ನವದೆಹಲಿ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಬಿಳಿಜೋಳ ಹಾಗೂ ಅಕ್ಕಿ ಸರಬರಾಜು ಮಾಡಿರುವ ರಾಜ್ಯದ ಏಜೆನ್ಸಿಗಳಿಗೆ ಕೇಂದ್ರ ಸರ್ಕಾರ ರೂ.2,040 ಕೋಟಿ ಉಳಿಸಿಕೊಂಡಿದ್ದು, ಅದನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಆಗ್ರಹಿಸಿದೆ.
ಈ ಸಂಬಂಧ ಆಹಾರ ಮತ್ತು ನಾಗರಿಕ ವ್ಯವಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪೀಯೂಷ್ ಗೋಯಲ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
2009–10ರಿಂದಲೂ ಕೇಂದ್ರ ಸರ್ಕಾರವು ರಾಜ್ಯದ ಏಜೆನ್ಸಿಗಳ ಹಣವನ್ನು ಪೂರ್ಣ ಪ್ರಮಾಣದಲ್ಲಿ ಪಾವತಿಸಿಲ್ಲ. ಈ ವಿಳಂಬವು "ರಾಜ್ಯದ ಮೇಲೆ ಅನಗತ್ಯ ಆರ್ಥಿಕ ಹೊರೆಯನ್ನು ಉಂಟುಮಾಡಿದೆ ಎಂದು ಹೇಳಿದ್ದಾರೆ.
ಈ ವರ್ಷ ಹೈಬ್ರಿಡ್ ಜೋಳಕ್ಕೆ ಕನಿಷ್ಠ ಬೆಂಬಲ ಬೆಲೆಯನ್ನು ಕ್ವಿಂಟಲ್ಗೆ ರೂ.3,180 ಹಾಗೂ ಮಾಲ್ಡಂಡಿ ಜೋಳಕ್ಕೆ ಕ್ವಿಂಟಲ್ಗೆ ರೂ.3,225 ನಿಗದಿ ಮಾಡಲಾಗಿದೆ. ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದು, ಮಾಲ್ಡಂಡಿ ಜೋಳಕ್ಕೆ ಕನಿಷ್ಠ ಬೆಂಬಲ ಬೆಲೆಯನ್ನು ರೂ.4,500 ನಿಗದಿ ಮಾಡಬೇಕು. ಈ ಮೂಲಕ ರಾಜ್ಯದ ರೈತರ ನೆರವಿಗೆ ಧಾವಿಸಬೇಕು’ ಎಂದು ಮನವಿ ಮಾಡಿದ್ದಾರೆ.
Advertisement