ಬೆಂಗಳೂರು: ಬರಗಾಲದಿಂದ ಸಂಕಷ್ಟದಲ್ಲಿರುವ ರೈತರಿಂದ ಬಲವಂತದ ಸಾಲ ವಸೂಲಾತಿಯನ್ನು ನಿಲ್ಲಿಸಿ ಹೊಸ ಸಾಲ ನೀಡಬೇಕು ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ರೈತರು ಸಂಕಷ್ಟದಲ್ಲಿದ್ದಾರೆ. ಆದರೆ ರಾಜ್ಯ ಸರ್ಕಾರ ಪರಿಹಾರ ಬಿಡುಗಡೆ ಮಾಡದೆ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಿದೆ. ಹಿಂದಿನ ಬಿಜೆಪಿ ಸರ್ಕಾರ ಪ್ರವಾಹ ಸಂದರ್ಭದಲ್ಲಿ ರೈತರಿಗೆ 2,000 ಕೋಟಿ ರೂ.ಗಳನ್ನು ಡಿಬಿಟಿ ಮೂಲಕ ವಿತರಿಸಿತ್ತು ಎಂದು ತಿಳಿಸಿದರು.
ರಾಜ್ಯ ಸರಕಾರ ಪ್ರತಿ ರೈತನಿಗೆ 2 ಸಾವಿರ ರೂ.ನೀಡುವುದಾಗಿ ಭರವಸೆ ನೀಡಿರುವುದು ರೈತರಿಗೆ ಮಾಡಿದ ಅವಮಾನವಲ್ಲದೆ ಮತ್ತೇನೂ ಅಲ್ಲ. ಕೇಂದ್ರದ ಮಾರ್ಗಸೂಚಿಗಳ ಪ್ರಕಾರ ಒಣ ಬೇಸಾಯಕ್ಕೆ ಪ್ರತಿ ಹೆಕ್ಟೇರ್ಗೆ 6,000 ರೂಪಾಯಿ ಮತ್ತು ನೀರಾವರಿ ಭೂಮಿಗೆ 18,000 ರೂಪಾಯಿ ಪರಿಹಾರವನ್ನು ರಾಜ್ಯವು ಘೋಷಿಸಬೇಕು ಎಂದು ಆಗ್ರಹಿಸಿದ ಅವರು, ಬಿಜೆಪಿ ಸರ್ಕಾರ ಆರಂಭಿಸಿದ ಕಿಸಾನ್ ಸಮ್ಮಾನ್ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಐಸಿಸ್ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಲಾಗಿರುವ ಧರ್ಮಗುರುಗಳ ಜೊತೆ ಸಿಎಂ ವೇದಿಕೆ ಹಂಚಿಕೊಂಡಿರುವ ಬಗ್ಗೆ ಎನ್ಐಎ ತನಿಖೆಗೆ ಸರ್ಕಾರ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿದ ಬೊಮ್ಮಾಯಿ, ವಿಜಯಪುರದಲ್ಲಿ ಉದ್ರೇಕಕಾರಿ ಭಾಷಣ ಮಾಡಿದ್ದಕ್ಕಾಗಿ ಮೌಲ್ವಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ಡಿಕೆ ಶಿವಕುಮಾರ್ ಗೈರು ಹಾಜರಿ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ಡಿಸಿಎಂ ತೆಲಂಗಾಣ ರಾಜಕೀಯದಲ್ಲಿ ಬ್ಯುಸಿಯಾಗಿದ್ದು, ಜನರ ಸಮಸ್ಯೆಗಳು ಅಥವಾ ರಾಜಕೀಯ ಯಾವುದು ಮುಖ್ಯ ಎಂಬುದನ್ನು ಅವರೇ ಹೇಳಬೇಕು ಎಂದು ಹೇಳಿದರು.
Advertisement