ಬೆಳಗಾವಿ: ನಗರದಲ್ಲಿ ವಿವಿಧ ಸರ್ಕಾರಿ ಕಚೇರಿಗಳ ಸುಸಜ್ಜಿತ ಬಹುಮಹಡಿ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ಶನಿವಾರ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿತು.
ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ನಿರ್ದೇಶನದಂತೆ ನಗರಕ್ಕೆ ಆಗಮಿಸಿದ ತಂಡವು ಸ್ಥಳ ವೀಕ್ಷಿಸಿ, ಅಗತ್ಯ ಮಾಹಿತಿ ಪಡೆದುಕೊಂಡಿತು.
ಲೋಕೋಪಯೋಗಿ ಇಲಾಖೆಯ ಪ್ರಭಾರ ಮುಖ್ಯ ವಾಸ್ತುಶಿಲ್ಪಿ ಆರ್.ಶ್ರೀಧರ್ ಅವರ ನೇತೃತ್ವದ ತಂಡವು ಬಹುಮಹಡಿ ಕಟ್ಟಡವನ್ನು ನಿರ್ಮಿಸಲು ಉದ್ಧೇಶಿಸಿರುವ ಜಾಗಗಳನ್ನು ವೀಕ್ಷಿಸಿತು.
ನಗರದಲ್ಲಿ ಈಗಿರುವ ಜಿಲ್ಲಾಧಿಕಾರಿ ಕಚೇರಿ, ಕಾಡಾ, ತೋಟಗಾರಿಕೆ, ಉಪ ನೋಂದಣಾಧಿಕಾರಿ ಕಚೇರಿ, ಸಣ್ಣ ಉಳಿತಾಯ, ಗ್ರಂಥಾಲಯ, ಲೋಕಾಯುಕ್ತ, ಉಪ ವಿಭಾಗಾಧಿಕಾರಿಗಳ ಕಚೇರಿ, ತಾಲ್ಲೂಕು ಪಂಚಾಯಿತಿ ಸೇರಿದಂತೆ ವಿವಿಧ ಕಚೇರಿಗಳನ್ನು ತೆರವುಗೊಳಿಸಿ ಅದೇ ಜಾಗೆಯಲ್ಲಿ ಬಹುಮಹಡಿ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿಯೂ ಸೇರಿದಂತೆ ವಿವಿಧ ಕಚೇರಿಗಳನ್ನು ಒಂದೇ ಸೂರಿನಡಿಗೆ ತಂದು ವಿಶಾಲವಾದ ಪಾರ್ಕಿಂಗ್ ಒಳಗೊಂಡಂತೆ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ಒದಗಿಸುವ ಉದ್ದೇಶವಿದೆ.
ಈಚೆಗೆ ಸುವರ್ಣ ವಿಧಾನಸೌಧದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣದ ಕುರಿತು ಪ್ರಾಥಮಿಕ ಚರ್ಚೆ ನಡೆಸಿದ್ದ ಸಚಿವರು, ಈ ಕುರಿತು ಸ್ಥಳ ಪರಿಶೀಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದರು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರನ್ನು ಭೇಟಿ ಮಾಡಿದ ಲೋಕೋಪಯೋಗಿ ಇಲಾಖೆಯ ಪ್ರಭಾರ ಮುಖ್ಯ ವಾಸ್ತುಶಿಲ್ಪಿ ಆರ್.ಶ್ರೀಧರ್ ಅವರು, ಉದ್ಧೇಶಿತ ಬಹುಮಹಡಿ ಕಟ್ಟಡದಲ್ಲಿ ಇರಬೇಕಾದ ಅಗತ್ಯಗಳು, ವಿನ್ಯಾಸ ಮತ್ತಿತರ ವಿಷಯಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿದರು.
ಲೋಕೋಪಯೋಗಿ ಇಲಾಖೆಯ ಉಪ ವಾಸ್ತುಶಿಲ್ಪಿ ಆಶಾ, ಬೆಳಗಾವಿಯ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಎಸ್.ಸೊಬರದ, ಕಾರ್ಯನಿರ್ವಾಹಕ ಎಂಜಿನಿಯರ್ ಸುಭಾಸ್ ನಾಯ್ಕ, ರಮೇಶ್ ಮೇತ್ರಿ ಇದ್ದರು.
Advertisement