ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಭಾನುವಾರ ಬೆಳಿಗ್ಗೆ 11ಕ್ಕೆ ವಿಧಾನಸೌಧದ ಪೂರ್ವದ್ವಾರದ ಮುಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರಿಸಲಿದ್ದು, ಮಧ್ಯಾಹ್ನ 1 ರಿಂದಲೇ ರಾಜ್ಯದ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ ಗಳಲ್ಲಿ ಸಂಚರಿಸಬಹುದಾಗಿದೆ.
ಕಾರ್ಯಕ್ರಮದಲ್ಲಿ ಬಿಎಂಟಿಸಿಯ 2 ಬಸ್ ಗಳಿಗೆ ಚಾಲನೆ ನೀಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಂಕೇತಿಕವಾಗಿ ಆಯ್ದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದ್ದಾರೆ. ನಂತರ ವಿಧಾನಸೌಧದಿಂದ ಮೆಜೆಸ್ಟಿಕ್ ವರೆಗೆ ಬಿಎಂಟಿಸಿ ಬಸ್ ನಲ್ಲಿ ಆಗಮಿಸುವರು. ಮೆಜೆಸ್ಟಿಕ್ ನಲ್ಲಿ ಬಿಎಂಟಿಸಿ ಮತ್ತು ಕೆಎಸ್ಆರ್'ಟಿಸಿ ಬಸ್ ನಿಲ್ದಾಣದಲ್ಲಿ ಸಾಂಕೇತಿಕವಾಗಿ ಪ್ರಯಾಣಿಕರಿಗೆ ಶೂನ್ಯ ದರದ ಟಿಕೆಟ್ ವಿತರಿಸುವರು.
ಈ ವೇಳೆ ಡಿಸಿಎಂ ಡಿಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೇರಿದಂತ ಮತ್ತಿತರರು ಮುಖ್ಯಮಂತ್ರಿಗಳಿಗೆ ಸಾಥ್ ನೀಡಲಿದ್ದಾರೆ.
ಮಹಿಳೆಯರು ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಅಥವಾ ಇನ್ನಿತರೆ ಸೂಕ್ತ ದಾಖಲೆಗಳನ್ನು ತೋರಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.
Advertisement