ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ರಾಜ್ಯೋತ್ಸವ ಆಚರಣೆಗೆ ಕರ್ನಾಟಕ ಹೈಕೋರ್ಟ್ (Karnataka High Court) ಅನುಮತಿ ನೀಡಿದೆ.
ನವೆಂಬರ್ 1 ರಿಂದ 3 ರವರೆಗೆ ಚಾಮರಾಜಪೇಟೆಯ ಈದ್ಗಾ ಮೈದಾನ (Chamarajpet Maidan)ದಲ್ಲಿ ಕನ್ನಡ ರಾಜ್ಯೋತ್ಸವ (Kannada Rajyotsava) ಆಚರಣೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಚಾಮರಾಜಪೇಟೆ ನಾಗರಿಕರ ಒಕ್ಕೂಟಕ್ಕೆ ಅನುಮತಿ ನೀಡಲು ಕರ್ನಾಟಕ ಹೈಕೋರ್ಟ್ ಮಂಗಳವಾರ ಜಿಲ್ಲಾಧಿಕಾರಿಗೆ ಅನುಮತಿ ನೀಡಿದೆ.
ಆದರೆ, ಈದ್ಗಾ ಮೈದಾನದಲ್ಲಿ ಆಚರಿಸಲು ಕಾನೂನು ಅಥವಾ ಇನ್ಯಾವುದೇ ಅಡ್ಡಿ ಉಂಟಾದರೆ, ಜಿಲ್ಲಾಧಿಕಾರಿಗಳು ಅರ್ಜಿದಾರರಿಗೆ ಪರ್ಯಾಯವಾಗಿ ಬೇರೆ ಯಾವುದಾದರೂ ಸೂಕ್ತ ಮೈದಾನವನ್ನು ಒದಗಿಸಬೇಕು ಎಂದೂ ನ್ಯಾಯಾಲಯ ಆದೇಶಿಸಿದೆ.
ಕೋಮು ಸೌಹಾರ್ದತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಪಣಕ್ಕಿಡುವ ಯಾವುದೇ ಚಟುವಟಿಕೆಯಲ್ಲಿ ಪಾಲ್ಗೊಳ್ಳದಂತೆ ತನ್ನ ಸದಸ್ಯರಿಗೆ ಅಗತ್ಯ ಸೂಚನೆಗಳನ್ನು ನೀಡುವ ಮೂಲಕ ಕಾಳಜಿ ವಹಿಸುವಂತೆ ನ್ಯಾಯಾಲಯವು ಅರ್ಜಿದಾರರಿಗೆ ತಿಳಿಸಿದೆ.
ಅಕ್ಟೋಬರ್ 19ರಂದು ಡಿಸಿ ಅನುಮತಿ ನಿರಾಕರಿಸಿ ನೀಡಿರುವ ಅನುಮೋದನೆಯನ್ನು ಪ್ರಶ್ನಿಸಿ ಒಕ್ಕುಟದ ಅಧ್ಯಕ್ಷ ಶ್ರೀರಾಮೇಗೌಡ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಪಡಿಸುವ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
Advertisement