ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ ಹಠಾತ್ ನಿಧನ: ಸಿಎಂ ಸೇರಿ ರಾಜಕೀಯ ನಾಯಕರ ಸಂತಾಪ, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಧ್ರುವನಾರಾಯಣನವರು ಶನಿವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ಹಠಾತ್ ನಿಧನರಾಗಿದ್ದಾರೆ.
ಆರ್ ಧ್ರುವನಾರಾಯಣ
ಆರ್ ಧ್ರುವನಾರಾಯಣ

ಮೈಸೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಧ್ರುವನಾರಾಯಣನವರು ಶನಿವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ಹಠಾತ್ ನಿಧನರಾಗಿದ್ದಾರೆ.

ಸಂತಾಪ ಸೂಚಿಸಿದ ಸಿಎಂ: ಧ್ರುವನಾರಾಯಣ ಅವರು ತುಂಬಾ ಕ್ರೀಯಾಶೀಲರಾಗಿರುತ್ತಿದ್ದರು. ಅವರು ಹೃದಯಘಾತದಿಂದ ನಿಧನ ಹೊಂದಿರುವುದು ಆಘಾತವಾಗಿದೆ. ಚಾಮರಾಜನಗರ ಭಾಗದಲ್ಲಿ ತುಂಬಾ ಚಟುವಟಿಕೆಯಿಂದ ಕೆಲಸ ಮಾಡಿಕೊಂಡಿದ್ದರು. ಅವರಿಗೆ ಪೊಲೀಸ್ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಸಿಎಂ ಸಂತಾಪ ಸೂಚಿಸಿದ್ದಾರೆ.

ವಿದೇಶ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಟ್ವೀಟ್ ಮಾಡಿ, ಮಾಜಿ ಸಂಸದ ಶ್ರೀ ಆರ್ ಧ್ರುವನಾರಾಯಣ್ ಅವರ ಹಠಾತ್ ನಿಧನದಿಂದ ದುಃಖವಾಗಿದೆ. ಕಷ್ಟಪಟ್ಟು ದುಡಿಯುವ ಮತ್ತು ವಿನಮ್ರ ತಳಮಟ್ಟದ ನಾಯಕ, ಅವರು NSUI ಮತ್ತು ಯೂತ್ ಕಾಂಗ್ರೆಸ್ ಶ್ರೇಣಿಯ ಮೂಲಕ ಏರಿದ ಸಾಮಾಜಿಕ ನ್ಯಾಯದ ಚಾಂಪಿಯನ್ ಆಗಿದ್ದರು. ಅವರ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ನಷ್ಟ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಬರೆದಿದ್ದಾರೆ. 

ಮಾಜಿ ಸಿಎಂ ಸಿದ್ದರಾಮಯ್ಯ, ಧ್ರುವನಾರಾಯಣ ಅವರ ದುರದೃಷ್ಟಕರ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟ. ಅವರ ಅನುಭವ, ನಾಯಕತ್ವ ಮತ್ತು ಕಠಿಣ ಪರಿಶ್ರಮವು ಉತ್ತಮ ಧನಾತ್ಮಕ ಪ್ರಭಾವವನ್ನು ಬೀರಿತ್ತು.  ಪಕ್ಷದ ಮತ್ತು ರಾಜ್ಯದ ರಾಜಕೀಯ, ರಾಜ್ಯಕ್ಕೆ ಅವರ ಕೊಡುಗೆ ಸದಾ ಸ್ಮರಣೀಯ ಎಂದಿದ್ದಾರೆ. 

ಸ್ನೇಹಿತನ ಅಗಲಿಕೆಯಿಂದ ದುಃಖ ಆಗಿದೆ: ಆರ್​.ಧ್ರುವನಾರಾಯಣ ನಿಧನಕ್ಕೆ ಶಾಸಕ ಜಿ.ಟಿ.ದೇವೇಗೌಡ ಸಂತಾಪ ಸೂಚಿಸಿದ್ದಾರೆ. ಧ್ರುವನಾರಾಯಣ ನಿಧನದ ಸುದ್ದಿ ತಿಳಿದು ನನಗೆ ದಿಗ್ಭ್ರಾಂತವಾಗಿದೆ. ಎಂದೂ ಕೂಡ ದ್ವೇಷದ ರಾಜಕಾರಣ ಮಾಡಿದವರಲ್ಲ. ಚಾಮರಾಜನಗರ ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದರು. ಅಭಿವೃದ್ಧಿ ಕೆಲಸಗಳಿಂದ ಜಿಲ್ಲೆಯ ಜನರ ಮನಸು ಗೆದ್ದಿದ್ದರು. ಸ್ನೇಹಿತನ ಅಗಲಿಕೆಯಿಂದ ತುಂಬಾ ದುಃಖ ಆಗಿದೆ. ಕುಟುಂಬಸ್ಥರಿಗೆ ದುಃಖ ಸಹಿಸುವ ಶಕ್ತಿ ದೇವರು ನೀಡಲಿ ಎಂದು ಶಾಸಕ ಜಿ.ಟಿ.ದೇವೇಗೌಡ ಸಂತಾಪ ಸೂಚಿಸಿದ್ದಾರೆ.

ಸಂತಾಪ ಸೂಚಿಸಿದ ಸತೀಶ್ ಜಾರಕಿಹೊಳಿ: ಮಾಜಿ ಸಂಸದರು, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಆತ್ಮೀಯ ಸ್ನೇಹಿತರಾಗಿದ್ದ ಆರ್. ಧ್ರುವ ನಾರಾಯಣ ಅವರ ಅಕಾಲಿಕ ನಿಧನ ತುಂಬಾ ನೋವು ಉಂಟುಮಾಡಿದೆ. ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಧ್ರುವ ನಾರಾಯಣ ಅವರ ಅಗಲಿಕೆ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತ ಅವರ ಮತ್ತು ಅವರ ಅಭಿಮಾನಿಗಳ ನೋವಿನಲ್ಲಿ ನಾನೂ ಕೂಡ ಭಾಗಿಯಾಗಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.

ಹೆಚ್​ಡಿಕೆ ಸಂತಾಪ: ಆರ್.ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾದರು ಎಂಬ ಸುದ್ದಿ ಕೇಳಿ ನನಗೆ ತೀವ್ರ ದಿಗ್ಭ್ರಮೆ, ಆಘಾತ ಉಂಟಾಗಿದೆ ಎಂದು ಟ್ವೀಟ್ ಮಾಡುವ ಮೂಲಕ ಹೆಚ್​ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಆಗಿದ್ದೇನು?: ಇಂದು ಬೆಳಗಿನ ಜಾವ ಮೈಸೂರಿನ ತಮ್ಮ ನಿವಾಸದಲ್ಲಿ ಧ್ರುವನಾರಾಯಣ ಅವರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ತಮ್ಮ ಕಾರು ಚಾಲಕನಿಗೆ ಫೋನ್ ಕರೆ ಮಾಡಿ ಬರುವಂತೆ ಸೂಚಿಸಿದ್ದಾರೆ. ಈ ವೇಳೆ ಮನೆಯಲ್ಲಿ ಅವರ ಪುತ್ರ ಇದ್ದರು ಎಂದು ತಿಳಿದುಬಂದಿದೆ.

ಕಾರು ಚಾಲಕ ಕೂಡಲೇ ಬಂದು ಧ್ರುವನಾರಾಯಣ ಅವರನ್ನು ಕಾರಿನಲ್ಲಿ ಮಲಗಿಸಿ ಮೈಸೂರಿನ ಡಿಆರ್ ಎಂ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ತೀವ್ರ ರಕ್ತಸ್ರಾವ ವಾಂತಿಯಾಗಿ ಹಠಾತ್ ನಿಧನರಾಗಿದ್ದಾರೆ. ಸಾವಿಗೆ ಮುನ್ನ ಕೋಮಾ ಸ್ಥಿತಿಗೆ ಜಾರಿದ್ದರು. 

ಜನನ, ರಾಜಕೀಯ ಜೀವನ: 1961 ಜುಲೈ 31ರಂದು ಚಾಮರಾಜನಗರದ ಹಗ್ಗವಾಡಿಯಲ್ಲಿ ಜನಿಸಿದ್ದ ಇವರು ಬೆಂಗಳೂರಿನ (Bengaluru) ಜಿಕೆವಿಕೆಯಲ್ಲಿ ಕೃಷಿ ಪದವಿ ಪಡೆದಿದ್ದರು. ಕಳೆದ 2 ವರ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಈ ಬಾರಿ ನಂಜನಗೂಡಿನಿಂದ ವಿಧಾನಸಭೆ ಚುನಾವಣೆ ಸ್ಪರ್ಧೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು. 2 ಬಾರಿ ಸಂಸದ, 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

1983ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಧ್ರುವನಾರಾಯಣ್‌ 1984 ರಲ್ಲಿ ಜಿಕೆವಿಕೆಯ ಎನ್‌ಎಸ್‌ಯುಐ ಅಧ್ಯಕ್ಷನಾಗಿ ಆಯ್ಕೆಯಾದರು. ನಂತರ 1986 ರಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಆದರೆ 1999ರಲ್ಲಿ ಮೊದಲ ಬಾರಿಗೆ ಸಂತೆಮಾರಳ್ಳಿ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಿ ಸೋಲನ್ನನುಭವಿಸಿದ್ದರು. 2004ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ 1 ಮತದ ಅಂತರದ ಗೆಲುವು ಸಾಧಿಸಿ ಇತಿಹಾಸವನ್ನು ಸೃಷ್ಟಿಸಿದ್ದರು.

2008ರಲ್ಲಿ ಕೊಳ್ಳೆಗಾಲ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಅದಾದ ಬಳಿಕ 2009 ಹಾಗೂ 2014 ರ ಲೋಕಸಭಾ ಚುನಾವಣೆಯಲ್ಲಿ ಸತತ ಗೆಲುವು ಸಾಧಿಸಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಸೋಲನ್ನನುಭವಿಸಿದ್ದರು. ಸೋಲಿನ ಬಳಿಕವೂ ಪಕ್ಷದಲ್ಲಿ ಹಾಗೂ ಕ್ಷೇತ್ರದಲ್ಲಿ ಸಕ್ರಿಯವಾಗಿದ್ದರು.

ಅಂತ್ಯಕ್ರಿಯೆ: ಧ್ರುವನಾರಾಯಣ ಅವರ ನಿಧನದ ವಾರ್ತೆ ಗೊತ್ತಾಗುತ್ತಿದ್ದಂತೆ ಕಾಂಗ್ರೆಸ್ ನ ಪ್ರಜಾಧ್ವನಿ ಯಾತ್ರೆಯನ್ನು ರದ್ದುಗೊಳಿಸಿ ಕಾಂಗ್ರೆಸ್ ನಾಯಕರು ಮೈಸೂರಿನತ್ತ ಹೊರಟಿದ್ದಾರೆ. ಸದ್ಯ ಅವರ ನಿವಾಸದಲ್ಲಿ ಮೃತದೇಹ ಇರಿಸಲಾಗಿದ್ದು ವಿಧಿವಿಧಾನಗಳು ನೆರವೇರುತ್ತಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com