ಬೆಂಗಳೂರು: ಅರಣ್ಯ ಭೂಮಿ ಒತ್ತುವರಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅತಿಕ್ರಮಣ ಪ್ರಕರಣಗಳು ಕಂಡು ಬಂದರೆ ಅಧಿಕಾರಿಗಳನ್ನೂ ಬಿಡುವುದಿಲ್ಲ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೋಮವಾರ ಖಡಕ್ ಎಚ್ಚರಿಕೆ ನೀಡಿದರು.
ಹಾಸನ, ಸಕಲೇಶಪುರದ ಯಸಳೂರು ಹೋಬಳಿ, ಮಂಕನಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 144ರಲ್ಲಿ ಒತ್ತುವರಿ ಮಾಡಿಕೊಂಡಿದ್ದ 3.17 ಎಕರೆ ಭೂಮಿಯನ್ನು ಅರಣ್ಯ ಇಲಾಖೆ ತೆರವುಗೊಳಿಸಿದೆ ಮತ್ತು ವಶಪಡಿಸಿಕೊಂಡಿದೆ. ಆ ಭೂಮಿಯಲ್ಲಿ ರೆಸಾರ್ಟ್ ನಿರ್ಮಿಸಲಾಗಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಖಂಡ್ರೆ ಮಾಧ್ಯಮಗಳಿಗೆ ತಿಳಿಸಿದರು. ಆಸ್ತಿ ಮಾಲೀಕರು ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ಪ್ರಕರಣವನ್ನು ವಜಾಗೊಳಿಸಲಾಗಿದೆ ಎಂದು ಅವರು ತಿಳಿಸಿದರು.
ವಿರಾಜಪೇಟೆಯಲ್ಲಿ 66 ಮರಗಳಿಗೆ ಕೊಡಲಿ ಪೆಟ್ಟು ನೀಡಿ ಗಣಿಗಾರಿಕೆಗೆ ಅನುಮತಿ ನೀಡಿದ ಅಧಿಕಾರಿಗಳನ್ನೂ ಬಿಟ್ಟಿಲ್ಲ. ಆ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಇದೇ ರೀತಿಯ ಕ್ರಮ ಕೈಗೊಳ್ಳಲು ಸರ್ಕಾರ ಹಿಂಜರಿಯುವುದಿಲ್ಲ ಎಂದು ಖಂಡ್ರೆ ಹೇಳಿದ್ದಾರೆ.
ಎಲ್ಲ ಇಲಾಖೆ ಸಿಬ್ಬಂದಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ. ಅರಣ್ಯ ಭೂಮಿಯನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದರು.
Advertisement