ಎತ್ತಂಗಡಿ ಮಾಡುವುದು ಬಿಟ್ಟು ನಮಗೆ ಗುರುತಿನ ಚೀಟಿ ನೀಡಿ: ಬಿಬಿಎಂಪಿಗೆ ಬೀದಿ ವ್ಯಾಪಾರಿಗಳ ಆಗ್ರಹ

ಬೀದಿ ಬದಿ ವ್ಯಾಪಾರಿಗಳ ಎತ್ತಂಗಡಿ ಮಾಡುತ್ತಿರುವುದನ್ನು ನಿಲ್ಲಿಸಿ, ನಮಗೆ ಗುರುತಿನ ಚೀಟಿ ನೀಡಿ ಎಂದು ಬಿಬಿಎಂಪಿಗೆ ಬೀದಿ ವ್ಯಾಪಾರಿಗಳು ಮಂಗಳವಾರ ಆಗ್ರಹಿಸಿದ್ದಾರೆ.
ನಗರದ ವಿವಿಧೆಡೆಯ ಬೀದಿ ವ್ಯಾಪಾರಿಗಳು ಮಂಗಳವಾರ ಬಿಬಿಎಂಪಿ ಕೇಂದ್ರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಗರದ ವಿವಿಧೆಡೆಯ ಬೀದಿ ವ್ಯಾಪಾರಿಗಳು ಮಂಗಳವಾರ ಬಿಬಿಎಂಪಿ ಕೇಂದ್ರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳ ಎತ್ತಂಗಡಿ ಮಾಡುತ್ತಿರುವುದನ್ನು ನಿಲ್ಲಿಸಿ, ನಮಗೆ ಗುರುತಿನ ಚೀಟಿ ನೀಡಿ ಎಂದು ಬಿಬಿಎಂಪಿಗೆ ಬೀದಿ ವ್ಯಾಪಾರಿಗಳು ಮಂಗಳವಾರ ಆಗ್ರಹಿಸಿದ್ದಾರೆ.

ನಗರದಲ್ಲಿ ಬೀದಿಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸದೆ ಜೀವನೋಪಾಯಕ್ಕಾಗಿ ನಡೆಸುತ್ತಿರುವ ವಹಿವಾಟನ್ನು ಮುಂದುವರಿಸಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿ ನಿನ್ನೆಯಷ್ಟೇ ಸ್ಟ್ರೀಟ್ ವೆಂಡರ್ಸ್‌ ಅಸೋಸಿಯೇಷನ್ ಆಶ್ರಯದಲ್ಲಿ ವ್ಯಾಪಾರಿಗಳು ಮಂಗಳವಾರ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಬೀದಿ ವ್ಯಾಪಾರಿಗಳ ಒಕ್ಕೂಟದ ಅಧ್ಯಕ್ಷ ಎಸ್.ಬಾಬು ಅವರು, ಪಾಲಿಕೆ ಅಧಿಕಾರಿಗಳು ಬೀದಿ ಬದಿ ಇರುವ ಅಂಗಡಿಗಳನ್ನು ಬಲವಂತವಾಗಿ ತೆರವು ಮಾಡುತ್ತಿದ್ದಾರೆ. ಕೆಲವೆಡೆ ಸಾರ್ವಜನಿಕರಿಗೆ ತೊಂದರೆ ಉಂಟಾಗದಿದ್ದರೂ, ಇಲ್ಲದ ನೆಪ ಹೇಳಿ ಒಕ್ಕಲೆಬ್ಬಿಸಲಾಗುತ್ತಿದೆ. ಇದರಿಂದ ಬಡವರು ತಮ್ಮ ಬದುಕು ಕಟ್ಟಿಕೊಳ್ಳಲು ಅವಲಂಬಿಸಿರುವ ಬೀದಿಬದಿ ವ್ಯಾಪಾರದ ಹಕ್ಕನ್ನು ಕಸಿದಂತಾಗಿದೆ.

ಬೀದಿ ವ್ಯಾಪಾರ ಮಾಡುವ ಹಕ್ಕು ಸಂವಿಧಾನದಲ್ಲಿ ನೀಡಲಾಗಿದೆ. ಬೀದಿ ವ್ಯಾಪಾರಿಗಳ ಜೀವನೋಪಾಯದ ರಕ್ಷಣೆ ಮತ್ತು ನಿಯಂತ್ರಣ ಕಾಯ್ದೆ -2014 ಜಾರಿಯಲ್ಲಿದೆ. ಈ ಹಕ್ಕನ್ನು ರಕ್ಷಿಸುವಂತೆ ಕೋರ್ಟ್‌ಗಳು ಹಲವು ಬಾರಿ ಆದೇಶ ಮಾಡಿವೆ. ಇದನ್ನು ಬಿಬಿಎಂಪಿ ಗಮನಿಸದೆ ಬೀದಿಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸಲಷ್ಟೇ ಗಮನ ಹರಿಸಿದೆ. ಪಾಲಿಕೆಯು 2017ರಲ್ಲಿ 20 ಸಾವಿರ ಬೀದಿಬದಿ ವ್ಯಾಪಾರಿಗಳನ್ನು ಪತ್ತೆ ಹಚ್ಚಿ ಗುರುತಿನ ಚೀಟಿ ನೀಡಿತ್ತು. ಸದ್ಯ ನಗರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಬೀದಿಬದಿ ವ್ಯಾಪಾರ ನಡೆಸುತ್ತಿದ್ದು, ಅವರ ಹಿತರಕ್ಷಣೆ ಮಾಡಬೇಕಿದೆ ಎಂದು ಒತ್ತಾಯಿಸಿದರು.

ಸಂಸ್ಥೆಯ ಜಂಟಿ ಕಾರ್ಯದರ್ಶಿ ಸೈಯದ್ ಜಮೀರ್ ಮಾತನಾಡಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾವಿರಾರು ಜನರು ಬೀದಿ ವ್ಯಾಪಾರವನ್ನು ಜೀವನೋಪಾಯವಾಗಿ ಅಳವಡಿಸಿಕೊಂಡು ತಮ್ಮ ಕುಟುಂಬಕ್ಕೆ ಆಸರೆಯಾಗಿದ್ದಾರೆ. ಆದರೆ ಇತ್ತೀಚಿಗೆ ಬಿಬಿಎಂಪಿ ಅಧಿಕಾರಿಗಳು ನಗರದಾದ್ಯಂತ ಬೀದಿಬದಿ ವ್ಯಾಪಾರಿಗಳ ಮೇಲೆ ಕ್ರಮಕೈಗೊಳ್ಳುತ್ತಿದ್ದು, ಎಲ್ಲಾ ಕಾನೂನು ಮತ್ತು ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸುತ್ತಿದ್ದಾರೆ, ಬಿಬಿಎಂಪಿ ಅಧಿಕಾರಿಗಳು ಕೂಡಲೇ ಕಿರುಕುಳವನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಕ್ಕೊತ್ತಯಗಳ ಮನವಿ ಪತ್ರವನ್ನು ಬಿಬಿಎಂಪಿ ಅಧಿಕಾರಿಗಳಿಗೆ ಪ್ರತಿಭಟನಾಕಾರರು ಸಲ್ಲಿಸಿದರು.

ಜಯನಗರ, ಮಹದೇವಪುರ, ಮಲ್ಲೇಶ್ವರಂ, ಬನಶಂಕರಿ, ಮೂಡಲಪಾಳ್ಯ ಹಾಗೂ ಇತರೆ ಪ್ರದೇಶಗಳಲ್ಲಿ ಎತ್ತಂಗಡಿ ಮಾಡಿದ ವ್ಯಾಪಾರಿಗಳಿಗೆ ಅದೇ ಸ್ಥಳದಲ್ಲಿ ಮರುವ್ಯಾಪಾರ ಮಾಡುವಂತೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಇಷ್ಟು ದಿವಸ ಅವರಿಗೆ ಆದ ನಷ್ಟಕ್ಕೆ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com