ಬೆಂಗಳೂರು: ರಾಜ್ಯದಲ್ಲಿ ಪ್ರಮುಖವಾಗಿ ಶ್ರೇಣಿ 2 ಮತ್ತು 3 ನೇ ಹಂತದ ನಗರಗಳಲ್ಲಿ ಆರೋಗ್ಯ ಸೇವೆಗಳ ಗುಣಮಟ್ಟ ಸುಧಾರಿಸಲು ಆರೋಗ್ಯ ಕ್ಷೇತ್ರದಲ್ಲಿ ತಂತ್ರಜ್ಞಾನದ ಏಕೀಕರಣ ಅತ್ಯಗತ್ಯವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಹೇಳಿದರು.
ನ್ಯಾಷನಲ್ ಅಸೋಸಿಯೇಶನ್ ಆಫ್ ಸಾಫ್ಟ್ವೇರ್ ಮತ್ತು ಸೇವಾ ಕಂಪನಿಗಳು (ನಾಸ್ಕಾಮ್) ಶುಕ್ರವಾರ ನಗರದಲ್ಲಿ ಆಯೋಜಿಸಿದ್ದ ಲೈಫ್ ಸೈನ್ಸಸ್ ಮತ್ತು ಹೆಲ್ತ್ಕೇರ್ ಇನ್ನೋವೇಶನ್ ಫೋರಂನ 11 ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.
ಎಲ್ಲರಿಗೂ ಕೈಗೆಟುಕುವ ರೀತಿಯಲ್ಲಿ ಆರೋಗ್ಯ ಸೇವೆಗಳನ್ನು ಒದಗಿರುವುದು ಸರ್ಕಾರ ಬದ್ಧತೆಯಾಗಿದೆ. ದೂರದ ಪ್ರದೇಶಗಳಲ್ಲಿ ವಾಸಿಸುವ ಜನರ ಆರೋಗ್ಯ ಆರೈಕೆಗೆ ಉತ್ತಮ, ವೇಗವ ಮತ್ತು ತ್ವರಿತ ಪ್ರತಿಕ್ರಿಯೆಯ ಅಗತ್ಯವಿದೆ. ಈ ನಿಟ್ಟಿನಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅಳವಡಿಕೆಯೊಂದಿಗೆ ರಾಜ್ಯದಲ್ಲಿ ಸಮಗ್ರ ಆರೋಗ್ಯ ರಕ್ಷಣೆ ನೀತಿಯನ್ನು ಜಾರಿಗೆ ತರಲು ಐದು ವರ್ಷಗಳ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಹೇಳಿದರು.
ಬೆಂಗಳೂರು ದೇಶಧ ತಂತ್ರಜ್ಞಾನ ಮತ್ತು ಐಟಿ ಹಬ್ ಆಗಿದ್ದು, ಇದು ಆರೋಗ್ಯ ಕ್ಷೇತ್ರದಲ್ಲಿ ಉನ್ನತ ಮಟ್ಟದ ಎಐ ಅನ್ನು ಬಳಸುವಲ್ಲಿ ದೇಶವನ್ನು ಮುನ್ನಡೆಸಲು ಬಲವನ್ನು ನೀಡುತ್ತದೆ ಎಂದು ತಿಳಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ವಿಶೇಷ ಕಾರ್ಯದರ್ಶಿ (ಆರೋಗ್ಯ) ಎಸ್ ಗೋಪಾಲಕೃಷ್ಣನ್ ಅವರು ಮಾತನಾಡಿ, ತಂತ್ರಜ್ಞಾನವು ಆರೋಗ್ಯ ವ್ಯವಸ್ಥೆಯನ್ನು ಡಿಜಿಟಲೀಕರಣಗೊಳಿಸಲು ಸಹಾಯ ಮಾಡುತ್ತದೆ, ಇದು ದೂರದ ಸ್ಥಳಗಳಲ್ಲಿ ಮತ್ತು ನಿರ್ದಿಷ್ಟ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳನ್ನ ಹೇಗೆ ಒದಗಿಸಬಹುದು ಎಂಬುದರ ಕುರಿತು ಉತ್ತಮ ತಿಳುವಳಿಕೆಯನ್ನು ನೀಡುತ್ತದೆ ಎಂದು ಹೇಳಿದರು.
Advertisement