ನಿತಿನ್ ಗಡ್ಕರಿಗೆ ಬೆದರಿಕೆ ಕರೆ: ಬೆಳಗಾವಿಯ ಹಿಂಡಲಗಾ ಜೈಲಿನಿಂದ ನಾಗ್ಪುರಕ್ಕೆ ಉಗ್ರನ ಸ್ಥಳಾಂತರ!

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆಗಳಿಗೆ ಸಂಬಂಧಿಸಿದಂತೆ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿರುವ ಭಯೋತ್ಪಾದಕ ಅಫ್ಸರ್ ಪಾಷಾನನ್ನು ಎನ್‌ಐಎ ಕಸ್ಟಡಿಗೆ ತೆಗೆದುಕೊಂಡಿದೆ. ಹಿಂಡಲಗಾ ಜೈಲಿನಲ್ಲಿರುವ ಮತ್ತೊಬ್ಬ ಕೈದಿ ಜಯೇಶ್ ಪೂಜಾರಿಯನ್ನು ಈ ವರ್ಷದ ಮಾರ್ಚ್‌ನಲ್ಲಿ ಬೆದರಿಕೆ ಕರೆ ಸಂಬಂಧ ನಾಗ್ಪುರ ಪೊಲೀಸರು ಬಂಧಿಸಿದ್ದರು.
ನಿತಿನ್ ಗಡ್ಕರಿ
ನಿತಿನ್ ಗಡ್ಕರಿ

ಬೆಳಗಾವಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆಗಳಿಗೆ ಸಂಬಂಧಿಸಿದಂತೆ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿರುವ ಭಯೋತ್ಪಾದಕ ಅಫ್ಸರ್ ಪಾಷಾನನ್ನು ಎನ್‌ಐಎ ಕಸ್ಟಡಿಗೆ ತೆಗೆದುಕೊಂಡಿದೆ. ಹಿಂಡಲಗಾ ಜೈಲಿನಲ್ಲಿರುವ ಮತ್ತೊಬ್ಬ ಕೈದಿ ಜಯೇಶ್ ಪೂಜಾರಿಯನ್ನು ಈ ವರ್ಷದ ಮಾರ್ಚ್‌ನಲ್ಲಿ ಬೆದರಿಕೆ ಕರೆ ಸಂಬಂಧ ನಾಗ್ಪುರ ಪೊಲೀಸರು ಬಂಧಿಸಿದ್ದರು.

ಮಂಗಳೂರಿನ ಡಬಲ್ ಮರ್ಡರ್ ಆರೋಪಿ ಹಾಗೂ ವಿವಿಧ ಪ್ರಕರಣಗಳ ಪ್ರಮುಖ ಆರೋಪಿ ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ ಹಿಂಡಲಗಾ ಜೈಲಿನಲ್ಲಿದ್ದ. ಆತ ಜನವರಿ 14 ಮತ್ತು ಮಾರ್ಚ್ 21 ರಂದು ಹಿಂಡಲಗಾ ಜೈಲಿನಿಂದ ಸೆಲ್ ಫೋನ್ ಬಳಸಿ ಗಡ್ಕರಿ ಅವರಿಗೆ ಬೆದರಿಕೆ ಕರೆಗಳನ್ನು ಮಾಡಿದ್ದರು. 10 ಕೋಟಿ ನೀಡದಿದ್ದರೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದರು. ಪ್ರಕರಣದ ತನಿಖೆ ನಡೆಸಿದ ಮಹಾರಾಷ್ಟ್ರ ಪೊಲೀಸರು ಜಯೇಶ್‌ನನ್ನು ವಶಕ್ಕೆ ಪಡೆದಿದ್ದಾರೆ.

ಲಷ್ಕರ್-ಎ-ತೊಯ್ಬಾ ಜೊತೆ ಸಂಪರ್ಕ ಹೊಂದಿದ್ದ ಪಾಷಾ, ಬೆದರಿಕೆ ಕರೆಗಳನ್ನು ಮಾಡಲು ಜಯೇಶ್‌ಗೆ ಪ್ರಚೋದನೆ ನೀಡಿದ್ದಾನೆ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. 2005ರಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪಾಷಾ ಶಿಕ್ಷೆಗೆ ಗುರಿಯಾಗಿದ್ದಾನೆ.

ನಾಗಪುರ ಪೊಲೀಸರಿಂದ ಮಾಹಿತಿ ಪಡೆದ ಎನ್‌ಐಎ ಅಧಿಕಾರಿಗಳು, ಎರಡು ದಿನಗಳ ಹಿಂದೆ ಬೆಳಗಾವಿಗೆ ಆಗಮಿಸಿದ್ದರು. ಎಲ್ಲಾ ಪ್ರಕ್ರಿಯೆಗಳ ನಂತರ, ಎನ್‌ಐಎ ಅಧಿಕಾರಿಗಳು ಶನಿವಾರ ಪಾಷಾನನ್ನು ಕಸ್ಟಡಿಗೆ ತೆಗೆದುಕೊಂಡು ಮುಂಬೈಗೆ ತೆರಳಿದ್ದಾರೆ. ಆತನನ್ನು ಶನಿವಾರ ಇಡೀ ದಿನ ವಿಚಾರಣೆಗೆ ಒಳಪಡಿಸಲಾಗಿತ್ತು. ನಂತರ ಎನ್‌ಐಎ ಅಧಿಕಾರಿಗಳು ಆತನನ್ನು ನಾಗ್ಪುರ ಪೊಲೀಸರಿಗೆ ಒಪ್ಪಿಸಿದ್ದಾರೆ.

ರಾಜ್ಯದ ಪೊಲೀಸರು, ಜೈಲು ಅಧಿಕಾರಿಗಳ ನಡುವೆ ಘರ್ಷಣೆ

ಹಿಂಡಲಗಾ ಜೈಲಿನಲ್ಲಿ ಭದ್ರತೆ ವಿಚಾರವಾಗಿ ರಾಜ್ಯ ಪೊಲೀಸ್ ಅಧಿಕಾರಿಗಳು ಮತ್ತು ಜೈಲು ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬಂದಿರುವ ಬೆದರಿಕೆ ಕರೆಗಳ ಕುರಿತು ತನಿಖೆ ನಡೆಸಲು ನಾಗ್ಪುರ ಪೊಲೀಸರು ಮತ್ತು ಎನ್‌ಐಎ ಅಧಿಕಾರಿಗಳು ಗುರುವಾರ (ಜುಲೈ 13) ರಿಂದ ಬೆಳಗಾವಿಯಲ್ಲಿದ್ದರು. 

ಅಪರಾಧಿಗಳನ್ನು ಬಂಧಿಸಲು ನಾವು ಸಾಕಷ್ಟು ಪ್ರಯತ್ನಗಳನ್ನು ಮಾಡಿದ್ದೇವೆ ಎಂದು ಪೊಲೀಸರು ಜೈಲು ಅಧಿಕಾರಿಗಳಿಗೆ ತಿಳಿಸಿದರು. ಆದರೆ, ಜೈಲು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಜೈಲಿನೊಳಗೆ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು ಮತ್ತು ಚಾರ್ಜರ್‌ಗಳನ್ನು ಬಳಸಲು ಅನುಮತಿ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ನಿರ್ಲಕ್ಷ್ಯದಿಂದಾಗಿ ಖೈದಿಗಳು ಬೆದರಿಕೆ ಕರೆಗಳನ್ನು ಮಾಡಲು ಸಾಧ್ಯವಾಯಿತು ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com