ಹೆಚ್ಚುತ್ತಿರುವ ಕೋವಿಡ್ ರೂಪಾಂತರ ಜೆಎನ್.1: ಸಾರ್ವಜನಿಕರು ಭಯಪಡಬೇಡಿ; ಡಿಕೆ ಶಿವಕುಮಾರ್ ಮನವಿ
ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ ರೂಪಾಂತರ ಜೆಎನ್.1 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಭಯಪಡಬೇಡಿ ಮತ್ತು ಇಲ್ಲಿಯವರೆಗೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರವಸೆ ನೀಡಿದರು.
ರಾಜ್ಯದಲ್ಲಿನ ಪ್ರಕರಣಗಳ ಪ್ರಸ್ತುತ ಸ್ಥಿತಿಯ ಬಗ್ಗೆ ಆರೋಗ್ಯ ಸಚಿವರು ಹೆಚ್ಚಿನ ಮಾಹಿತಿ ನೀಡುತ್ತಾರೆ ಎಂದರು.
'ಕೋವಿಡ್ ಬಗ್ಗೆ ಭಯಪಡುವ ಅಗತ್ಯವಿಲ್ಲ. ಈಗ ಎಲ್ಲವೂ ಸರಿಯಾಗಿದೆ. ನಮ್ಮ ಆರೋಗ್ಯ ಸಚಿವರು ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡುತ್ತಾರೆ' ಎಂದು ಶಿವಕುಮಾರ್ ಹೇಳಿದರು.
ಇದಕ್ಕೂ ಮುನ್ನ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಂಪುಟ ಉಪಸಮಿತಿ ಸಭೆ ನಡೆಯಿತು.
ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಎಚ್ಸಿ ಮಹದೇವಪ್ಪ, ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ಟ್ಯಾಕ್ ಸಮಿತಿ ಅಧ್ಯಕ್ಷ ರವಿ, ಎನ್ಎಚ್ಎಂ ಎಂಡಿ ನವೀನ್ ಭಟ್, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸದ್ಯದ ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಸರ್ಕಾರದ ಬದ್ಧತೆಯನ್ನು ಒತ್ತಿಹೇಳುವ ಚರ್ಚೆಗಳು ಸಭೆಯಲ್ಲಿ ನಡೆದವು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಡಿಸೆಂಬರ್ 25 ರವರೆಗೆ ದೇಶದಲ್ಲಿ ಒಟ್ಟು 69 ಜೆಎನ್.1 ಪ್ರಕರಣಗಳು ವರದಿಯಾಗಿವೆ. ಈ ಪೈಕಿ 34 ಪ್ರಕರಣಗಳು ಕರ್ನಾಟಕದಿಂದ ವರದಿಯಾಗಿವೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ