ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಮುನ್ನೆಚ್ಚರಿಕೆ ಕ್ರಮ: ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಹಣ ಬಿಡುಗಡೆ

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನಚ್ಚರಿಕೆಯಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ  ರೂ. 5.14 ಕೋಟಿ ಹಣವನ್ನ ಬಿಡುಗಡೆ ಮಾಡಲಾಗಿದೆ.
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ
Updated on

ಬೆಂಗಳೂರು: ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನಚ್ಚರಿಕೆಯಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ  ರೂ. 5.14 ಕೋಟಿ ಹಣವನ್ನ ಬಿಡುಗಡೆ ಮಾಡಲಾಗಿದೆ. ಇದರಿಂದ, ಈ ಹಿಂದೆ ಒದಗಿಸಿದ್ದ 1 ಕೋಟಿ ಹಣ ಸೇರಿದಂತೆ ಸರ್ಕಾರ ಈವರೆಗೂ ಒಟ್ಟು ರೂ. 6.14 ಕೋಟಿ ಹಣ ನೀಡಿದಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. 

ರಾಜ್ಯದ ಹಲವೆಡೆ ಮುಂಗಾರಿನ ಅಭಾವ ಎದುರಾಗಿದ್ದು ಹಲವು ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಲಕ್ಷಣಗಳು ಕಾಣುತ್ತಿವೆ. ಹೀಗಾಗಿ ಗ್ರಾಮೀಣ ಭಾಗದ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ರಾಜ್ಯದಲ್ಲಿ ಬರದ ಛಾಯೆ ಎದುರಾಗುವ ಮುನ್ನವೇ ಎಲ್ಲಾ ಜಿಲ್ಲೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಕರೆದು ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು ಎಂದು ಅವರು ಹೇಳಿದ್ದಾರೆ. 

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಎಲ್ಲಾ ಜಿಲ್ಲೆಗಳ ಸಿಇಒಗಳೊಂದಿಗೆ ಕಳೆದ ಒಂದು ತಿಂಗಳಲ್ಲಿ 2 ವಿಸ್ತ್ರತ ಸಭೆ ನಡೆಸಿ ಕುಡಿಯುವ ನೀರಿಗೆ ಸಮಸ್ಯೆ ಎದುರಾಗದಂತೆ ಪೂರ್ವ ನಿಯೋಜಿತ ರೂಪುರೇಷೆಯನ್ನ (ಕಂಟಿನ್ಜೆನ್ಸಿ ಪ್ಲಾನ್) ತಯಾರಿಸುವಂತೆ ಸೂಚನೆ ನೀಡಲಾಗಿತ್ತು. ಇದೀಗ ಆ ವರದಿ ಪ್ರಕಾರ ಜಿಲ್ಲಾವಾರು ಎಷ್ಟು ತಾಲೂಕುಗಳಲ್ಲಿ ಮಳೆಯಾಗಿದೆ? ಎಷ್ಟು ತಾಲೂಕಿನಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಲಿದೆ? ಎಲ್ಲೆಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ಕ್ಷೀಣಿಸುತ್ತಿದೆ, ಯಾವ ಹಳ್ಳಿಗಳಿಗೆ ಕುಡಿಯುವ ನೀರನ್ನು ಟ್ಯಾಂಕರ್ ಅಥವಾ ಬಾಡಿಗೆ ಬೋರ್ ವೆಲ್ ಮೂಲಕ ಒದಗಿಸಬೇಕು ಎಂಬುದನ್ನ ಸಂಪೂರ್ಣವಾಗಿ ಪರಿಶೀಲಿಸಿ ಅಧಿಕಾರಿಗಳಿಂದ ವರದಿ ಸಿದ್ದಪಡಿಸಿ ಹಣ ಬಿಡುಗಡೆ ಮಾಡಲಾಗಿದೆ. ಈ ಮೂಲಕ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆಯ ಯಾವುದೇ ಪ್ರಕರಣವೂ ಎದುರಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ವರದಿಯಲ್ಲಿ ನೀಡಿರುವಂತೆ ಒಟ್ಟು 101 ತಾಲೂಕುಗಳ 366 ಗ್ರಾಮ ಪಂಚಾಯತಿಗಳಲ್ಲಿ 514 ಹಳ್ಳಿಗಳಿಗೆ 254 ಟ್ಯಾಂಕರ್ ಗಳಲ್ಲಿ ನೀರು ಪೂರೈಕೆ ಮಾಡಲಾಗುವುದು. ಒಟ್ಟು ರಾಜ್ಯಾದ್ಯಂತ ಟ್ಯಾಂಕರ್ ಗಳಲ್ಲಿ ಪ್ರತಿ ದಿನ 703 ಟ್ರಿಪ್ ಗಳ ಮೂಲಕ ಕುಡಿಯುವ ನೀರನ್ನ ಪೂರೈಕೆ ಮಾಡಲಾಗುವುದು. ಜೊತೆಗೆ 465 ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆ ಪಡೆದು ಕುಡಿಯುವ ನೀರನ್ನು ಜನರಿಗೆ ಸರಬರಾಜು ಮಾಡಲೂ ಹಣ ಒದಗಿಸಲಾಗಿದೆ. ಒಟ್ಟು ಟ್ಯಾಂಕರ್ ನೀರು ಪೂರೈಕೆಗೆ ₹4.21 ಕೋಟಿ ಹಣವನ್ನ ನೀಡಲಾಗಿದ್ದು, ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆ ಪಡೆಯಲು 93 ಲಕ್ಷ ಹಣವನ್ನ ನೀಡಲಾಗಿದೆ.  ಈ ಮೂಲಕ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಮುನ್ನಚ್ಚರಿಕೆಯಿಂದ ಸರ್ಕಾರ ಸರ್ವ ಸನ್ನದ್ಧವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com