ಸೆಪ್ಟೆಂಬರ್ ಮೊದಲ ವಾರದೊಳಗೆ ಬರ ಪರಿಶೀಲನೆ: ಕೃಷಿ ಸಚಿವ ಚೆಲುವರಾಯಸ್ವಾಮಿ
ಚಿತ್ರದುರ್ಗ: ರಾಜ್ಯದಲ್ಲಿ ಶೇ.99ರಷ್ಟು ಮಳೆ ಕೊರತೆಯಾಗಿದ್ದು, 130 ತಾಲೂಕುಗಳ ಬರ ಪರಿಸ್ಥಿತಿ ಕುರಿತು ವರದಿ ಸಲ್ಲಿಸಲು ಸೂಚಿಸಲಾಗಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಬರ ಘೋಷಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಮಂಗಳವಾರ ಹೇಳಿದರು.
ಚಿತ್ರದುರ್ಗ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದ ಜಮೀನುಗಳಿಗೆ ಭೇಟಿ ನೀಡಿ ಮಳೆ ಕೊರತೆಯಿಂದ ಹಾನಿಯಾಗಿರುವ ಮೆಕ್ಕೆಜೋಳ, ಶೇಂಗಾ ಹಾಗೂ ರಾಗಿ ಬೆಳೆಗಳನ್ನು ಸಚಿವರು ವೀಕ್ಷಿಸಿದರು. ಈ ವೇಳೆ ರೈತರಾದ ಸಾಲುಪಣ್ಣ, ಶಿವಮೂರ್ತಿ, ಈರಮ್ಮ, ನಾಗರಾಜಪ್ಪ ಅವರು ತಮ್ಮ ಸಂಕಷ್ಟವನ್ನು ಸಚಿವರೊಂದಿಗೆ ಹೇಳಿಕೊಂಡರು.
ಬಳಿಕ ಮಾತನಾಡಿದ ಸಚಿವರು, ಜಿಲ್ಲೆಗಳವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಬೆಳೆ ಪರಿಸ್ಥಿತಿ ಪರಿಶೀಲಿಸಲಾಗುವುದು. ನಂತರ ಆ.30ರಂದು ಸರಕಾರಕ್ಕೆ ವರದಿ ಸಲ್ಲಿಸಲಾಗುವುದು. ವರದಿ ಬಳಿಕ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಆಗಸ್ಟ್ನಲ್ಲಿ ಶೇ.99 ರಷ್ಟು ಮಳೆ ಕೊರತೆಯಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿರುವ 6.5 ಕೋಟಿ ಜನಸಂಖ್ಯೆಯ ಸಮಸ್ಯೆಗಳನ್ನು ಸರಕಾರ ನಿವಾರಿಸಲಿದ್ದು, ಫಲಾನುಭವಿಗಳ ಖಾತೆಗೆ ನೇರವಾಗಿ ಪರಿಹಾರ ಮೊತ್ತವನ್ನು ಜಮಾ ಮಾಡಲಿದೆ. ಬರಗಾಲ ಘೋಷಣೆಗೆ ಷರತ್ತುಗಳನ್ನು ಸಡಿಲಿಸುವಂತೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ, ಆದರೆ, ಕೇಂದ್ರದಿಂದ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ. ಪರಿಹಾರವನ್ನು ವಿತರಿಸುವ ಮಾರ್ಗಸೂಚಿಗಳನ್ನು ಸರಳೀಕರಿಸಲು ನಾವೂ ಪ್ರಯತ್ನಿಸುತ್ತಿದ್ದೇವೆಂದು ತಿಳಿಸಿದರು.
ಚಿತ್ರದುರ್ಗ ತಾಲೂಕಿನ ಲಕ್ಷ್ಮೀಸಾಗರ ಗ್ರಾಮಕ್ಕೆ ಭೇಟಿ ನೀಡಿದ ಅವರು, ಮಳೆ ಕೊರತೆಯಿಂದ ನೆಲಕಚ್ಚಿರುವ ಮೆಕ್ಕೆಜೋಳ, ಶೇಂಗಾ, ಹತ್ತಿ, ರಾಗಿ ಮತ್ತಿತರ ಬೆಳೆಗಳನ್ನು ಪರಿಶೀಲಿಸಿದರು.
ಚಿತ್ರದುರ್ಗ ಜಿಲ್ಲೆಯಲ್ಲಿ ಶೇ.93ರಷ್ಟು ಬಿತ್ತನೆಯಾಗಿದೆ. ಆದರೆ ಸಂಪೂರ್ಣವಾಗಿ ಮಳೆ ಕೈಕೊಟ್ಟಿದೆ. ಮಳೆ ಕೊರತೆ ಕಂಡುಬಂದರೆ ಬರ ಎಂದು ಘೋಷಣೆ ಮಾಡಲಾಗುತ್ತದೆ. ವಾಸ್ತವ ಸ್ಥಿತಿ ತಿಳಿಯುವ ಸಲುವಾಗಿ ಜಿಲ್ಲಾ ಧಿಕಾರಿ ನೇತೃತ್ವದಲ್ಲಿ ಅಂತರ್ ಇಲಾಖೆ ಸಮೀಕ್ಷೆ ನಡೆಸಿ ವಸ್ತುಸ್ಥಿತಿಯ ವರದಿ ನೀಡಲು ಸೂಚನೆ ನೀಡಲಾಗಿದೆ. ಮೊದಲಿನಿಂದಲೂ ಚಿತ್ರದುರ್ಗ ಕಡಿಮೆ ಮಳೆ ಬೀಳುವ ಪ್ರದೇಶ. ರಾಜ್ಯದ ಮಧ್ಯ ಭಾಗದಲ್ಲಿರುವ ಜಿಲ್ಲೆಯ ರೈತರ ಸ್ಥಿತಿ ಅರಿಯುವ ಸಲುವಾಗಿಯೇ ಜಿಲ್ಲಾ ಮಂತ್ರಿಗಳು ಹಾಗೂ ಸ್ಥಳೀಯ ಶಾಸಕರನ್ನು ಸಂಪರ್ಕಿಸಿ ಜಿಲ್ಲಾ ಪ್ರವಾಸ ಕೈಗೊಂಡಿದ್ದೇನೆ ಎಂದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ