ರಾಜ್ಯ ಸರ್ಕಾರ ಶೀಘ್ರದಲ್ಲೇ 15,000 ಕಾನ್ಸ್ಟೆಬಲ್ಗಳ ನೇಮಕಾತಿ ಮಾಡಿಕೊಳ್ಳಲಿದೆ: ಜಿ ಪರಮೇಶ್ವರ
ಬೆಂಗಳೂರು: 15,000 ಪೊಲೀಸ್ ಪೇದೆಗಳ ನೇಮಕಾತಿ ಪ್ರಕ್ರಿಯೆಗೆ ಇಲಾಖೆ ಶೀಘ್ರವೇ ಚಾಲನೆ ನೀಡಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಶನಿವಾರ ಹೇಳಿದ್ದಾರೆ.
ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದ್ದು, ಅದಕ್ಕೆ ಸಿದ್ಧತೆ ನಡೆದಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಪಿಎಸ್ಐ ನೇಮಕಾತಿ ಹಗರಣದ ಕುರಿತು ಪ್ರತಿಕ್ರಿಯಿಸಿದ ಅವರು, 'ಎಸ್ಐಗಳ ನೇಮಕಾತಿಯಲ್ಲಿನ ಅಕ್ರಮಗಳ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ 53 ಮಂದಿಯನ್ನು ದೋಷಾರೋಪಣೆ ಮಾಡಲಾಗಿದೆ. ಮರು ಪರೀಕ್ಷೆ ನಡೆಸದಂತೆ ಹೈಕೋರ್ಟ್ ಆದೇಶ ನೀಡಿರುವುದರಿಂದ ತಜ್ಞರ ಸಲಹೆ ಪಡೆದು ಅಭ್ಯರ್ಥಿಗಳಿಗೆ ನ್ಯಾಯ ದೊರಕಿಸಿಕೊಡಲು ಸೂಕ್ತ ಕ್ರಮ ಕೈಗೊಳ್ಳುತ್ತೇವೆ' ಎಂದರು.
ಚುನಾವಣಾ ಗ್ಯಾರಂಟಿಗಳ ಕುರಿತ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, 'ಗ್ಯಾರಂಟಿಗಳ ಅನುಷ್ಠಾನವು ಅಭಿವೃದ್ಧಿ ಯೋಜನೆಗಳನ್ನು ನಿಧಾನಗೊಳಿಸದಂತೆ ನಾವು ಖಚಿತಪಡಿಸಿಕೊಳ್ಳುತ್ತೇವೆ' ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳಿಗೆ ಹಣ ಕ್ರೋಢೀಕರಿಸಲು ಸರ್ಕಾರ ಸೂಕ್ತ ಆದ್ಯತೆ ನೀಡಿದೆ. ಖಾತರಿ ಯೋಜನೆಗಳಿಗೆ ಡಿಪಿಆರ್ ತಯಾರಿಸುವಾಗ ಸಂಪನ್ಮೂಲಗಳ ವಿವೇಚನಾಶೀಲ ಬಳಕೆಗೆ ಒತ್ತು ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ರಾಜ್ಯದ ಬೊಕ್ಕಸಕ್ಕೆ ಹೊರೆಯಾಗುವ ಮಂಡಳಿಗಳು ಮತ್ತು ನಿಗಮಗಳನ್ನು ರದ್ದುಗೊಳಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.
ಜುಲೈನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ ಎಂದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ