ಭ್ರೂಣ ಹತ್ಯೆ ದಂಧೆ ಪ್ರಕರಣದಲ್ಲಿ ಆರೋಗ್ಯಾಧಿಕಾರಿಗಳೂ ಭಾಗಿ: ಸಚಿವ ದಿನೇಶ್ ಗುಂಡೂರಾವ್

ಭ್ರೂಣ ಹತ್ಯೆ ದಂಧೆಯಲ್ಲಿ ಆರೋಗ್ಯ ಇಲಾಖೆಯ ಕೆಲವು ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಹೇಳಿದರು.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು/ಬೆಂಗಳೂರು: ಭ್ರೂಣ ಹತ್ಯೆ ದಂಧೆಯಲ್ಲಿ ಆರೋಗ್ಯ ಇಲಾಖೆಯ ಕೆಲವು ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಹೇಳಿದರು.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಮತ್ತು ಮೈಸೂರಿಗೆ ಭೇಟಿ ನೀಡಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳ ಕುರಿತು ಮಾಹಿತಿ ಸಂಗ್ರಹಿಸಿದ್ದೇನೆ. ಬೆಂಗಳೂರು ಮತ್ತು ಇತರ ಜಿಲ್ಲೆಗಳಲ್ಲಿ ನಡೆಯುತ್ತಿರುವ ದಂಧೆ ಕುರಿತು ಸಿಐಡಿ ತನಿಖೆ ನಡೆಸುತ್ತಿದೆ. ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಗ್ಯಾಧಿಕಾರಿಗಳನ್ನು ಅಮಾನತು ಮಾಡಲಾಗಿದೆ. "ಆತ್ಮಹತ್ಯೆ ಮಾಡಿಕೊಂಡ ಆಯುಷ್ ಅಧಿಕಾರಿ ಸತೀಶ್ ಈ ದಂಧೆಯಲ್ಲಿ ಭಾಗಿಯಾಗಿದ್ದಾರೆಯೇ ಎಂಬುದು ಖಚಿತವಾಗಿಲ್ಲ" ಎಂದು ಹೇಳಿದರು.

ಹೆಣ್ಣು ಭ್ರೂಣ ಹತ್ಯೆಯ ವಿರುದ್ಧ ಕಾನೂನನ್ನು ಬಲಪಡಿಸುವ ಮಾರ್ಗೋಪಾಯಗಳ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಏತನ್ಮಧ್ಯೆ, ಮಂಡ್ಯ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ 55 ವರ್ಷದ ವೈದ್ಯರೊಬ್ಬರು ಶುಕ್ರವಾರ ರಾತ್ರಿ ಬೆಂಗಳೂರಿನ ಮಹಾಲಕ್ಷ್ಮಿಪುರಂ ಪೊಲೀಸ್ ವ್ಯಾಪ್ತಿಯ ನಾಗಪುರದಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಕುಣಿಗಲ್ ಮೂಲದ ಡಾ.ಎಸ್.ಆರ್.ನಟರಾಜ್ ಅವರು ಮಂಡ್ಯದಲ್ಲಿ ಕೆಲಸ ಮಾಡುತ್ತಿದ್ದರು. ದಂಧೆಯಲ್ಲಿ ಅವರ ಪಾತ್ರವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ದಂಧೆಗೆ ಸಂಬಂಧಿಸಿದಂತೆ ಕೆಲವು ವೈದ್ಯರನ್ನು ಬಂಧಿಸಿದ ನಂತರ ಡಾ.ನಟರಾಜ್ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ.

ಮೈಸೂರು-ಕೊಡಗು ರಸ್ತೆಯ ಆನೆಕಾಡ್ ಬಳಿ ಕಾರಿನಲ್ಲಿ ಶವವಾಗಿ ಪತ್ತೆಯಾಗಿರುವ ಡಾ.ಸತೀಶ್ ಮೈಸೂರಿನ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದು, ಶಿವಳ್ಳಿಯಲ್ಲಿ ಕ್ಲಿನಿಕ್ ನಡೆಸುತ್ತಿದ್ದರು. ಡಾ.ನಟರಾಜ್ ಮತ್ತು ಡಾ.ಸತೀಶ್ ದಂಧೆಯಲ್ಲಿ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಈ ನಡುವೆ ದಂಧೆಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಮೈಸೂರಿನಲ್ಲಿ ನರ್ಸ್ ಒಬ್ಬರನ್ನು ಬಂಧಿಸಿದ್ದಾರೆ. ಇದರೊಂದಿಗೆ ದಂಧೆಯಲ್ಲಿ ಬಂಧಿತರಾದವರ ಸಂಖ್ಯೆ 10ಕ್ಕೇರಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com