ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ. ಎನ್‌ಕೆ ಲೋಕನಾಥ್ ನೇಮಕಕ್ಕೆ ಹೈಕೋರ್ಟ್ ತಡೆ

ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಪ್ರೊ. ಎನ್‌ಕೆ ಲೋಕನಾಥ್ ಅವರನ್ನು ನೇಮಕ ಮಾಡಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠ ಮಧ್ಯಂತರ ತಡೆ ನೀಡಿದೆ.
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Updated on

ಬೆಂಗಳೂರು: ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಪ್ರೊ. ಎನ್‌ಕೆ ಲೋಕನಾಥ್ ಅವರನ್ನು ನೇಮಕ ಮಾಡಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠ ಮಧ್ಯಂತರ ತಡೆ ನೀಡಿದೆ.

ಕುಲಪತಿಯನ್ನಾಗಿ ಲೋಕನಾಥ್ ಅವರ ನೇಮಕವನ್ನು ಪ್ರಶ್ನಿಸಿ ಹೈದರಾಬಾದ್ ವಿಶ್ವವಿದ್ಯಾಲಯದ ಪ್ರೊ. ಶರತ್ ಅನಂತಮೂರ್ತಿ (ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಯು.ಆರ್. ಅನಂತಮೂರ್ತಿಯವರ ಪುತ್ರ) ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಇಎಸ್ ಇಂದಿರೇಶ್ ಅವರಿದ್ದ ಪೀಠವು ವಿಚಾರಣೆ ನಡೆಸಿತು.

ಪ್ರೊ. ಲೋಕನಾಥ್ ಅವರು ಕ್ರಿಮಿನಲ್ ಆರೋಪ ಎದುರಿಸುತ್ತಿದ್ದು, ಈ ಹುದ್ದೆಗೆ ಅರ್ಹರಲ್ಲ ಎಂದು ಆರೋಪಿಸಲಾಗಿದೆ. ಹೀಗಾಗಿ, ಕುಲಪತಿ ನೇಮಕಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್, ವಿಚಾರಣೆಯನ್ನು ಬುಧವಾರ ಮುಂದೂಡಿತು.

5ನೇ ಪ್ರತಿವಾದಿ (ಪ್ರೊ. ಲೋಕನಾಥ್) ಯನ್ನು ಕುಲಪತಿ ಹುದ್ದೆಗೆ ಪರಿಗಣಿಸಲು ಅರ್ಹರಲ್ಲ. ಉನ್ನತ ಶಿಕ್ಷಣ ಇಲಾಖೆ ಸಿದ್ಧಪಡಿಸಿದ ಪಟ್ಟಿಯಲ್ಲಿ ಅವರ ಹೆಸರಿರಲಿಲ್ಲ. ವಿಶ್ವವಿದ್ಯಾಲಯದ ಕಾಯ್ದೆಯನ್ವಯ ನಿರ್ಧಿಷ್ಟ ಅರ್ಹತೆ ಇಲ್ಲದಿದ್ದರೂ, ಲೋಕನಾಥ್ ಅವರನ್ನು ಕುಲಪತಿಯನ್ನಾಗಿ ನೇಮಿಸಲಾಗಿದೆ. ನಿಯಮಾವಳಿಗಳಿಗೆ ವಿರುದ್ಧವಾಗಿ ಶೋಧನಾ ಸಮಿತಿಯು ಅವರ ಹೆಸರನ್ನು ಶಿಫಾರಸು ಮಾಡಿದೆ ಮತ್ತು ಅವುಗಳನ್ನು ರಾಜ್ಯ ಸರ್ಕಾರಕ್ಕೆ ರವಾನಿಸಲಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಪ್ರೊ. ಶರತ್ ಅವರು 2022ರ ನವೆಂಬರ್ 18ರಂದು ಕುಲಪತಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು.

ಮುಖ್ಯ ಪಟ್ಟಿಯಲ್ಲಿ ತಮ್ಮ ಹೆಸರಿನ ವಿರುದ್ಧ ಮಾಡಿರುವ ಟೀಕೆಗಳನ್ನು ಪ್ರಶ್ನಿಸಿ ಮತ್ತೊಬ್ಬ ಅರ್ಜಿದಾರ ಪ್ರೊ. ಎಚ್.ರಾಜಶೇಖರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಮಾರ್ಚ್ 6 ರಂದು ಹೈಕೋರ್ಟ್ ಆ ಅರ್ಜಿಯನ್ನು ವಿಲೇವಾರಿ ಮಾಡಿದ್ದು, ನಿಯಮಗಳ ಪ್ರಕಾರ ಕಟ್ಟುನಿಟ್ಟಾಗಿ ವಿಸಿಯನ್ನು ನೇಮಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿತು.

ಶೋಧನಾ ಸಮಿತಿಯು ಮಾರ್ಚ್ 16 ರಂದು ಪ್ರೊ. ಲೋಕನಾಥ್ ಎನ್.ಕೆ ಅವರ ಹೆಸರು ಸೇರಿದಂತೆ ಮೂವರ ಹೆಸರುಗಳ ಹೊಸ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿತು. ಲೋಕನಾಥ್ ಅವರು ಅನರ್ಹರಾಗಿದ್ದರೂ, ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ ಎಂದು ಪ್ರೊ.ಶರತ್ ಅವರು ಹೈಕೋರ್ಟ್‌ಗೆ ಸಲ್ಲಿಸಿರುವ ಹೊಸ ಅರ್ಜಿಯಲ್ಲಿ ಹೇಳಿದ್ದಾರೆ.

ಲೋಕನಾಥ್ ಅವರು ಮಾರ್ಚ್ 23 ರಂದು ಮೈಸೂರು ವಿಶ್ವವಿದ್ಯಾಲಯದ ವಿಸಿಯಾಗಿ ಆಯ್ಕೆಯಾಗಿದ್ದರು. ತಾವು ಹುದ್ದೆಗೆ ಅರ್ಹರಿದ್ದರೂ, ತಮ್ಮನ್ನು ಪರಿಗಣಿಸಿಲ್ಲ ಎಂದು ಪ್ರೊ. ಶರತ್ ಹೇಳಿದ್ದಾರೆ.

ಪ್ರೊ. ಶರತ್ ಕನ್ನಡದ ಜನಪ್ರಿಯ ಸಾಹಿತಿ ದಿವಂಗತ ಯು.ಆರ್. ಅನಂತಮೂರ್ತಿಯವರ ಪುತ್ರ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com