ಬೆಂಗಳೂರು: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದ ಪ್ರಚಾರದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟರು ಎಂದು ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ಎಂದು ದೂರಿ ಸಲ್ಲಿಸಲಾಗಿದ್ದ ಖಾಸಗಿ ದೂರನ್ನು ಜನಪ್ರತಿನಿಧಿಗಳ ನ್ಯಾಯಾಲಯ ವಜಾಗೊಳಿಸಿದೆ.
ಈ ಕುರಿತಂತೆ ಶೇಠ್ ಮತ್ತು ಮಲ್ಲಯ್ಯ ಹಿರೇಮಠ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಮಂಗಳವಾರ ದೂರನ್ನು ವಚಾಗೊಳಿಸಿ ಆದೇಶಿಸಿದ್ದಾರೆ.
ಶಂಕರ ಶೇಠ್ ಮತ್ತು ಮಲ್ಲಯ್ಯ ಹಿರೇಮಠ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರಿನಲ್ಲಿ, ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆ ವೇಳೆ ಪತ್ರಕರ್ತರೊಬ್ಬರ ಪ್ರಶ್ನೆಗೆ ನೀಡಿದ ಉತ್ತರದಿಂದ ಲಿಂಗಾಯತ ಸಮುದಾಯಕ್ಕೆ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿದ್ದರು.
ನಿಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡುತ್ತದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಈಗ ಲಿಂಗಾಯತ ಮುಖ್ಯಮಂತ್ರಿಗಳೇ ಇದ್ದಾರಲ್ಲ. ಅವರೇ ಭ್ರಷ್ಟಾಚಾರ ನಡೆಸಿ ರಾಜ್ಯವನ್ನು ಹಾಳು ಮಾಡಿದ್ದಾರೆ ಎಂದಿದ್ದರು.
Advertisement