ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆಗಸ್ಟ್ 11 ರಂದು ವಿಮಾನ ಹಾರಾಟ ಆರಂಭವಾಗಲಿದ್ದು, ಮೊದಲ ವಿಮಾನ ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಅವರು, ಕಳೆದ ವಾರ ಇಂಡಿಗೋ ಏರ್ಲೈನ್ಸ್ ಅಧಿಕಾರಿಗಳುವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಬಸ್ ಸೇವೆಗಳು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪರಿಶೀಲಿಸಿದ್ದಾರೆ ಎಂದು ತಿಳಿಸಿದರು.
ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಈ ವಿಮಾನ ನಿಲ್ದಾಣ ಉದ್ಘಾಟಿಸಿದದ್ದು, ನಮಗೆ ಐತಿಹಾಸಿಕ ಕ್ಷಣವಾಗಿತ್ತು. ವಿಮಾನ ನಿಲ್ದಾಣದ ಯೋಜನೆ ಹಿಂದೆ ಇದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಜನ್ಮದಿನದಂದು ಇದನ್ನು ಉದ್ಘಾಟಿಸಲಾಯಿತು ಎಂದು ರಾಘವೇಂದ್ರ ಹೇಳಿದರು.
ಮೂಲಗಳ ಪ್ರಕಾರ, ಇಂಡಿಗೋ ಏರ್ಲೈನ್ಸ್ ಶೀಘ್ರದಲ್ಲೇ ಇತರ ಸ್ಥಳಗಳಾದ ನವದೆಹಲಿ ಮತ್ತು ಮುಂಬೈಗೆ ವಿಮಾನಗಳನ್ನು ಪರಿಚಯಿಸುವ ಯೋಜನೆಯನ್ನು ಹೊಂದಿದೆ. ವಿಮಾನ ನಿಲ್ದಾಣವು ಆರ್ಕ್ಯೂವೈ ಅಂತರಾಷ್ಟ್ರೀಯ ಕೋಡ್ ಸ್ವೀಕರಿಸಿದೆ ಎಂದು ಸಂಸದರು ಹೇಳಿದರು. ಶಿವಮೊಗ್ಗ-ಬೆಂಗಳೂರು ನಡುವಿನ ಪ್ರಯಾಣ ದರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಘವೇಂದ್ರ, ಪ್ರತಿ ವ್ಯಕ್ತಿಗೆ 2,500 ರಿಂದ 3,000 ರೂ. ಇರಲಿದೆ. ಜಿಲ್ಲೆಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ವಿಮಾನ ನಿಲ್ದಾಣವು ಸಹಾಯ ಮಾಡುತ್ತದೆ. ಜಿಲ್ಲೆಯಲ್ಲಿ ಪ್ರಸಿದ್ಧ ಜೋಗ್ ಜಲಪಾತ ಮತ್ತು ಅನೇಕ ಧಾರ್ಮಿಕ ಸ್ಥಳಗಳಿವೆ ಎಂದರು.
ನೆರೆಯ ಜಿಲ್ಲೆಗಳಾದ ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳ ಅಭಿವೃದ್ಧಿಯಲ್ಲಿ ವಿಮಾನ ನಿಲ್ದಾಣ ದೊಡ್ಡ ಪಾತ್ರ ವಹಿಸಲಿದೆ ಎಂದರು. ಇದೇ ವೇಳೆ ಸ್ಥಳೀಯ ಕೈಗಾರಿಕೋದ್ಯಮಿಗಳು ಶಿವಮೊಗ್ಗದಿಂದ ವಿಮಾನ ಸೇವೆ ಆರಂಭವಾಗುವುದರಿಂದ ಜಿಲ್ಲೆಯ ಕೈಗಾರಿಕಾ ಕ್ಷೇತ್ರಕ್ಕೆ ದೊಡ್ಡ ಉತ್ತೇಜನ ದೊರೆಯಲಿದೆ ಎಂದು ಹೇಳಿದರು.
Advertisement