ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯ ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ಬೆಂಗಳೂರಿನ ಸಿಬಿಐ ಕೋರ್ಟ್ ಶುಕ್ರವಾರ ತೀರ್ಪು ನೀಡಿದೆ.
2012ರಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಸಿಬಿಐ ವಿಷೇಶ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಪಿಬಿ ಅವರು, ಆರೋಪಿ ಸಂತೋಷ್ ರಾವ್ರನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದಾರೆ.
ಬರೋಬ್ಬರಿ 11 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಸಿಬಿಐ ಕೋರ್ಟ್ ಇಂದು ಅಂತಿಮ ತೀರ್ಪು ಪ್ರಕಟಿಸಿದ್ದು, ಸಾಕ್ಷ್ಯಾಧಾರಗಳ ಕೊರತೆ ಕಾರಣಕ್ಕೆ ಆರೋಪಿ ಸಂತೋಷ್ ರಾವ್ ನಿರ್ದೋಷಿ ಎಂದು ಹೇಳಿದೆ.
ಧರ್ಮಸ್ಥಳದ ಪಾಂಗಳ ನಿವಾಸಿ ಚಂದ್ರಪ್ಪ ಗೌಡ ಹಾಗೂ ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯ ಉಜಿರೆಯ ಎಸ್ಡಿಎಂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಅಕ್ಟೋಬರ್ 9, 2012ರಂದು ಸಂಜೆ ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದಾಗ ಸೌಜನ್ಯ ನಾಪತ್ತೆಯಾಗಿದ್ದಳು, ಮರು ದಿನ ರಾತ್ರಿ ಮಣ್ಣಸಂಕ ಬಳಿಯಲ್ಲಿ ಸೌಜನ್ಯ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದಾಖಲಾಗಿತ್ತು.
ಶಂಕಿತ ಆರೋಪಿ ಸಂತೋಷ್ ರಾವ್ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ನಿವಾಸಿಯಾಗಿದ್ದು, ಆರೋಪಿಯನ್ನು ಬಾಹುಬಲಿ ಬೆಟ್ಟದ ಬಳಿಯಲ್ಲಿ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.
Advertisement