ್ಸನ್ನು ಅಡ್ಡಗಟ್ಟಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದರು.

ಇದಕ್ಕೆ ಪ್ರಯಾಣಿಕರು ಅದನ್ನು ವಿರೋಧಿಸಿದರೂ, ಆರೋಪಿಗಳು ನಿಲ್ಲಿಸದೆ ಚಾಲಕನ ಮೇಲೆ ಹಲ್ಲೆ ನಡೆಸಿದ್ದರು. ತಡೆಯಲು ಯತ್ನಿಸಿದ ಪ್ರಯಾಣಿಕರ ಮೇಲೂ ಹಲ್ಲೆ ನಡೆಸಿದ್ದರು. ಘಟನೆ ಬಳಿಕ ಚಾಲಕ ನೀಡಿದ ದೂರಿನ ಅನ್ವಯ ಪೊಲೀಸರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಯನ್ನು ಪತ್ತೆ ಹಚ್ಚುವ ಕಾರ್ಯ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com