ಬೆಳಗಾವಿ: ತನ್ನ ಗ್ರಾಮಕ್ಕೆ ಬಸ್ ಸೇವೆಗೆ ಆಗ್ರಹಿಸಿ ಪ್ರತಿಭಟಿಸುತ್ತಿದ್ದ ಬಾಲಕಿ ರಸ್ತೆ ಅಪಘಾತದಲ್ಲಿ ನಿಧನ

ತನ್ನ ಗ್ರಾಮಕ್ಕೆ ನಿತ್ಯ ಬಸ್‌ ಸಂಚಾರಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮನೆಗೆ ಮರಳುತ್ತಿದ್ದ 8ನೇ ತರಗತಿ ಬಾಲಕಿಯೊಬ್ಬಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿಸುವ ಘಟನೆ ಕಿತ್ತೂರು ತಾಲೂಕಿನ ನಿಚ್ಚಣಕಿ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕಿ ಅಕ್ಷತಾ
ಮೃತ ಬಾಲಕಿ ಅಕ್ಷತಾ

ಬೆಳಗಾವಿ: ತನ್ನ ಗ್ರಾಮಕ್ಕೆ ನಿತ್ಯ ಬಸ್‌ ಸಂಚಾರಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮನೆಗೆ ಮರಳುತ್ತಿದ್ದ 8ನೇ ತರಗತಿ ಬಾಲಕಿಯೊಬ್ಬಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿಸುವ ಘಟನೆ ಕಿತ್ತೂರು ತಾಲೂಕಿನ ನಿಚ್ಚಣಕಿ ಗ್ರಾಮದಲ್ಲಿ ನಡೆದಿದೆ.

ಅಕ್ಷತಾ ಈರಪ್ಪ ಹುಲಿಕಟ್ಟಿ ಮೃತ ಬಾಲಕಿಯಾಗಿದ್ದಾಳೆ. ಕಿತ್ತೂರು ಸರಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿಯನ್ನು ಬಾಲಕಿ ವ್ಯಾಸಂಗ ಮಾಡುತ್ತಿದ್ದಳು. ಅಕ್ಷತಾ ಮತ್ತು ಅವರ ಸ್ನೇಹಿತರು ಹಲವು ಬಾರಿ ಪ್ರತಿಭಟನೆ ನಡೆಸಿ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ್ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಬಸ್ ಸೇವೆಗಾಗಿ ಮನವಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಕ್ಕಳು ಮನವಿ ಮಾಡಿಕೊಂಡಿದ್ದರೂ, ಆ ಬಗ್ಗೆ ಅಧಿಕಾರಿಗಳು ಮಾತ್ರ ತಲೆಕೆಡಿಸಿಕೊಂಡಿಲ್ಲ ಎಂದು ತಿಳಿದುಬಂದಿದೆ.

ಶನಿವಾರವೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಬಳಿಕ ಮಕ್ಕಳು ಮನೆಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಮೂವರು ಬಾಲಕಿಯರಿಗೆ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಅಕ್ಷತಾ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ. ಈ ನಡುವೆ ಘಟನೆಯಲ್ಲಿ ಮತ್ತೊಬ್ಬ ಬಾಲಕಿಗೆ ಕೂಡ ಗಂಭೀರವಾಗಿ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆಂದು ತಿಳಿದುಬಂದಿದೆ.

ಇನ್ನು ಘಟನೆ ಸಂಬಂಧ ಮೃತ ಅಕ್ಷತಾ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿ ಗ್ರಾಮಸ್ಥರು ಭಾನುವಾರ ಹೆದ್ದಾರಿಯಲ್ಲಿ ರಾಸ್ತಾ ರೋಕೋ ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಥಳಕ್ಕೆ ಬಂದ ತಹಶೀಲ್ದಾರ್ ಪ್ರವೀಣ್ ಜೈನ್ ಅವರು, ಪರಿಹಾರ ಕೊಡಿಸಲು ಪ್ರಯತ್ನ ನಡೆಸುವ ಭರವಸೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com