ಪ್ರಧಾನ ಮಂತ್ರಿ ಭೇಟಿ ವೇಳೆ 'ಅನ್ನ ಭಾಗ್ಯ' ಸೇರಿ ಕರ್ನಾಟಕದ ವಿಚಾರಗಳನ್ನು ಪ್ರಸ್ತಾಪಿಸದ ಸಿಎಂ ಸಿದ್ದರಾಮಯ್ಯ!

ದೆಹಲಿಗೆ ಹೋಗಿದ್ದ ಸಿಎಂ ಸಿದ್ದರಾಮಯ್ಯನವರು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ. 
ಪ್ರಧಾನ ಮಂತ್ರಿಗಳನ್ನು ದೆಹಲಿಯಲ್ಲಿ ಭೇಟಿ ಮಾಡಿ ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ
ಪ್ರಧಾನ ಮಂತ್ರಿಗಳನ್ನು ದೆಹಲಿಯಲ್ಲಿ ಭೇಟಿ ಮಾಡಿ ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದೆಹಲಿಗೆ ಹೋಗಿದ್ದ ಸಿಎಂ ಸಿದ್ದರಾಮಯ್ಯನವರು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ. 

ನಿನ್ನೆ ತಮ್ಮ 76ನೇ ಹುಟ್ಟುಹಬ್ಬ ಆಚರಿಸಿಕೊಂಡ ಸಿದ್ದರಾಮಯ್ಯನವರು ಅದೇ ದಿನ ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿದ್ದು ವಿಶೇಷವಾಗಿತ್ತು. 

ಇತ್ತೀಚೆಗೆ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ, ನಮ್ಮ ಬೇಡಿಕೆಯಂತೆ ರಾಜ್ಯಕ್ಕೆ ಅಕ್ಕಿ ಪೂರೈಸುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆದಿಯಾಗಿ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರವನ್ನು, ಪ್ರಧಾನ ಮಂತ್ರಿಗಳ ಕಡೆಗೆ ಬೊಟ್ಟು ಮಾಡಿ ಆರೋಪಿಸಿದ್ದರು.

ಹೀಗಾಗಿ ನಿನ್ನೆ ಪ್ರಧಾನಿ ಭೇಟಿ ವೇಳೆ ಅನ್ನಭಾಗ್ಯ ವಿಚಾರವನ್ನು ಸಿಎಂ ಪ್ರಸ್ತಾಪಿಸುತ್ತಾರೆಯೇ ಎಂಬ ಕುತೂಹಲವಿತ್ತು. ಆದರೆ ಸಿಎಂ ಅವರು ಪ್ರಧಾನಿಯವರನ್ನು ಕೇವಲ ಸೌಹಾರ್ದಯುತವಾಗಿ 5 ನಿಮಿಷಗಳ ಕಾಲ ಭೇಟಿ ಮಾಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಮುಂದಿನ ಭೇಟಿ ವೇಳೆ ರಾಜ್ಯಕ್ಕೆ ಸಂಬಂಧಿಸಿದ ಬೇಡಿಕೆಗಳ ಬಗ್ಗೆ ಸಿದ್ದರಾಮಯ್ಯನವರು ಪ್ರಧಾನಿಗಳ ಮುಂದೆ ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕದ ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ, ಹೆಗಲಿಗೆ ಶಾಲು ಹಾಕಿ ಮೈಸೂರು ದಸರಾ ಪಲ್ಲಕ್ಕಿ ವೈಭವವನ್ನು ಬಿಂಬಿಸುವ ಮರದ ಸ್ಮರಣಿಕೆಯನ್ನು ಉಡುಗೊರೆಯಾಗಿ ನೀಡಿದರು. 

ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡುವ ಮುನ್ನ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿಯವರು ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಟೀಕೆ ಮಾಡಿದ್ದರು. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದರೆ ರಾಜ್ಯ ದಿವಾಳಿಯಾಗುತ್ತದೆ ಎಂದಿದ್ದರು. ದೇಶದ ಆರ್ಥಿಕತೆಯನ್ನು ಹಾಳುಗೆಡವಿದ ಮೋದಿಯವರಿಗೆ ಕರ್ನಾಟಕ ಮಾದರಿ ಆಡಳಿತದ ಬಗ್ಗೆ ಗೊತ್ತಿಲ್ಲ ಎಂದು ಟೀಕಿಸಿದ್ದರು.

ಇದೇ ವೇಳೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಅವರು ಅಕ್ಟೋಬರ್‌ನಲ್ಲಿ ಮೈಸೂರಿನಲ್ಲಿ ದಸರಾ ಸಂದರ್ಭದಲ್ಲಿ ವೈಮಾನಿಕ ಪ್ರದರ್ಶನವನ್ನು ಆಯೋಜಿಸುವಂತೆ ಮನವಿ ಮಾಡಿದರು. ಅವರು ಕೇಂದ್ರ ಹಣಕಾಸು ಸಚಿವೆ ನಿರಾಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಜಿಎಸ್ಟಿ ಪರಿಹಾರ ಸಂಬಂಧಿತ ವಿಷಯಗಳ ಬಗ್ಗೆ ಚರ್ಚಿಸಿದರು. ಮುಂದಿನ ಭೇಟಿಯ ವೇಳೆ ರಾಜ್ಯದಿಂದ ಪ್ರತ್ಯೇಕ ಪ್ರಸ್ತಾವನೆ ಸಲ್ಲಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಅವರು ನಿನ್ನೆ ಗುರುವಾರ 76 ನೇ ವರ್ಷಕ್ಕೆ ಕಾಲಿಟ್ಟಿದ್ದು, ತಮ್ಮ ಎರಡು ದಿನಗಳ ಪ್ರವಾಸವನ್ನು ಮುಗಿಸುವ ಮೊದಲು ದೆಹಲಿಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಹುಟ್ಟುಹಬ್ಬ ಸಂಭ್ರಮವನ್ನು ಸರಳವಾಗಿ ಆಚರಿಸಿಕೊಂಡರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com