ಸದ್ಯಕ್ಕೆ ಯಾವುದೇ ನಿರ್ಬಂಧಗಳಿಲ್ಲ, ಜನಸಂದಣಿ ಇರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸಬೇಕು: ರಾಜ್ಯ ಸರ್ಕಾರ

ಸದ್ಯಕ್ಕೆ ರಾಜ್ಯದಲ್ಲಿ ಯಾವುದೇ ನಿರ್ಬಂಧಗಳನ್ನೂ ಹೇರುವುದಿಲ್ಲ. ಆದರೆ, ಜನಸಂದಣಿ ಇರುವ ಪ್ರದೇಶಗಳಲ್ಲಿ ಜನರು ಮಾಸ್ಕ್ ಧರಿಸಬೇಕೆಂದು ರಾಜ್ಯ ಸರ್ಕಾರ ಶುಕ್ರವಾರ ಹೇಳಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಮಂಗಳೂರು: ಸದ್ಯಕ್ಕೆ ರಾಜ್ಯದಲ್ಲಿ ಯಾವುದೇ ನಿರ್ಬಂಧಗಳನ್ನೂ ಹೇರುವುದಿಲ್ಲ. ಆದರೆ, ಜನಸಂದಣಿ ಇರುವ ಪ್ರದೇಶಗಳಲ್ಲಿ ಜನರು ಮಾಸ್ಕ್ ಧರಿಸಬೇಕೆಂದು ರಾಜ್ಯ ಸರ್ಕಾರ ಶುಕ್ರವಾರ ಹೇಳಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕೊರೊನಾ ಸ್ಥಿತಿಗತಿ ಪರಿಶೀಲಿಸಿ ಮಾತನಾಡಿದ ಅವರು, ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಜನರು ಜಾಗ್ರತೆಯಿಂದಿರಬೇಕು. ಸದ್ಯಕ್ಕೆ ಯಾವುದೇ ನಿರ್ಬಂಧಗಳನ್ನೂ ವಿಧಿಸುವುದಿಲ್ಲ. ಮಾಸ್ಕ್ ಗಳನ್ನೂ ಕಡ್ಡಾಯಗೊಳಿಸುವುದಿಲ್ಲ. ಆದರೆ, ಜನಸಂದಣಿ ಇರುವ ಪ್ರದೇಶಗಳಲ್ಲಿ ಜನರು ಮಾಸ್ಕ್ ಧರಿಸಬೇಕೆಂದು ಮನವಿ ಮಾಡಿಕೊಂಡರು.

ಡಿಸೆಂಬರ್ 25 ರಂದು ಕೋವಿಡ್-19 ನಿರ್ವಹಣೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಂಪುಟ ಉಪಸಮಿತಿಯ ಮೊದಲ ಸಭೆ ನಡೆಯಲಿದೆ. ಅಗತ್ಯವಿದ್ದರೆ ಮಾರ್ಗಸೂಚಿಗಳ ಪ್ರಕಟಿಸುವ ಕುರಿತು ಕೇಂದ್ರದೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.

ಕೋವಿಡ್ ರೂಪಾಂತರಿ ತಳಿ ಜೆಎನ್ 1 ಅಪಾಯಕಾರಿಯಲ್ಲ. ಯಾರಿಗೂ ಹೆಚ್ಚಿನ ಅಪಾಯವಿಲ್ಲ. ಈ ಬಗ್ಗೆ ಮೆಡಿಕಲ್ ತಾಂತ್ರಿಕ ಸಮಿತಿಗಳು ಈಗಾಗಲೇ ಹೇಳಿಕೆ ನೀಡಿದೆ. ಆದರೂ ನಮ್ಮ ಎಚ್ಚರಿಕೆಯಲ್ಲಿ ನಾವು ಇರುವುದು ಒಳಿತು. ಸಂಪುಟ ಉಪಸಮಿತಿ ತಜ್ಞರ ವರದಿ ಪಡೆದು ನಿರ್ಧಾರ ಮಾಡಲಿದೆ. ರಾಜ್ಯದಲ್ಲಿ ಸದ್ಯ ಐದು ಸಾವಿರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 330 ಹಾಗೂ ಬೆಂಗಳೂರಿನಲ್ಲಿ 1,500 ಟೆಸ್ಟಿಂಗ್ ಟಾರ್ಗೆಟ್ ನೀಡಲಾಗಿದೆ. ಗಡಿ ಜಿಲ್ಲೆಯಾಗಿದ್ದರಿಂದ ಮಂಗಳೂರು, ಮೈಸೂರಿಗೆ ಹೆಚ್ಚು ನೀಡಲಾಗಿದೆ ಎಂದು ತಿಳಿಸಿದರು.

ವೆಂಟಿಲೇಟರ್ ಕಾರ್ಯನಿರ್ವಹಣೆ ಪರೀಕ್ಷೆ ಬಗ್ಗೆ ಕ್ರಮ ವಹಿಸುತ್ತೇವೆ. ಸರ್ಕಾರಿ ಆಸ್ಪತ್ರೆಗಳಿಗೆ ಪಿಪಿಇ ಕಿಟ್ ಪೂರೈಕೆ ಕೆಲಸ ಆಗುತ್ತಿದೆ. ಕೆಲವು ಕಡೆ ಸ್ವಲ್ಪ ತಡ ಆಗಿದೆ, ಎಲ್ಲವೂ ಶೀಘ್ರ ಆಗಲಿದೆ.‌ ಹೆಚ್ಚು ಟೆಸ್ಟಿಂಗ್ ಮಾಡುವ ಅಗತ್ಯ ಇದೆಯೇ ಎಂದು ನಿರ್ಧಾರ ಮಾಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳಿಗೆ ಗೈಡ್ ಲೈನ್ಸ್ ಗಳ ಬಗ್ಗೆ ನಿರ್ಧಾರ ಮಾಡಲಾಗುತ್ತದೆ‌ ಎಂದು ಹೇಳಿದರು.

ಕ್ರಿಸ್ಮಸ್, ಹೊಸ ವರ್ಷಕ್ಕೆ ಯಾವುದೇ ಹೊಸ ಗೈಡ್ ಲೈನ್ಸ್ ಇಲ್ಲ. ಆದರೆ ಜನ ಸೇರಿದ್ದಲ್ಲಿ ಪ್ರದೇಶಗಳಲ್ಲಿ ಮಾಸ್ಕ್ ಧರಿಸಲು ಸಲಹೆ ಕೊಡುತ್ತೇವೆ. ಯಾವುದೂ ಕಡ್ಡಾಯವಲ್ಲ, ನಾವು ಯಾವುದೇ ನಿರ್ಬಂಧ ವಿಧಿಸಲ್ಲ.‌ ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ಪ್ರಕಾರ ಈ ಉಪತಳಿ ಬಗ್ಗೆ ಆತಂಕ ಪಡುವ ಅವಶ್ಯಕತೆಯಿಲ್ಲ ಎಂದರು.

ಸಭೆಯಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಎಚ್.ಆರ್.ತಿಮ್ಮಯ್ಯ ಅವರು, ದಕ್ಷಿಣ ಕನ್ನಡದಲ್ಲಿ ಒಂದು ದಿನದಲ್ಲಿ 300 ಪರೀಕ್ಷೆಗಳನ್ನು ನಡೆಸಲು ಸರ್ಕಾರ ಸೂಚನೆ ನೀಡಿದೆ. ಜನರಲ್ಲಿ ರೂಪಾಂತರಿ ವೈರಸ್ ಕುರಿತು ಜಾಗೃತಿ ಮೂಡಿಸಲು ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣಗಳಲ್ಲಿ ಆರೋಗ್ಯ ಇಲಾಖೆ ತಂಡಗಳನ್ನು ನಿಯೋಜಿಸಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com