ಮೈಸೂರು, ಸುತ್ತಮುತ್ತ ಸ್ಥಾಪಿತ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಬೇಕು: ಸಿದ್ದರಾಮಯ್ಯ
ಮೈಸೂರು: ಮೈಸೂರು ಮತ್ತು ಸುತ್ತಮುತ್ತ ಸ್ಥಾಪನೆಯಾಗಿರುವ ಕಾರ್ಖಾನೆಗಳಲ್ಲಿ ಉದ್ಯೋಗಕ್ಕೆ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.
ಮೈಸೂರಿನಲ್ಲಿ ಕಾರ್ಖಾನೆಗಳ ಮುಖ್ಯಸ್ಥರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು ಸಮೀಪದ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಮಾತ್ರ ಉದ್ಯೋಗ ನೀಡಬೇಕು ಮತ್ತು ತಾಂತ್ರಿಕವಾಗಿ ನುರಿತರು ಸ್ಥಳೀಯವಾಗಿ ಲಭ್ಯವಿಲ್ಲದಿದ್ದಾಗ ಹೊರಗಿನವರಿಗೆ ಮಾತ್ರ ಅವಕಾಶ ನೀಡಬೇಕು ಎಂದರು.
ಸ್ಥಳೀಯರಿಗೆ ಉದ್ಯೋಗ ಸಿಗದಿರುವ ವಿಚಾರವನ್ನು ಪ್ರಸ್ತಾಪಿಸಿದ ಸಿಎಂ, ರಾಜ್ಯದಲ್ಲಿ ವೃತ್ತಿಪರ ಕೌಶಲ್ಯವಿರುವ ಮಾನವ ಸಂಪನ್ಮೂಲವಿದ್ದು, ಸುಳ್ಳು ನೆಪ ಹೇಳಿ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ನಿರಾಕರಿಸಬಾರದು ಎಂದು ಒತ್ತಿ ಹೇಳಿದರು.
ಕಾರ್ಖಾನೆಗಳು ಶಾಂತಿಯುತವಾಗಿ ನಡೆಯಬೇಕು. ನಮ್ಮ ಸರ್ಕಾರ ನಿರುದ್ಯೋಗಿ ಪದವೀಧರರಿಗೆ ಯುವ ನಿಧಿ ಯೋಜನೆ ಜಾರಿಗೊಳಿಸುತ್ತಿದೆ. ಜನವರಿ 12 ರಂದು ಈ ಯೋಜನೆಗೆ ಚಾಲನೆ ನೀಡಲಾಗುವುದು. ಬೇಡಿಕೆಗೆ ಅನುಗುಣವಾಗಿ ಪದವೀಧರರಿಗೆ ಅಗತ್ಯವಿರುವ ವೃತ್ತಿಪರ ಕೌಶಲ್ಯವನ್ನು ಸರ್ಕಾರದಿಂದ ತರಬೇತಿ ನೀಡಲಾಗುವುದು ಎಂದರು.
ಕಾರ್ಖಾನೆಗಳ ಉನ್ನತಿಗಾಗಿ ಮತ್ತು ರಾಜ್ಯದ ಜಿಡಿಪಿ ಬೆಳವಣಿಗೆ ಮತ್ತು ಅಭಿವೃದ್ಧಿಗಾಗಿ ಸ್ಥಳೀಯರಿಗೆ ಉದ್ಯೋಗ ನೀಡುವ ಅಗತ್ಯವನ್ನು ಸಿದ್ದರಾಮಯ್ಯ ಒತ್ತಿ ಹೇಳಿದರು.
'ರಾಜ್ಯದ ಜಿಡಿಪಿ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಕಾರ್ಖಾನೆಗಳು ಸಹಾಯ ಮಾಡುತ್ತವೆ. ಕಾರ್ಖಾನೆಗಳ ಸ್ಥಾಪನೆಗೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವ ಕುಟುಂಬಗಳಿಗೆ ಮುಖ್ಯವಾಗಿ ಉದ್ಯೋಗ ನೀಡಬೇಕು. ಸ್ಥಳೀಯರಿಗೆ ಆದ್ಯತೆ ನೀಡಬೇಕು. ವೃತ್ತಿಪರವಾಗಿ ನುರಿತ ಜನರು ಇಲ್ಲದಿದ್ದರೆ, ಅಂತವರಿಗೆ ತರಬೇತಿ ನೀಡಿ ನೇಮಕಾತಿ ಮಾಡಿಕೊಳ್ಳುವುದು ಸೂಕ್ತ' ಎಂದರು.
ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಹೊಸ ಕಾರ್ಖಾನೆಗಳಿಗೆ ಮಂಜೂರಾತಿ ನೀಡಲಾಗಿದೆ, ಉದ್ಯೋಗ ನೀಡದಿದ್ದರೆ ಸರ್ಕಾರದ ಉದ್ದೇಶ ಈಡೇರುವುದಿಲ್ಲ. ಕೈಗಾರಿಕೆಗಳಿಗೆ ಅಗತ್ಯ ಸೌಕರ್ಯ ಮತ್ತು ಸೌಲಭ್ಯಗಳನ್ನು ನೀಡಲು ಸರ್ಕಾರ ಬದ್ಧವಾಗಿದೆ ಮತ್ತು ಸಿದ್ಧವಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ