ಚಿತ್ರದುರ್ಗದ ಕವಾಡಿಗರಹಟ್ಟಿಗೆ ಆರೋಗ್ಯ ಸಚಿವ ಭೇಟಿ: ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ
ಚಿತ್ರದುರ್ಗ: ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಐವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಅಲ್ಲದೇ ಮೃತರ ಕುಟುಂಬಗಳಿಗೆ ಸರ್ಕಾರ ವತಿಯಿಂದ ತಲಾ 10 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಿದರು.
ನೀರು ಕಲುಷಿತಗೊಳ್ಳಲು ಕಾರಣ ಏನು ಎಂಬ ಬಗ್ಗೆ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಸೇರಿ ಹಲವರಿಂದ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ಸಂಗ್ರಹ ಮಾಡಿದ್ದಾರೆ.
ಕವಾಡಿಗರ ಹಟ್ಟಿಯಲ್ಲಿ ಜುಲೈ 31ರಂದು ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ 5ಕ್ಕೇರಿದ್ದು ಹಲವರು ಅಸ್ವಸ್ಥಗೊಂಡಿದ್ದಾರೆ. ಕಾವಾಡಿಗರ ಹಟ್ಟಿ ಜನರು ಸೇವಿಸಿದ ನೀರಿನ ಪ್ರಯೋಗಾಲಯ ವರದಿ ಬಂದಿದ್ದು, ಕಾಲರಾ ಮಾದರಿ ಅಂಶ ಪತ್ತೆಯಾಗಿತ್ತು ಎಂದು ವರದಿಯಾಗಿದೆ.
ಕುಡಿಯುವ ನೀರು ಕಲುಷಿತಗೊಳ್ಳಲು ಕಾರಣ ಮತ್ತು ಅಮಾಯಕರು ಜೀವ ಕಳೆದುಕೊಂಡಿರುವುದಕ್ಕೆ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದ್ದು, ಚಿತ್ರದುರ್ಗ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ನಗರಸಭೆ ಅಧಿಕಾರಿಗಳ ಮೇಲೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ