ಪಂಚಾಯಿತಿಯ ಅಕ್ರಮ ಬಯಲಿಗೆಳೆದಿದ್ದ ಆರ್‌ಟಿಐ ಕಾರ್ಯಕರ್ತನ ಹತ್ಯೆ: ಪೊಲೀಸರ ವೈಫಲ್ಯವೇ ಕಾರಣ ಎಂದ ಕುಟುಂಬ

ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಹತ್ಯೆಗೀಡಾದ ದಿವಂಗತ ಆರ್‌ಟಿಐ ಕಾರ್ಯಕರ್ತ ಆರ್. ಮೂರ್ತಿ ಅವರ ಕುಟುಂಬ, ಮೂರ್ತಿ ಅವರ ಹತ್ಯೆಗೆ ರಾಜ್ಯದ ಪೊಲೀಸ್ ಇಲಾಖೆಯೇ ಹೊಣೆ ಎಂದು ಆರೋಪಿಸಿದೆ. ಇದೇ ವೇಳೆ ರಾಜ್ಯದಲ್ಲಿ ಆರ್‌ಟಿಐ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಸುವುದಾಗಿ ಆರ್‌ಟಿಐ ಕಾರ್ಯಕರ್ತರ ವೇದಿಕೆ ಎಚ್ಚರಿಕೆ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಹತ್ಯೆಗೀಡಾದ ದಿವಂಗತ ಆರ್‌ಟಿಐ ಕಾರ್ಯಕರ್ತ ಆರ್. ಮೂರ್ತಿ ಅವರ ಕುಟುಂಬ, ಮೂರ್ತಿ ಅವರ ಹತ್ಯೆಗೆ ರಾಜ್ಯದ ಪೊಲೀಸ್ ಇಲಾಖೆಯೇ ಹೊಣೆ ಎಂದು ಆರೋಪಿಸಿದೆ.

ಇದೇ ವೇಳೆ ರಾಜ್ಯದಲ್ಲಿ ಆರ್‌ಟಿಐ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಸುವುದಾಗಿ ಆರ್‌ಟಿಐ ಕಾರ್ಯಕರ್ತರ ವೇದಿಕೆ ಎಚ್ಚರಿಕೆ ನೀಡಿದೆ.

ಬೆಂಗಳೂರಿಗೆ ಸಮೀಪದಲ್ಲಿರುವ ಕನಕಪುರ ಪಟ್ಟಣದ ಸಮೀಪದ ಕುರುಬಳ್ಳಿದೊಡ್ಡಿ ಗ್ರಾಮದ ನಿವಾಸಿ ಮೂರ್ತಿ ಡಿಸೆಂಬರ್ ಕೊನೆಯ ವಾರದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಮೂರ್ತಿ ಅವರು ಗ್ರಾಮದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (ಎಂಜಿಎನ್‌ಆರ್‌ಇಜಿಎಸ್) ಕೈಗೊಂಡಿರುವ ಸಿವಿಲ್ ಕಾಮಗಾರಿಗಳ ವಿವರಗಳನ್ನು ಸಂಗ್ರಹಿಸಿ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಈ ಆರೋಪದ ಬಗ್ಗೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೂರ್ತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಪಂಚಾಯಿತಿ ಮಟ್ಟದಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ಬಯಲಿಗೆಳೆದ ಮಗನಿಗೆ ಬೆದರಿಕೆ ಹಾಕಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ತನ್ನ ಮಗನಿಗೆ ಜೀವ ಬೆದರಿಕೆ ಒಡ್ಡಲಾಗಿದೆ ಮತ್ತು ಪೊಲೀಸರು ನನ್ನ ಮಗನಿಗೆ ಭದ್ರತೆ ಒದಗಿಸದಿರುವುದು ಆತನ ಕೊಲೆಗೆ ಕಾರಣವಾಯಿತು ಎಂದು ಮೂರ್ತಿ ಅವರ ತಾಯಿ ಶಾಂತಮ್ಮ ಆರೋಪಿಸಿದ್ದಾರೆ.

ಪೊಲೀಸರು ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿರುವ ಶಾಂತಮ್ಮ, ಹತ್ಯೆಯ ಹಿಂದಿರುವ ಪ್ರಭಾವಿ ನಾಯಕನ ಹೆಸರನ್ನು ಕೈಬಿಡಲಾಗಿದೆ. ಸರ್ಕಾರ ಈ ಬಗ್ಗೆ ತನಿಖೆ ನಡೆಸಿ ಮೃತ ಮಗನಿಗೆ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿದರು.

ಮೂರ್ತಿ ಹತ್ಯೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಬಂಧಿಸಿ ಅವರ ಕುಟುಂಬದ ಒಬ್ಬರಿಗೆ ಉದ್ಯೋಗ ನೀಡಬೇಕು. ರಾಜ್ಯದಲ್ಲಿ ಆರ್‌ಟಿಐ ಕಾರ್ಯಕರ್ತರ ಮೇಲಿನ ಹಲ್ಲೆಗಳನ್ನು ಖಂಡಿಸಿ ಫೆಬ್ರವರಿಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವೇದಿಕೆ ಪ್ರತಿಭಟನೆಯನ್ನು ಆಯೋಜಿಸುತ್ತಿದೆ ಎಂದು ಆರ್‌ಟಿಐ ಕಾರ್ಯಕರ್ತರ ವೇದಕೆ ಅಧ್ಯಕ್ಷ ವಿ.ಹನುಮಂತರಾಯಪ್ಪ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com