ಸಿಎಂ ಆಯ್ಕೆ ಪ್ರಹಸನ ಮುಕ್ತಾಯ: ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್ ಒಬ್ಬರೇ ಡಿಸಿಎಂ; ಎಐಸಿಸಿ ಅಧಿಕೃತ ಘೋಷಣೆ

ರಾಜ್ಯದ ಮುಖ್ಯಮಂತ್ರಿ ಆಯ್ಕೆ ಪ್ರಹಸನ ಕೊನೆಗೂ ಮುಕ್ತಾಯಗೊಂಡಿದ್ದು, ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್​ ಹೈಕಮಾಂಡ್​ ಅಧಿಕೃತವಾಗಿ ಘೋಷಣೆ ಮಾಡಿದೆ.
ಡಿಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆಗೆ ಮಲ್ಲಿಕಾರ್ಜುನ ಖರ್ಗೆ.
ಡಿಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆಗೆ ಮಲ್ಲಿಕಾರ್ಜುನ ಖರ್ಗೆ.
Updated on

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಆಯ್ಕೆ ಪ್ರಹಸನ ಕೊನೆಗೂ ಮುಕ್ತಾಯಗೊಂಡಿದ್ದು, ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್​ ಹೈಕಮಾಂಡ್​ ಅಧಿಕೃತವಾಗಿ ಘೋಷಣೆ ಮಾಡಿದೆ

ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು, ಈ ವೇಳೆ ನಾಯಕರು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ.ಶಿವಕುಮಾರ್ ಅವರನ್ನು ಆಯ್ಕೆ ಮಾಡಿರುವುದಾಗಿ ಹೇಳಿದ್ದಾರೆ.

ಕರ್ನಾಟಕದ ಗೆಲುವಿನ ಶ್ರೇಯಸ್ಸು ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಸೇರಿ ಎಲ್ಲ ಹಿರಿಯ ನಾಯಕರಿಗೂ ಸಲ್ಲುತ್ತದೆ. ಭಾರತ್ ಜೋಡೋ ಪಾದಯಾತ್ರೆ ಬಳಿಕ ಕಾಂಗ್ರೆಸ್ ಗೆದ್ದಿದೆ. ಕರ್ನಾಟಕದಲ್ಲಿ ಅನುಭವಿ, ಸಮರ್ಥ ಕಾಂಗ್ರೆಸ್ ನಾಯಕರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷವನ್ನು ಸಂಘಟಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇಬ್ಬರೂ ಸಮರ್ಥ ನಾಯಕರು ಎಂದು ಹೇಳಿದರು.

ಡಿಕೆ ಶಿವಕುಮಾರ್​ ಒಬ್ಬರು ಮಾತ್ರ ಡಿಸಿಎಂ ಆಗಿರುತ್ತಾರೆ. ಲೋಕಸಭಾ ಚುನಾವಣೆ ಪೂರ್ಣಗೊಳ್ಳುವವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಮುಂದುವರಿಯಲಿದ್ದಾರೆಂದು ತಿಳಿಸಿದರು.

ಮೇ 20ರಂದು ಸಿದ್ದರಾಮಯ್ಯ, ಡಿಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸುತ್ತಾರೆ. ಮೇ 20ರ ಮಧ್ಯಾಹ್ನ 12.30ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದೆ. ಮೇ 20ರಂದು ಕೆಲ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಾರೆಂದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್​ ಅವರು ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಗೆ ಮೂರು ವೀಕ್ಷಕರನ್ನ ನೇಮಿಸಲಾಗಿತ್ತು. ಶಾಸಕರ ಅಭಿಪ್ರಾಯ ಸಂಗ್ರಹ ಮಾಡಲಾಗಿತ್ತು. ವೀಕ್ಷಕರು ವರದಿಯನ್ನ ಅಧ್ಯಕ್ಷರಿಗೆ ನೀಡಿದ್ದರು. ನಮ್ಮದು‌ ಪ್ರಜಾಸತ್ತಾತ್ಮಕ ಪಕ್ಷ, ನಾವು ಸರ್ವಾಧಿಕಾರದಲ್ಲಿ ನಂಬಿಕೆ ಇಟ್ಟವರಲ್ಲ. ಕರ್ನಾಟಕದಲ್ಲಿ ಡೈನಾಮಿಕ್ ನಾಯಕರಿದ್ದಾರೆ. ಸಿದ್ದರಾಮಯ್ಯ ಅನುಭವಿ, ಹಿರಿಯ ರಾಜಕಾರಣಿ, ಉತ್ತಮ ಆಡಳಿತಗಾರರು ಹೌದು. ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರದ್ದು ದೊಡ್ಡ ಪಾತ್ರವಿದೆ. ಡಿಕೆ ಶಿವಕುಮಾರ್‌ ಪಕ್ಷ ಸಂಘಟಕರು, ಪಕ್ಷದಲ್ಲಿ ಕೆಡಾರ್ ತಯಾರು‌ ಮಾಡುವಲ್ಲಿ ಅವರ ಪಾತ್ರ ದೊಡ್ದದಿದೆ ಎಂದರು.

ಡಿಕೆ ಶಿವಕುಮಾರ್‌,ಸಿದ್ದರಾಮಯ್ಯ ಇಬ್ಬರೂ ಪಕ್ಷದ ದೊಡ್ಡ ಆಸ್ತಿ, ಇಬ್ಬರಿಗೂ ಸಿಎಂ ಆಗಬೇಕೆಂಬ ಆಕಾಂಕ್ಷೆಯಿತ್ತು. ಸಹಜವಾಗಿಯೇ ಬಯಕೆ ಇತ್ತು. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ‌ಜೊತೆ ಒನ್ ಟು ಒನ್ ಮಾತುಕತೆ ನಡೆಸಲಾಗಿತ್ತು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅಭಿಪ್ರಾಯ ಪಡೆದಿದ್ದೇವು. ಅಂತಿಮವಾಗಿ ಎಐಸಿಸಿ ಅಧ್ಯಕ್ಷರು ನಿರ್ಣಯ ತೆಗೆದುಕೊಂಡಿದ್ದಾರೆ ಎಂದು ಕೆಸಿ ವೇಣುಗೋಪಾಲ್‌ ತಿಳಿಸಿದರು. ಇದೇ ವೇಳೆ ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಯಾವುದೇ ಮಾಹಿತಿಯನ್ನೂ ನಾಯಕರು ನೀಡಲಿಲ್ಲ.

ಈ ನಡುವೆ ನವಹೆದಲಿಯ ರಾಜಾಜಿ ಮಾರ್ಗ್10ರಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿರುವ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅವರು, ಇಂದು ಮಧ್ಯಾಹ್ನ 3 ಗಂಟೆಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com