ಚಾಮರಾಜನಗರ: ಸಾಂಕ್ರಾಮಿಕ ರೋಗ ಕೋವಿಡ್ ಉಲ್ಬಣಗೊಂಡ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ್ದ ಆಕ್ಸಿಜನ್ ದುರಂತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡುವ ಪ್ರಸ್ತಾವನೆ ಸರ್ಕಾರ ಮುಂದಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಶುಕ್ರವಾರ ಹೇಳಿದ್ದಾರೆ.
ನಿನ್ನೆಯಷ್ಟೇ ಶಿಲ್ಪಾ ನಾಗ್ ಅವರು ಸಂತ್ರಸ್ತ ಕುಟುಂಬ ಸದಸ್ಯರು ಹಾಗೂ ಎಸ್ಡಿಪಿಐ ಪದಾಧಿಕಾರಿಗಳೊಂದಿಗೆ ಸಂವಾದ ನಡೆಸಿದರು.
ಈ ವೇಳೆ ಮಾತನಾಡಿರುವ ಅವರು, ಆರಂಭದಲ್ಲಿ ಜಿಲ್ಲಾಡಳಿತವು 24 ಮಂದಿಯಿಂದ್ದ ಪಟ್ಟಿಯನ್ನು ಸರ್ಕಾರಕ್ಕೆ ಕಳುಹಿಸಿತ್ತು. ನಂತರ 32 ಮಂದಿಯುಳ್ಳ ಪರಿಷ್ಕೃತ ಪಟ್ಟಿಯನ್ನು ರವಾನಿಸಿದೆ. ಇವರಿಗೆ ಲಭ್ಯವಿರುವ ಖಾಲಿ ಹುದ್ದೆಗಳ ಆಧಾರದ ಮೇಲೆ ಆರೋಗ್ಯ ಮತ್ತು ಇತರ ಇಲಾಖೆಗಳಲ್ಲಿ ಅವಕಾಶ ಕಲ್ಪಿಸುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದರು.
ಅಗತ್ಯ ದಾಖಲೆಗಳೊಂದಿಗೆ ವಿನಂತಿಗಳನ್ನು ಒದಗಿಸಿದರೆ ಸಂತ್ರಸ್ತರ ಸಂಬಂಧಿಕರಿಗೆ ಸೂಕ್ತ ಉದ್ಯೋಗಗಳ ನೀಡಲಾಗುವುದು ಎಂದು ಭರವಸೆ ನೀಡಿದರು.
ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಬ್ರಾರ್ ಅಹ್ಮದ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮರಾಜನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಆಕ್ಸಿಜನ್ ದುರಂತ ಪ್ರಕರಣವನ್ನು ವಿಶೇಷವೆಂದು ಪರಿಗಣಿಸಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಕೊಟ್ಟ ಮಾತಿನಂತೆ ಸರ್ಕಾರ ಸಂತ್ರಸ್ತ ಕುಟುಂಬಗಳಿಗೆ ಶೀಘ್ರಗತಿಯಲ್ಲಿ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದರು.
Advertisement