ರಿಯಾಯಿತಿ ಟ್ರಾಫಿಕ್ ದಂಡ ಪಾವತಿಗೆ ಮುಗಿಬಿದ್ದ ವಾಹನ ಮಾಲೀಕರು; ವಿಶೇಷ ಕೌಂಟರ್ ಗಳಲ್ಲಿ ಸರತಿ ಸಾಲು ಜನ

ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಾಕಿ ದಂಡದ ಮೊತ್ತ ಪಾವತಿಗೆ ರಾಜ್ಯ ಸರ್ಕಾರ ಇಂದಿನಿಂದ ಮಾ.15 ರವರೆಗೆ ಮತ್ತೆ ಶೇ.50ರಷ್ಟು ರಿಯಾಯಿತಿ ನೀಡಿರುವುದಕ್ಕೆ ನಗರದಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಟ್ರಾಫಿಕ್ ದಂಡ (ಸಂಗ್ರಹ ಚಿತ್ರ)
ಟ್ರಾಫಿಕ್ ದಂಡ (ಸಂಗ್ರಹ ಚಿತ್ರ)

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಾಕಿ ದಂಡದ ಮೊತ್ತ ಪಾವತಿಗೆ ರಾಜ್ಯ ಸರ್ಕಾರ ಇಂದಿನಿಂದ ಮಾ.15 ರವರೆಗೆ ಮತ್ತೆ ಶೇ.50ರಷ್ಟು ರಿಯಾಯಿತಿ ನೀಡಿರುವುದಕ್ಕೆ ನಗರದಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮೊದಲ ದಿನವಾದ ಇಂದು ಭಾರೀ ಸಂಖ್ಯೆಯಲ್ಲಿ ಸಾರ್ವಜನಿಕರು ನಗರದ ಸಂಚಾರ ಪೊಲೀಸ್ ಠಾಣೆಗಳಿಗೆ ತೆರಳಿ ಬಾಕಿ ದಂಡದ ಮೊತ್ತ ಪಾವತಿಸಿದರು. ನಗರದ ಸಂಚಾರ ಪೊಲೀಸ್ ಠಾಣೆಗಳು ಮಾತ್ರವಲ್ಲದೆ, ಇನ್ಫಾಂಟ್ರಿ ರಸ್ತೆಯಲ್ಲಿರುವ ಸಂಚಾರ ನಿರ್ವಹಣಾ ಕೇಂದ್ರ(ಟಿಎಂಸಿ)ದಲ್ಲಿ ಕೌಂಟರ್ ತೆರೆದು ಬಾಕಿ ದಂಡದ ಮೊತ್ತ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಟಿಎಂಸಿ ಕಟ್ಟಡದ ಬಳಿಯೂ ಭಾರೀ ಸಂಖ್ಯೆಯಲ್ಲಿ ಸಾರ್ವಜನಿಕರು ದಂಡ ಪಾವತಿಸಲು ಸರತಿ ಸಾಲಿನಲ್ಲಿ ನಿಂತು ದಂಡ ಪಾವತಿಸಿದರು.

ಇನ್ನು ಕರ್ನಾಟಕ ಒನ್ ವೆಬ್‌ಸೈಟ್ ಹಾಗೂ ಪೇಟಿಎಂ ಆ್ಯಪ್‌ನಲ್ಲಿ ಬಾಕಿ ದಂಡ ಪಾವತಿಗೆ ಅವಕಾಶ ನೀಡಲಾಗಿದೆ. ಇದರಲ್ಲಿ ವಾಹನ ನೋಂದಣಿ ಸಂಖ್ಯೆ ನಮೂದಿಸಿದರೆ, ಆ ವಾಹನದ ವಿರುದ್ಧ ದಾಖಲಾದ ಸಂಚಾರ ನಿಯಮ ಉಲ್ಲಂಘನೆಯ ಪ್ರಕರಣಗಳ ಸಂಖ್ಯೆ ಹಾಗೂ ರಿಯಾಯಿತಿ ದಂಡದ ಮೊತ್ತ ತೆರೆದುಕೊಳ್ಳಲಿದೆ. ಈ ವೇಳೆ ಆನ್‌ಲೈನ್‌ನಲ್ಲಿ ಸಾರ್ವಜನಿಕರು ಆ ದಂಡದ ಮೊತ್ತವನ್ನು ಪಾವತಿಸಬಹುದಾಗಿದೆ. ಸಂಚಾರ ಪೊಲೀಸ್ ಠಾಣೆಗಳು ಹಾಗೂ ಟಿಎಂಸಿ ಕಟ್ಟಡದಲ್ಲಿ ದಂಡ ಪಾವತಿಸುವವರ ಸಂಖ್ಯೆಗಿಂತ ಆನ್‌ಲೈನ್‌ನಲ್ಲಿ ಬಾಕಿ ದಂಡ ಪಾವತಿ ಮಾಡಿದವರ ಸಂಖ್ಯೆ ಹೆಚ್ಚಿತ್ತು.

ಷರತ್ತು ಅನ್ವಯ:
11-02-2023ರ ಒಳಗಾಗಿ ಅನ್ವಯವಾಗುವ ಪ್ರಕರಣಗಳಿಗೆ ಮಾತ್ರ ಒಂದು ಬಾರಿಯ ಕ್ರಮವಾಗಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರ ರಿಯಾಯಿತಿ ನೀಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಕಳೆದ 2023ರ ಫೆಬ್ರುವರಿ 11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ. ಈ ರಿಯಾಯಿತಿಯು ಇಂದಿನಿಂದ 15 ದಿನಗಳವರೆಗೆ ಇತ್ಯರ್ಥಪಡಿಸಿಕೊಂಡು ದಂಡ ಪಾವತಿಸುವ ಪ್ರಕರಣಗಳಿಗೆ ಮಾತ್ರ ದೊರಕಲಿದೆ. ಕಾನೂನು ಇಲಾಖೆ ಮತ್ತು ಆರ್ಥಿಕ ಇಲಾಖೆಯ ಸಹಮತಿ ಪಡೆದು ಈ ಆದೇಶ ಹೊರಡಿಸಲಾಗಿದೆ ಎಂದು ಸಾರಿಗೆ ಇಲಾಖೆ ಆದೇಶದಲ್ಲಿ ತಿಳಿಸಿದೆ.

ಉತ್ತಮ ಪ್ರತಿಕ್ರಿಯೆ:
ಈ ಹಿಂದೆ ಫೆಬ್ರವರಿ 11ರ ವರೆಗೆ 15 ದಿನಗಳ ಕಾಲ ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು. ಈ ಕೊಡುಗೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.ಆದರೆ ತಾಂತ್ರಿಕ ಕಾರಣಗಳಿಂದ ಕೆಲವರು ದಂಡ ಪಾವತಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ರಿಯಾಯಿತಿ ದರದಲ್ಲಿ ದಂಡ ಕಟ್ಟುವ ಕಾಲಾವಕಾಶವನ್ನು ವಿಸ್ತರಿಸಬೇಕು ಎಂಬ ಬೇಡಿಕೆ ವ್ಯಕ್ತವಾಗಿತ್ತು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com