ಬೆಂಗಳೂರು: ಅತ್ತೆಯ ಕಿರುಕುಳ ತಾಳಲಾರದೆ ನವವಿವಾಹಿತ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹದೇವಪುರದಲ್ಲಿ ನಡೆದಿದೆ.
ಅನುಷಾ (23) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಗದೂರು ಗ್ರಾಮದ ಅನುಷಾ, ಪಕ್ಕದ ಊರಿನ ಪ್ರವೀಣ್ ಎಂಬುವವರೊಂದಿಗೆ 2 ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು.
ಈಕೆ ಪಿಯುಸಿ ವ್ಯಾಸಂಗ ಮಾಡಿದ್ದರೆ, ಪ್ರವೀಣ್ ಮಹದೇವಪುರದ ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡಿಕೊಂಡು ಸಿಂಗಯ್ಯನಪಾಳ್ಯದಲ್ಲಿ ನೆಲೆಸಿದ್ದ. ಊರಿಗೆ ಹೋಗಿಬರುವುದನ್ನು ಮಾಡುತ್ತಿದ್ದ. ಒಂದು ವರ್ಷದಿಂದ ಅನುಷಾ ಪರಿಚಯವಾಗಿ ಪರಸ್ಪರ ಪ್ರೀತಿಸುತ್ತಿದ್ದರು. ಈಕೆ ಪಾಲಕರ ವಿರೋಧದ ನಡುವೆಯೂ 2 ತಿಂಗಳ ಹಿಂದೆ ಮನೆ ಬಿಟ್ಟು ಬಂದು ಪ್ರವೀಣ್ ಜತೆ ಮದುವೆ ಆಗಿ ಸಿಂಗಯ್ಯನಪಾಳ್ಯದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಇವರ ಜತೆಗೆ ಪ್ರವೀಣ್ ತಾಯಿ ನಾಗಮ್ಮ ಇದ್ದರು. ಅನುಷಾ ಮನೆಯಲ್ಲೇ ಇದ್ದಳು.
ಇದನ್ನೂ ಓದಿ: ಬೆಂಗಳೂರು: ಪ್ರತ್ಯೇಕ ಅಪಘಾತದಲ್ಲಿ ಮೂವರ ದುರ್ಮರಣ
ಮನೆ ಕೆಲಸಗಳನ್ನು ಮಾಡುತ್ತಿಲ್ಲ ಎಂದು ಅತ್ತೆ ಕಿರುಕುಳ ನೀಡುತ್ತಿದ್ದರು. ಅಲ್ಲದೆ, ಬೇರೆ ಬೇರೆ ವಿಚಾರಗಳನ್ನು ಹಿಡಿದು ಜಗಳ ಮಾಡುತ್ತಿದ್ದರು. ಇದರಿಂದ ಬೇಸತ್ತು ಪುತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ಅನುಷಾ ಪೋಷಕರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ್ ಸಂಜೆ 5 ಗಂಟೆ ಸುಮಾರಿಗೆ ಮನೆಗೆ ಬಂದು ನೋಡಿದಾಗ ಅನುಷಾ ಶವವಾಗಿ ಪತ್ತೆಯಾಗಿದ್ದಾಳೆ. ಪ್ರವೀಣ್ ಅನುಷಾಳನ್ನು ವೈದೇಹಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ವೈದ್ಯರು ಆಕೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.
Advertisement