ಬೆಂಗಳೂರು: ಬಾಕಿ ಉಳಿದಿರುವ ಬಿಲ್ ಕುರಿತು ಬಿಬಿಎಂಪಿ ಗುತ್ತಿಗೆದಾರರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ, ಈ ಸಂಬಂಧ ವಿಚಾರಣೆ ನಡೆಸುತ್ತಿದ್ದು, ಕಾಮಗಾರಿ ಕೈಗೆತ್ತಿಕೊಂಡು ಪ್ರಾಮಾಣಿಕವಾಗಿ ಪೂರ್ಣಗೊಳಿಸಿರುವವರಿಗೆ ನ್ಯಾಯ ಒದಗಿಸಲಾಗುವುದು ಎಂದು ಹೇಳಿದರು.
ಬಿಬಿಎಂಪಿ ಗುತ್ತಿಗೆದಾರರ ಸಂಘವು ಇತ್ತೀಚೆಗಷ್ಟೇ ರಾಜ್ಯಪಾಲ ತಾವರಚಂದ್ ಗೆಹ್ಲೋಟ್, ಮಾಜಿ ಮುಖ್ಯಮಂತ್ರಿಗಳಾದ ಹೆಚ್ಡಿ ಕುಮಾರಸ್ವಾಮಿ, ಬಿಎಸ್ ಯಡಿಯೂರಪ್ಪ ಮತ್ತು ಇತರ ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಿ ಬಾಕಿ ಉಳಿದಿರುವ ಬಿಲ್ ಮಂಜೂರು ಮಾಡಿಸುವಂತೆ ಮನವಿ ಮಾಡಿದ್ದಾರೆ.
ಕಳೆದ 26 ತಿಂಗಳಿಂದ ಸರ್ಕಾರ ಬಿಲ್ಗಳನ್ನು ಬಾಕಿ ಉಳಿಸಿಕೊಂಡಿದೆ ಎಂದು ಬಿಬಿಎಂಪಿ ಗುತ್ತಿಗೆದಾರರ ಸಂಘವು ಆರೋಪಿಸಿದೆ.
'ಕಾನೂನಿನ ಪ್ರಕಾರ ತನಿಖೆ ನಡೆಯಬೇಕೆಂದು ನಾವು ಹೇಳಿದ್ದೇವೆ. ಅವರು (ಗುತ್ತಿಗೆದಾರರು) ದೂರು ನೀಡಿದ್ದಾರೆ. ಕೆಂಪಣ್ಣ (ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ) ಅವರು ಕೂಡ ಅಕ್ರಮಗಳ ಬಗ್ಗೆ ದೂರು ನೀಡಿದ್ದಾರೆ. ಎಲ್ಲರಿಗೂ ನ್ಯಾಯ ಸಿಗಬೇಕು. ಗುತ್ತಿಗೆದಾರರು ಕೈಗೆತ್ತಿಕೊಂಡ ಕೆಲಸಗಳಿಗೆ ನ್ಯಾಯ ಸಿಗಬೇಕು. ಪ್ರಚಾರಕ್ಕಾಗಿ ಯಾರು ಎಲ್ಲಿಗೆ ಬೇಕಾದರೂ ಹೋಗಲಿ. ಅವರನ್ನು (ಗುತ್ತಿಗೆದಾರರನ್ನು) ಯಾರು ದೆಹಲಿಗೆ ಕರೆಸುತ್ತಿದ್ದಾರೆ, ಮಾಧ್ಯಮಗಳ ಮುಂದೆ ಕಳುಹಿಸುತ್ತಿದ್ದಾರೆಂದು ನನಗೆ ತಿಳಿದಿದೆ. ಅವರು ಅದನ್ನು ಮಾಡಲಿ' ಎಂದು ಬೆಂಗಳೂರು ಅಭಿವೃದ್ಧಿ ಉಸ್ತುವಾರಿಯೂ ಆಗಿರುವ ಡಿಕೆ ಶಿವಕುಮಾರ್ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ತನಿಖೆಗೆ ಆದೇಶಿಸಿದ್ದೇವೆ. ಅವರು (ಗುತ್ತಿಗೆದಾರರು) ಮಾಡಿದ ಕೆಲಸವನ್ನು ಸಾಬೀತುಪಡಿಸಲಿ. ಪ್ರಾಮಾಣಿಕವಾಗಿ ಕೆಲಸ ಮಾಡಿದವರಿಗೆ ಸರ್ಕಾರ ನ್ಯಾಯ ಕೊಡಿಸಲಿದೆ ಎಂದರು.
'ನಗರದಲ್ಲಿ ಕೈಗೊಂಡ ಕಾಮಗಾರಿಗಳ ಬಿಲ್ಗಳ ಸತ್ಯಾಸತ್ಯತೆ ಪರಿಶೀಲಿಸಲು ಕಾಂಗ್ರೆಸ್ ಸರ್ಕಾರ ಎಸ್ಐಟಿ ರಚಿಸಿದ್ದು, ಆದರೆ, ಗುತ್ತಿಗೆದಾರರು ಇದು ಮತ್ತೆ ಬಿಲ್ ತೆರವುಗೊಳಿಸುವಲ್ಲಿ ವಿಳಂಬಕ್ಕೆ ಕಾರಣವಾಗಲಿದೆ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ ಮತ್ತು ಶೀಘ್ರವೇ ಬಿಲ್ ಪಾವತಿಸುವಂತೆ ಒತ್ತಾಯಿಸುತ್ತಿದ್ದಾರೆ.
ಬಾಕಿ ಬಿಲ್ಗಳ ತೆರವಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ನಿರ್ಧರಿಸಿದೆ.
Advertisement