ಉಡುಪಿ ಕಾಲೇಜು ಶೌಚಾಲಯದಲ್ಲಿ ವಿಡಿಯೊ: ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಸದಸ್ಯರಿಂದ ಗೃಹ ಸಚಿವರ ಮನೆಗೆ ಮುತ್ತಿಗೆ

ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯೊಬ್ಬರ ವಿಡಿಯೋವನ್ನು ಆಕೆಯ ಸಹ ವಿದ್ಯಾರ್ಥಿನಿಯರು ರೆಕಾರ್ಡ್ ಮಾಡಿರುವ ಪ್ರಕರಣ ಈಗ ವಿವಿಧ ರೂಪ ಪಡೆದುಕೊಳ್ಳುತ್ತಿದ್ದು ಪ್ರಕರಣ ಬಿಗಡಾಯಿಸುತ್ತಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ವಾಶ್‌ರೂಮ್ ನಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ಭಯೋತ್ಪಾದಕರನ್ನು ಬೆಂಬಲಿಸುತ್ತಿದೆ. ಆರೋಪಿ ಯುವತಿಯರ ಪರವಾಗಿ ಸರ್ಕಾರ ನಿಂತುಕೊಂಡಂತಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಇಂದು ಗುರುವಾರ ಗೃಹ ಸಚಿವ ಡಾ ಜಿ ಪರಮೇಶ್ವರ ಅವರ ಬೆಂಗಳೂರಿನ ನಿವಾಸದ ಬಳಿ ಪ್ರತಿಭಟನೆ ನಡೆಸಿದರು. 

ಅದೇ ರೀತಿ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕರಾವಳಿ ಜಿಲ್ಲಾ ಕೇಂದ್ರವಾದ ಉಡುಪಿ ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬೆಂಗಳೂರಿನಲ್ಲಿ ಮೂರು ವರ್ಷಗಳ ಹಿಂದೆ ನಡೆದ ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆಯಲ್ಲಿ ಗಲಭೆಕೋರರ ವಿರುದ್ಧದ ಪೊಲೀಸ್ ಕೇಸ್ ಹಿಂಪಡೆಯಲು ಪರಮೇಶ್ವರ್ ಅವರು ನೋಡುತ್ತಿದ್ದಾರೆ, ಆರೋಪಿಗಳ ಪರವಾಗಿದ್ದಾರೆ ಎಂದು ಆರೋಪಿಸಿ ಪರಮೇಶ್ವರ ಅವರ ನಿವಾಸದ ಬಳಿ ಘೋಷಣೆಗಳನ್ನು ಕೂಗಿದರು. 

ಆಗಸ್ಟ್ 2020 ರಲ್ಲಿ ಅಖಂಡ ಶ್ರೀನಿವಾಸ ಮೂರ್ತಿಯವರ ಸಂಬಂಧಿಯೊಬ್ಬರು ಅವಹೇಳನಕಾರಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನಿಂದಾಗಿ ಡಿಜೆ ಹಳ್ಳಿ ಮತ್ತು ಕೆ ಜಿ ಹಳ್ಳಿಯಲ್ಲಿ ಭುಗಿಲೆದ್ದ ಗಲಭೆಯಲ್ಲಿ ಮೂವರು ಮೃತಪಟ್ಟು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. 

ಬೆಂಗಳೂರಿನ ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ, ಶಿವಮೊಗ್ಗ, ಹುಬ್ಬಳ್ಳಿ ಸೇರಿದಂತೆ ಇತರೆಡೆ ನಡೆದ ಪ್ರತಿಭಟನೆ ಮತ್ತು ಗಲಭೆಗಳಿಗೆ ಸಂಬಂಧಿಸಿದಂತೆ ಸುಳ್ಳು ಪ್ರಕರಣಗಳಡಿ ಬಂಧಿಸಲಾಗಿರುವ ಅಮಾಯಕ ಯುವಕರು ಮತ್ತು ವಿದ್ಯಾರ್ಥಿಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯುವಂತೆ ಕಾಂಗ್ರೆಸ್ ಶಾಸಕರೊಬ್ಬರು ಮಾಡಿರುವ ಮನವಿಯನ್ನು ಪರಿಶೀಲಿಸುವಂತೆ ಪರಮೇಶ್ವರ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. 

ಈ ಕುರಿತು ಪ್ರತಿಪಕ್ಷ ಬಿಜೆಪಿ ಕಟುವಾಗಿ ಪ್ರತಿಕ್ರಿಯಿಸಿದ್ದು, ರಾಜ್ಯದ ಕಾಂಗ್ರೆಸ್ ಸರಕಾರವು ಒಂದು ಸಮುದಾಯದ ಕೋಮು ಅಪರಾಧಿಗಳಿಗೆ ಕ್ಲೀನ್ ಚಿಟ್ ನೀಡಿ ಜಿಹಾದಿಗಳು ಮತ್ತು ಪಿಎಫ್‌ಐ ಭಯೋತ್ಪಾದಕರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ ಎಂದು ಆರೋಪಿಸಿದೆ.

ಪರಮೇಶ್ವರ ಅವರು ಜುಲೈ 19 ರಂದು ಪ್ರಧಾನ ಕಾರ್ಯದರ್ಶಿ ಕಾರಾಗೃಹಗಳು, ನಾಗರಿಕ ರಕ್ಷಣೆ ಮತ್ತು ಸಹಾಯಕ ಸೇವೆಗಳು (ಪಿಸಿಎಎಸ್), ಗೃಹ ಇಲಾಖೆಗೆ ಪತ್ರದಲ್ಲಿ ನರಸಿಂಹರಾಜ ಶಾಸಕ ಮತ್ತು ಮಾಜಿ ಸಚಿವ ತನ್ವೀರ್ ಸೇಠ್ ಅವರ ಮನವಿ ಪತ್ರವನ್ನು ಉಲ್ಲೇಖಿಸಿದ್ದಾರೆ.

‘ಬೆಂಗಳೂರಿನ ಡಿಜೆಹಳ್ಳಿ ಹಾಗೂ ಕೆ.ಜಿ.ಹಳ್ಳಿ, ಶಿವಮೊಗ್ಗ, ಹುಬ್ಬಳ್ಳಿ ಮತ್ತಿತರ ಕಡೆ ನಡೆದ ಪ್ರತಿಭಟನೆ ಮತ್ತು ಗಲಭೆಗೆ ಸಂಬಂಧಿಸಿದಂತೆ ಅಮಾಯಕ ಯುವಕರು ಮತ್ತು ವಿದ್ಯಾರ್ಥಿಗಳನ್ನು ಸುಳ್ಳು ಪ್ರಕರಣಗಳಡಿ ಬಂಧಿಸಿ ನಿಯಮಾನುಸಾರ ಪರಿಶೀಲನೆ ನಡೆಸಿ ಪ್ರಕರಣಗಳನ್ನು ಹಿಂಪಡೆಯುವಂತೆ ಮನವಿ ಮಾಡಲಾಗಿದೆ.

ಪರಿಶೀಲಿಸಿದ ನಂತರ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಗೃಹ ಸಚಿವರ ಟಿಪ್ಪಣಿಯಲ್ಲಿ ತಿಳಿಸಲಾಗಿದೆ ಎಂದರು. ಪೊಲೀಸರ ಬ್ಯಾರಿಕೇಡ್‌ನಿಂದಾಗಿ ಕಾರ್ಯಕರ್ತರು ಸಚಿವರ ಮನೆ ಬಳಿ ಹೋಗಲು ಸಾಧ್ಯವಾಗಲಿಲ್ಲ. ಅವರೆಲ್ಲರನ್ನೂ ಬಂಧಿಸಿ ಕರೆದೊಯ್ದರು.

ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಮಹಿಳಾ ಘಟಕ ಪ್ರತಿಭಟನೆ: ಉಡುಪಿ ಕಾಲೇಜಿನ ವಾಶ್ ರೂಂ ವಿಡಿಯೋ ಪ್ರಕರಣದಲ್ಲಿ ಆರೋಪಿ ಯುವತಿಯರನ್ನು ಕಾಂಗ್ರೆಸ್ ಸರಕಾರ ರಕ್ಷಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಸದಸ್ಯರು ಘೋಷಣೆಗಳನ್ನು ಕೂಗಿದರು. ಉಡುಪಿ ಪ್ರಕರಣವನ್ನು ಕಾಂಗ್ರೆಸ್ ಸರಕಾರ ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದರು. 

ಶಬ್ನಾಜ್, ಅಲ್ಫಿಯಾ ಮತ್ತು ಅಲೀಮಾ ಎಂಬ ಮೂವರು ವಿದ್ಯಾರ್ಥಿನಿಯರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪ್ಯಾರಾಮೆಡಿಕಲ್ ಕಾಲೇಜಿನ ಆಡಳಿತ ಮಂಡಳಿಯು ಕಳೆದ ವಾರ ವಾಶ್‌ರೂಮ್‌ನಲ್ಲಿ ಸಹ ವಿದ್ಯಾರ್ಥಿಯನ್ನು ರಹಸ್ಯವಾಗಿ ಚಿತ್ರೀಕರಿಸಿದ ಘಟನೆ ನಡೆದಿದೆ. ಮೂವರು ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ.

ಉಡುಪಿಯಲ್ಲೂ ವಿದ್ಯಾರ್ಥಿಗಳು ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಸಂದರ್ಭದಲ್ಲಿ, ಎಬಿವಿಪಿ ಕಾರ್ಯಕರ್ತರು, ಇದರಲ್ಲಿ ಬಹುಪಾಲು ಹುಡುಗಿಯರು, "ನ್ಯಾಯ" ಕೋರಿ ಘೋಷಣೆಗಳನ್ನು ಎತ್ತಿದರು. ಪ್ರಕರಣ ದಾಖಲಿಸಲು ಸರ್ಕಾರ ಏಕೆ ವಿಳಂಬ ಮಾಡುತ್ತಿದೆ ಎಂದು ಕೇಳಿದರು. 
ಪ್ರಕರಣದ ಬಗ್ಗೆ ಸ್ವತಂತ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com