ಪ್ರವೀಣ್ ನೆಟ್ಟಾರು ಪತ್ನಿ ಉದ್ಯೋಗ ರದ್ದು ವಿಚಾರ: ಜಿಲ್ಲಾಧಿಕಾರಿ ಮಾಹಿತಿ, ಕಾಂಗ್ರೆಸ್ ತಪರಾಕಿ

ಸರ್ಕಾರ ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ. ಎಲ್ಲರಂತೆ ಇವರದ್ದು ಕೂಡ ಅದೇ ರೀತಿ ಆಗಿದೆ
ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ
ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ
Updated on

ಬೆಂಗಳೂರು: ಅನುಕಂಪದ ಆಧಾರದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ನೇಮಕಗೊಂಡಿದ್ದ ದ.ಕ. ಬಿಜೆಪಿ ಮುಖಂಡ ದಿ.ಪ್ರವೀಣ್‌ ನೆಟ್ಟಾರ್‌ ಅವರ ಪತ್ನಿ ನೂತನ ಕುಮಾರಿಯನ್ನು ಕೆಲಸದಿಂದತೆಗೆದುಹಾಕಲಾಗಿದೆ.

ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಸರ್ಕಾರ ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ. ಎಲ್ಲರಂತೆ ಇವರದ್ದು ಕೂಡ ಅದೇ ರೀತಿ ಆಗಿದೆ. ಸರ್ಕಾರಿ ಕೆಲಸದಿಂದ ಬಿಡುಗಡೆಗೊಳಿಸಿರುವ ಕುರಿತಂತೆ ಆದೇಶದ ಬಗ್ಗೆ ನೂತನ ಕುಮಾರಿ ಅವರು ಗಮನಕ್ಕೆ ತಂದಿದ್ದಾರೆ. ಅವರನ್ನು ಮತ್ತೆ ಮುಂದುವರಿಸುವ ಬಗ್ಗೆ ತಕ್ಷಣವೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದಿದ್ದಾರೆ.

ಇನ್ನೂ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಭ್ರಷ್ಟಾಚಾರವೇ ಕುಲದೈವ ಎಂದು ನಂಬಿರುವ ಬಿಜೆಪಿಗೆ ನೀತಿ ನಿಯಮಗಳನ್ನು ಅಧ್ಯಯನ ಮಾಡಲು ಆಸಕ್ತಿ ಮತ್ತು ಸಮಯ ಇರಲು ಸಾಧ್ಯವೇ? ನಿಯಮದ ಪ್ರಕಾರ ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ, ಬದುಕಿಗೆ ಶಾಶ್ವತ ದಾರಿ ತೋರಿಸದೆ ಇಂತಹ ಪೇಪರ್ ಚಾಕ್ಲೆಟ್ ನೀಡುವ ಮೂಲಕ ಬಿಜೆಪಿ ಪ್ರವೀಣ್ ಪತ್ನಿಗೆ ದ್ರೋಹವೆಸಗಿದೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.

ಮಾಜಿ ಸಿಎಂ ಬೊಮ್ಮಾಯಿ ಅವರು ಆದೇಶದಲ್ಲಿ ಗುತ್ತಿಗೆ ಆಧಾರದಲ್ಲಿ ಹಿರಿಯ ಸಹಾಯಕ ಗ್ರೂಪ್‌ ಸಿ ಹುದ್ದೆಗೆ ನೇಮಕ ಮಾಡಲಾಗಿತ್ತು. ಈ ಹುದ್ದೆ ಮುಖ್ಯಮಂತ್ರಿ ಅಧಿಕಾರ ಇರುವ ತನಕ ಇಲ್ಲವೇ ಮುಂದಿನ ಆದೇಶ ವರೆಗೆ ಎಂದು ನಮೂದಿಸಲಾಗಿತ್ತು. ಆ ಆದೇಶದಲ್ಲಿ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಎಂದಿದ್ದರೂ ನೂತನ ಕುಮಾರಿ ಅವರ ಅಪೇಕ್ಷೆ ಮೇರೆಗೆ ಅವರನ್ನು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com