ಬೆಳಗಾವಿ: ಬೆಂಗಳೂರಿನಲ್ಲಿ ನಾಗರಿಕ ಸಂಸ್ಥೆಗಳಿಗೆ ಸೇರಿದ ಸಾರ್ವಜನಿಕ ಆಸ್ತಿಗಳನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಉದ್ಯಾನಗಳನ್ನು ಅತಿಕ್ರಮಿಸಿಕೊಂಡಿರುವ ಕುರಿತು ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರ ಪ್ರಶ್ನೆಗೆ ಉತ್ತರಿಸಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್, ರಾಜ್ಯ ರಾಜಧಾನಿಯಲ್ಲಿ ಹೊಸ ತಂತ್ರಜ್ಞಾನದೊಂದಿಗೆ ಆಸ್ತಿಗಳ ಮ್ಯಾಪಿಂಗ್ ಮಾಡಲು ಸರ್ಕಾರ ಆದೇಶಿಸಿದೆ ಎಂದರು.
ಎಲ್ಲಾ ಸರ್ಕಾರಿ ಆಸ್ತಿಗಳನ್ನು ಸಾರ್ವಜನಿಕರ ಒಳಿತಿಗಾಗಿ ಮಾತ್ರ ಬಳಸಲಾಗುತ್ತದೆ. ನಿರ್ದಿಷ್ಟ ಅತಿಕ್ರಮಣಕ್ಕೆ ಸಂಬಂಧಿಸಿದ ದಾಖಲೆಗಳಿದ್ದರೆ ದಯವಿಟ್ಟು ನಮಗೆ ನೀಡಿ. ತಕ್ಷಣವೇ ಕ್ರಮ ಕೈಗೊಳ್ಳುತ್ತೇವೆ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಉದ್ಯಾನಗಳ ಒತ್ತುವರಿ ಪ್ರಕರಣಗಳು ಹೆಚ್ಚಾಗಿವೆ ಎಂಬ ಆರೋಪಕ್ಕೆ ಉತ್ತರಿಸಿದ ಅವರು, ವಾರ್ಡ್ ಸಂಖ್ಯೆ 73ರಲ್ಲಿನ ಸರ್ವೆ ನಂಬರ್ 19ರ ಒತ್ತುವರಿ ಕುರಿತು ನಿರ್ದಿಷ್ಟ ವಿಷಯವನ್ನು ನೀವು ಪ್ರಸ್ತಾಪಿಸಿದ್ದೀರಿ. ಈ ಆಸ್ತಿ ತನಗೆ ಸೇರಿದ್ದು ಎಂದು ವ್ಯಕ್ತಿಯೊಬ್ಬರು ಕೆಳ ನ್ಯಾಯಾಲಯದ ಆದೇಶವನ್ನು ಪಡೆದಿರುವ ಬಗ್ಗೆ ನನಗೆ ಮಾಹಿತಿ ಇದೆ. ಶೀಘ್ರದಲ್ಲೇ ಈ ಒತ್ತುವರಿಯನ್ನು ತೆರವುಗೊಳಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಕೆಲವು ಜನರು ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಮತ್ತು ಪ್ರಭಾವಿ ರಾಜಕಾರಣಿಗಳ ಸಂಪರ್ಕವನ್ನು ಬಳಸಿಕೊಂಡು ಪ್ರಮೋದ್ ಲೇಔಟ್ನಲ್ಲಿ ಸರ್ಕಾರಿ ಆಸ್ತಿಗಳನ್ನು ಅತಿಕ್ರಮಣ ಮಾಡಿಕೊಳ್ಳುತ್ತಿದ್ದಾರೆ ಎಂದು ಮುನಿರತ್ನ ಆರೋಪಿಸಿದರು.
Advertisement