ಜಾತಿ ಗಣತಿ ವರದಿಗೆ ವಿರೋಧ: ಜ. 28ಕ್ಕೆ ಅಹಿಂದ ಸಮಾವೇಶದ ಮೂಲಕ ಸಿಎಂ ಸಿದ್ದರಾಮಯ್ಯ ಉತ್ತರ

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿ ಗಣತಿ ವರದಿಯನ್ನು ಕಾಂಗ್ರೆಸ್ ಸರ್ಕಾರ ಅಂಗೀಕರಿಸಿರುವುದಕ್ಕೆ ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ....
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು/ಚಿತ್ರದುರ್ಗ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿ ಗಣತಿ ವರದಿಯನ್ನು ಕಾಂಗ್ರೆಸ್ ಸರ್ಕಾರ ಅಂಗೀಕರಿಸಿರುವುದಕ್ಕೆ ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ(ಅಲ್ಪಸಂಖ್ಯಾತ, ಹಿಂದುಳಿದ, ದಲಿತರು) ಸಮಾವೇಶ ಆಯೋಜಿಸುವ ಮೂಲಕ ಉತ್ತರ ನೀಡಲು ಸಜ್ಜಾಗಿದ್ದಾರೆ. ಜನವರಿ 28 ರಂದು ಚಿತ್ರದುರ್ಗದಲ್ಲಿ ಅಹಿಂದ ಸಮಾವೇಶ ನಡೆಯಲಿದೆ.

ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಸಮಾವೇಶದಲ್ಲಿ ಜಾತಿ ಆಧಾರಿತ ಸಾಮಾಜಿಕ-ಆರ್ಥಿಕ ಶೈಕ್ಷಣಿಕ ಸಮೀಕ್ಷಾ ವರದಿ ತಿರಸ್ಕರಿಸುವ ನಿರ್ಣಯ ಅಂಗೀಕರಿಸಿದ ಹಿನ್ನೆಲೆಯಲ್ಲಿ ‘ಶೋಷಿತರ ಜಾಗೃತಿ ಸಮಾವೇಶ’ ಹೆಚ್ಚು ಮಹತ್ವ ಪಡೆದುಕೊಂಡಿದೆ.

ಎಚ್ ಕಾಂತರಾಜ್ ಆಯೋಗದ ಜಾತಿ ಆಧಾರಿತ ಸಾಮಾಜಿಕ-ಆರ್ಥಿಕ-ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಅಂಗೀಕರಿಸಬೇಕು ಎಂದು ಒತ್ತಾಯಿಸುವುದರ ಜೊತೆಗೆ, ಕೇಂದ್ರ, ರಾಷ್ಟ್ರಮಟ್ಟದಲ್ಲಿಯೂ ಇದೇ ರೀತಿಯ ಸಮೀಕ್ಷೆಯನ್ನು ನಡೆಸಬೇಕೆಂದು ಅಹಿಂದ ಸಮಾವೇಶ ನಿರ್ಣಯ ಅಂಗೀಕರಿಸಲಿದೆ. ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ನೀಡಲಾಗಿದ್ದ ಶೇ 10ರಷ್ಟು ಮೀಸಲಾತಿನ್ನು ಹಿಂಪಡೆಯುವಂತೆಯೂ ಒತ್ತಾಯಿಸಲಾಗಿದೆ.

ಮುಂಬರುವ ಸಾರ್ವತ್ರಿಕ ಚುನಾವಣೆಯಿಂದಲೇ ಮಹಿಳಾ ಮೀಸಲಾತಿ ಜಾರಿಗೊಳಿಸಬೇಕು, ಒಬಿಸಿಗಳಿಗೆ ಒಳಮೀಸಲಾತಿ ಜತೆಗೆ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀಡಲಾಗಿರುವ ಮೀಸಲಾತಿ ಮಾದರಿಯಲ್ಲಿ ಅಲ್ಪಸಂಖ್ಯಾತರಿಗೂ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ನಿರ್ಣಯ ಅಂಗೀಕರಿಸಲಾಗುವುದು ಎಂದು ಅಹಿಂದ ನಾಯಕ ಬಿ.ಟಿ.ಜಗದೀಶ್ ಅವರು ಮಾಹಿತಿ ನೀಡಿದ್ದಾರೆ.

ವರದಿಯನ್ನು ಅಂಗೀಕರಿಸಲಾಗುವುದು ಎಂದು ಸಿದ್ದರಾಮಯ್ಯ ಅವರು ಅಹಿಂದ ಸಮುದಾಯಗಳಿಗೆ ಭರವಸೆ ನೀಡಿದ್ದರು. ಆದರೆ ವೀರಶೈವ-ಲಿಂಗಾಯತರು ಮತ್ತು ಒಕ್ಕಲಿಗರ ಒತ್ತಡದಿಂದ ಅಂಗೀಕರಿಸಲು ಸಾಧ್ಯವಾಗುತ್ತಿಲ್ಲ. 

ಈ ಮಧ್ಯೆ, ನವೆಂಬರ್ 25, 2023 ರಂದು ಕೊನೆಗೊಂಡ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ ಜಯಪ್ರಕಾಶ್ ಹೆಗ್ಡೆ ಅವರ ಅವಧಿಯನ್ನು ರಾಜ್ಯ ಸರ್ಕಾರ ಜನವರಿ 31, 2024 ರವರೆಗೆ ವಿಸ್ತರಿಸಿದೆ ಮತ್ತು ಲೋಕಸಭೆ ಚುನಾವಣೆಗೂ ಮುನ್ನ ವರದಿಯನ್ನು ಸ್ವೀಕರಿಸಿ, ಜಾರಿಗೊಳಿಸುತ್ತದೆಯೇ ಎಂದು ಕಾದು ನೋಡಬೇಕಾಗಿದೆ.

2024ರ ಲೋಕಸಭಾ ಚುನಾವಣೆಯಲ್ಲಿ ಅಹಿಂದ ಸಮಾವೇಶ, ಚಿತ್ರದುರ್ಗ, ಹಾವೇರಿ ಮತ್ತು ಕೊಪ್ಪಳ ಸೇರಿದಂತೆ ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಕೆಲವು ಸ್ಥಾನಗಳಲ್ಲಿ ಆಡಳಿತಾರೂಢ ಕಾಂಗ್ರೆಸ್‌ಗೆ ಸಹಾಯ ಮಾಡುವ ಸಾಧ್ಯತೆಯಿದೆ. ಅಲ್ಲಿ ಕುರುಬ ಸೇರಿದಂತೆ ಅಹಿಂದ ಸಮುದಾಯಗಳ ಜನಸಂಖ್ಯೆ ಹೆಚ್ಚಾಗಿದೆ.

ಚಿತ್ರದುರ್ಗದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಸಚಿವ ಎಚ್.ಆಂಜನೇಯ ಮತ್ತು ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಅವರು ಅಹಿಂದ ಸಮಾವೇಶ ಆಯೋಜನೆಗೆ ಸಹಾಯ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com