ಶಾಸಕರ ಅಮಾನತು ಪ್ರಕರಣ ಪ್ರಜಾಪ್ರಭುತ್ವದ ಕಗ್ಗೊಲೆ- ಹೆಚ್ ಡಿಕೆ; ಇದು ಹಿಟ್ಲರ್ ಮನಸ್ಥಿತಿಯ ಸರ್ಕಾರ-ಬೊಮ್ಮಾಯಿ ಕಿಡಿ

ಸಭಾಧ್ಯಕ್ಷರ ಪೀಠದ ಮೇಲೆ ಪೇಪರ್ ತೂರಿ ಸ್ಪೀಕರ್ ವಿರುದ್ಧ ಪ್ರತಿಭಟನೆ ನಡೆಸಿದ್ದ ಬಿಜೆಪಿಯ 10 ಶಾಸಕರನ್ನು ಸದನದಿಂದ ಅಮಾನತುಗೊಳಿಸಿರುವುದಕ್ಕೆ ಮಾಜಿ ಸಿಎಂ ಹೆಚ್ ಡಿಕೆ, ಬಸವರಾಜ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ಸರ್ಕಾರದ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಭಟನೆ
ವಿಧಾನಸೌಧದಲ್ಲಿ ಸರ್ಕಾರದ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಭಟನೆ

ಬೆಂಗಳೂರು: ಸಭಾಧ್ಯಕ್ಷರ ಪೀಠದ ಮೇಲೆ ಪೇಪರ್ ತೂರಿ ಸ್ಪೀಕರ್ ವಿರುದ್ಧ ಪ್ರತಿಭಟನೆ ನಡೆಸಿದ್ದ ಬಿಜೆಪಿಯ 10 ಶಾಸಕರನ್ನು ಸದನದಿಂದ ಅಮಾನತುಗೊಳಿಸಿರುವುದಕ್ಕೆ ಬಿಜೆಪಿ ನಾಯಕ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಜೆಡಿಎಸ್ ನಾಯಕ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. 

ಸರ್ಕಾರದ ನಡೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರಿಗೆ ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಿಎಂ ಹೆಚ್ ಡಿಕೆ, ಕಲಾಪದಿಂದ ಶಾಸಕರನ್ನು ಅಮಾನತು ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಸ್ಪೀಕರ್ ಅವರು ಉದ್ದೇಶಪೂರ್ವಕವಾಗಿ ಶಾಸಕರನ್ನು ಅಮಾನತು ಮಾಡಿದ್ದಾರೆ. ಮುಖ್ಯಮಂತ್ರಿಯ ಸೂಚನೆಯ ಮೇರೆಗೆ ಸ್ಪೀಕರ್ ಈ ರೀತಿ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. 

ದಲಿತ ವ್ಯಕ್ತಿಯೋರ್ವ ಸಭಾಧ್ಯಕ್ಷರ ಪೀಠದಲ್ಲಿ ಕುಳಿತಿದ್ದಾರೆ ಎಂದು ಸಮರ್ಥನೆ ಮಾಡುತ್ತಿರುವ ಕಾಂಗ್ರೆಸ್ ನದ್ದು ಕ್ಷುಲ್ಲಕ, ಕೀಳು ಮಟ್ಟದ ಅಭಿರುಚಿಯಾಗಿದೆ, ದಲಿತರ ಅನುಕಂಪ ಪಡೆಯಲು ಕಾಂಗ್ರೆಸ್ ನಾಯಕರು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಪೀಠದಲ್ಲಿ ‌ಕುಳಿತಿರೋರು ಉಪ ಸಭಾಧ್ಯಕ್ಷರು. ಆ ವಿಷಯವನ್ನು ಕಾಂಗ್ರೆಸ್ ನವರು ಅರ್ಥ ಮಾಡಿಕೊಳ್ಳಬೇಕು ಪ್ರತಿಪಕ್ಷಗಳ ಒಕ್ಕೂಟಕ್ಕೆ INDIA ಎಂಬ ಹೆಸರಿಟ್ಟಿರುವ ಕಾಂಗ್ರೆಸ್ ಇಂದು ಪ್ರತಿಪಕ್ಷಗಳನ್ನು ಹತ್ತಿಕ್ಕಲು ಹೊರಟಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಇದೇ ವೇಳೆ ಪ್ರತಿಭಟನೆಯಲ್ಲಿ  ಭಾಗವಹಿಸಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಇದು ಸರ್ವಾಧಿಕಾರಿ, ಹಿಟ್ಲರ್ ಧೋರಣೆಯ ಸರ್ಕಾರವಾಗಿದೆ. ಸ್ಪೀಕರ್ ಸರ್ಕಾರದ ಜೊತೆ ಸೇರಿ ವಿಧಾನಸಭೆಯಲ್ಲಿ ಹಿಂದೆಂದೂ ನಡೆಯದಂತಹ ಕುಕೃತ್ಯವನ್ನು ನಡೆಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಪ್ರತಿಪಕ್ಷದ ಶಾಸಕರನ್ನು ಅಮಾನತು ಮಾಡಿರುವುದು  ಪ್ರಜಾಪ್ರಭುತ್ವಕ್ಕೆ ಮಾರಕವಾಗಿದ್ದು ಈ ವಿಷಯವನ್ನು ನಾವು ರಾಷ್ಟ್ರಪತಿಗಳವರೆಗೂ ತೆಗೆದುಕೊಂಡು ಹೋಗುತ್ತೆವೆ ಇಂತಹ ಸರ್ಕಾರ ರಾಜ್ಯಕ್ಕೆ ಮಾರಕವಾಗಿದ್ದು, ಇದು ಜನವಿರೋಧಿ ಸರ್ಕಾರವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ತಾನು ಮಾಡಿರುವ ತಪ್ಪು ಮುಚ್ಚಿಟ್ಟುಕೊಳ್ಳುವುದಕ್ಕಾಗಿ ಸ್ಪೀಕರ್ ನ್ನು ಬಳಕೆ ಮಾಡಿದ್ದಾರೆ ಎಂದು ಬೊಮ್ಮಾಯಿ ಆರೋಪಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com