
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದ್ದು, ಸಕಲ ಸಿದ್ಧೆತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
ಸಮಾರಂಭದ ಸಿದ್ಧತೆ ಕುರಿತು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಆಗಸ್ಟ್ 15 ರಂದು ಬೆಳಗ್ಗೆ 8.58 ಕ್ಕೆ ಮುಖ್ಯಮಂತ್ರಿಗಳು ಮೈದಾನದಕ್ಕೆ ಆಗಮಿಸಲಿದ್ದು, 9.00 ಗಂಟೆಗೆ ರಾಷ್ಟ್ರ ಧ್ವಜಾರೋಹಣ ಮಾಡಲಿದ್ದಾರೆ. ಧ್ವಜಾರೋಣದ ನಂತರ ಮಾನ್ಯ ಮುಖ್ಯಮಂತ್ರಿಗಳ ತೆರೆದ ಜೀಪಿನಲ್ಲಿ ಪೆರೇಡ್ ಪರಿವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕರಿಸಿ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶವನ್ನು ನೀಡಲಿದ್ದಾರೆ ಎಂದು ತಿಳಿಸಿದರು.
ವಿವಿಧ ಶಾಲೆಗಳ ಮಕ್ಕಳನ್ನೊಳಗೊಂಡಂತೆ ಒಟ್ಟು 38 ತುಕಡಿಗಳಲ್ಲಿ ಸುಮಾರು 1,350 ಮಂದಿ ಪಥ ಸಂಚಲನದಲ್ಲಿ ಭಾಗವಹಿಸಲಿದ್ದಾರೆ. ಪದ ದೇವರಾಜ್ ಅವರ ತಂಡದಿಂದ ನಾಡಗೀತೆ ಮತ್ತು ರೈತ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಬೆಂಗಳೂರು ದಕ್ಷಿಣ ವಲಯದ ಜೆ.ಪಿ.ನಗರದ ಕರ್ನಾಟಕ ಪಬ್ಲಿಕ್ ಶಾಲೆಯ 750 ಮಕ್ಕಳು “ವೀರ ನಮನ” ನೃತ್ಯ ಪ್ರದರ್ಶಿಸಲಿದ್ದಾರೆ.
ಬೆಂಗಳೂರು ಉತ್ತರ ವಲಯದ ಹೇರೋಹಳ್ಳಿಯ ಬಿ.ಬಿ.ಎಂ.ಪಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ 700 ಮಕ್ಕಳಿಂದ ‘ವೀರ ಭೂಮಿ ವಿಧುರಾಶ್ವತ್ಥ ಧ್ವಜ ಸತ್ಯಾಗ್ರಹ’ ಹಾಗೂ ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ 50 ಮಕ್ಕಳಿಂದ ‘ರೋಪ್ ಸ್ಕಿಪಿಂಗ್’ ಕಾರ್ಯಕ್ರಮ ಹಾಗೂ ಎಂ.ಇ. ಜಿ ಸೆಂಟರ್ ತಂಡದವರು “ಕಲಾರಿಪಯಟ್ಟು”, ಎ.ಎಸ್.ಸಿ ತಂಡದವರಿಂದ “ಟೆಂಟ್ ಪೆಗ್ಗಿಂಗ್” ಹಾಗೂ ಎ.ಎಸ್.ಸಿ ತಂಡ ಇವರಿಂದ “ಮೊಟರ್ ಸೈಕಲ್” ಸಾಹಸ ಪ್ರದರ್ಶನ ಮಾಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ವೀಕ್ಷಿಸಲು ಆಗಮಿಸುವ ಅತಿಗಣ್ಯ, ಗಣ್ಯ, ಇತರೆ ಸಾರ್ವಜನಿಕರಿಗೆ ಪ್ರತ್ಯೋಕ ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಯಾವುದೇ ಆಕಸ್ಕಿಕ ವಿಪತ್ತು ಸಂಭವಿಸಿದಲ್ಲಿ ಅಗತ್ಯವಿರುವಷ್ಟು ಆಂಬುಲೆನ್ಸ್, ವೈದ್ಯಕೀಯ ಹಾಗೂ ವೈದ್ಯಕೀಯೇತರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಹಾಗೂ ನಗರದ ಹಲವು ಆಸ್ಪತ್ರೆಗಳನ್ನು ಗುರುತಿಸಿ ಸಾಕಷ್ಟು ಸಂಖ್ಯೆಯಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಗಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸುಮಾರು 1,000 ಕ್ಕು ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆ ಕಾರ್ಯಕ್ಕೆ ನಿಯೋಜಿಸಲಾಗಿದೆ. 56 ಕ್ಯಾಮರಾ ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಮೈದಾನದ ಸುತ್ತ ಭದ್ರತೆ ಮತ್ತು ಸುರಕ್ಷತೆಗಾಗಿ 100 ಸಿಸಿ ಕ್ಯಾಮೆರಾ ವ್ಯವಸ್ಥೆ ಹಾಗೂ 3 ಬ್ಯಾಗೇಜ್ ಸ್ಕ್ಯಾನರ್ , 20 ಡಿ.ಎಫ್.ಎಂ.ಡಿ ಮತ್ತು 40 ಹೆಚ್. ಹೆಚ್.ಎಂ.ಡಿ ಗಳನ್ನು ಅಳವಡಿಸಲಾಗಿದೆ ಮತ್ತು ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆಗಳನ್ನು ಮಾಡಲಾಗಿದೆ. ಆಕಸ್ಕಿಕ ಬೆಂಕಿ ಅವಘಡಗಳನ್ನು ನಿಭಾಯಿಸಲು ಅಗ್ನಿ ಶಾಮಕ ವಾಹನಗಳೊಂದಿಗೆ ಸಾಕಷ್ಟು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರು ಪಾಸು ಮತ್ತು ಗುರುತಿನ ಚೀಟಿಯನ್ನು ಹೊಂದಿರಬೇಕು. ಪರ್ಸ್ ಮತ್ತು ಮೊಬೈಲ್ ಹೊರೆತುಪಡಿಸಿ ಬೇರೆ ಯಾವುದೇ ವಸ್ತುಗಳನ್ನು ಕಾರ್ಯಕ್ರಮಕ್ಕೆ ತರದಂತೆ ನಿಷೇಧಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಜನರು ಪೊಲೀಸರ ಭದ್ರತ ತಪಾಸಣೆಗೆ ಸಹಕರಿಸಬೇಕೆಂದು ಮನವಿ ಮಾಡಿದರು.
Advertisement