ಮದ್ದೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಭಾನುವಾರ ಸಂಜೆ ಮತ್ತೊಂದು ಸರಣಿ ಅಪಘಾತ ಸಂಭವಿಸಿದೆ. ಮದ್ದೂರು ಬೈಪಾಸ್ ರಸ್ತೆಯ ಕೆ. ಕೋಡಿಹಳ್ಳಿ ಬಳಿ ಕೆಎಸ್ಆರ್ ಟಿಸಿ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮೈಸೂರುನಿಂದ ಬೆಂಗಳೂರಿಗೆ ತೆರಳುತ್ತಿದ್ದ ರಾಜಹಂಸ ಬಸ್ ಮದ್ದೂರಿನ ಬೈಪಾಸ್ ರಸ್ತೆಯ ಕೆ. ಕೋಡಿಹಳ್ಳಿ ಸಮೀಪ ಮುಂದೆ ಸಾಗುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮುಂದೆ ಹೋಗುತ್ತಿದ್ದ ಮತ್ತೆರಡು ಕಾರುಗಳಿಗೆ ಕಾರು ಡಿಕ್ಕಿ ಹೊಡೆದಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಗಾಯಾಳುಗಳನ್ನು ಸ್ಥಳೀಯರು ಮದ್ದೂರಿನ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿದ್ದಾರೆ.
ಸರಣಿ ಅಪಘಾತ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕಾರುಗಳು ಅಡ್ಡಾದಿಡ್ಡಿ ಬಿದ್ದಿದ್ದರಿಂದ ಅರ್ಧಗಂಟೆಗೂ ಹೆಚ್ಚು ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.
Advertisement