ಹಾಸನ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಿಗೆ ಸಿಬಿಐ ಕ್ಲೀನ್ ಚಿಟ್ ನೀಡಿದ್ದು, ಇದೀಗ ನ್ಯಾಯಾಲಯವಷ್ಟೇ ಮರು ತನಿಖೆಗೆ ಆದೇಶಿಸಬಹುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಸೋಮವಾರ ಹೇಳಿದರು.
ಕುಟುಂಬ ಸಮೇತ ಅರಸೀಕೆರೆ ತಾಲೂಕಿನ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಗಳ ದರ್ಶನ ಪಡೆದ ಬಳಿಕ ಮಾತನಾಡಿದ ಸಚಿವರು, ಸಿಬಿಐ ತನಿಖೆಯ ಬಳಿಕವೂ ಇನ್ನೂ ಬಾಕಿ ಏನು ಉಳಿಯಲು ಸಾಧ್ಯ? ಈ ಹಂತದಲ್ಲಿ ರಾಜ್ಯ ಸರ್ಕಾರದ ನಿಲುವಿನ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಮರು ತನಿಖೆಗೆ ಆಗ್ರಹಿಸುವವರು ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬಹುದು ಎಂದು ಹೇಳಿದರು.
ಇದೇ ವೇಳೆ ಗ್ಯಾರಂಟಿ ಯೋಜನೆಗಳು ರಾಜ್ಯದ ಅಭಿವೃದ್ಧಿಗೆ ಅಡ್ಡಿಯಾಗುತ್ತಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅಭಿವೃದ್ಧಿ ಯೋಜನೆಗಳ ಮೇಲೆ ಗ್ಯಾರಂಟಿ ಯೋಜನೆಗಳ ಪರಿಣಾಮ ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ಆರೋಪ ಕುರಿತು ಮಾತನಾಡಿ, ಎಸ್ಸಿ/ಎಸ್ಟಿಗಳು ಕೂಡ ಗ್ಯಾರಂಟಿ ಯೋಜನೆಗಳ ಅಡಿಯಲ್ಲಿ ಬರುವುದರಿಂದ ಎಸ್ಸಿಪಿ/ಟಿಎಸ್ಪಿ ಅನುದಾನವನ್ನು ಬಳಕೆಯಿಂದ ಯಾವುದೇ ಸಮಸ್ಯೆಗಳಾಗುವುದಿಲ್ಲ ಎಂದು ತಿಳಿಸಿದರು.
ಇತ್ತೀಚೆಗಷ್ಟೇ ದಕ್ಷಿಣ ಕನ್ನಡಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರು, ಸೌಜನ್ಯಾ ಪ್ರಕರಣ ಸಂಬಂಧ ಮಾತನಾಡಿದ್ದರು. ಪ್ರತಿಭಟನೆ ನಡೆಸುತ್ತಿರುವವರ ಬೇಡಿಕೆಯನ್ನು ಸರ್ಕಾರ ಮರುಪರಿಶೀಲಿಸಲಿದೆ ಎಂದು ಹೇಳಿದ್ದರು.
ನಿಜವಾದ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಸಿಬಿಐ ವಿಫಲವಾಗಿದೆ ಎಂದು ಪ್ರಗತಿಪರ ಸಂಘಟನೆಗಳ ಸದಸ್ಯರು ಮತ್ತು ರಾಜಕೀಯ ಪಕ್ಷಗಳ ಮುಖಂಡರು ಆರೋಪಿಸಿದ್ದಾರೆ.
ಪ್ರಕರಣ ಸಂಬಂಧ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಇತ್ತೀಚೆಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಪತ್ರದಲ್ಲಿ ಸಮಾಜದ ಒಂದು ವರ್ಗ ಮತ್ತು ರಾಜಕೀಯ ಪಕ್ಷಗಳು ಪವಿತ್ರ ಸ್ಥಳವನ್ನು ಗುರಿಯಾಗಿಸಿಕೊಂಡಿದ್ದು, ಸಮಸ್ಯೆಗೆ ಪರಿಹಾರ ನೀಡುವಂತೆ ಮನವಿ ಮಾಡಿಕೊಂಡಿದ್ದರು. ಅಲ್ಲದೆ, ಸರ್ಕಾರದ ಯಾವುದೇ ನಿರ್ಧಾರಕ್ಕೆ ಶ್ರೀ ಕ್ಷೇತ್ರ ಬದ್ಧವಾಗಿರುತ್ತದೆ ಎಂದೂ ಹೇಳಿದ್ದರು.
2012ರಲ್ಲಿ ಧರ್ಮಸ್ಥಳದ ಹೊರವಲಯದಲ್ಲಿ ಕಾಲೇಜಿನಿಂದ ಮನೆಗೆ ಹಿಂದಿರುಗುತ್ತಿದ್ದಾಗ 17 ವರ್ಷದ ಯುವತಿ ಸೌಜನ್ಯಾಳನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ ಮಾಡಲಾಗಿತ್ತು. ಅಂದಿನ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು.
Advertisement