ತುಮಕೂರು: ರಾಘವೇಂದ್ರ ಔರಾದ್ಕರ್ ಸಮಿತಿಯ ಶಿಫಾರಸುಗಳ ಅನುಷ್ಠಾನವನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಿಲ್ಲ. ವರದಿಯನ್ನು ಮರುಪರಿಶೀಲನೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಶುಕ್ರವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಔರಾದ್ಕರ್ ವರದಿಯನ್ನ ಸಂಪೂರ್ಣವಾಗಿ ಅನುಷ್ಠಾನ ಮಾಡಿಲ್ಲ. ಮತ್ತೆ ಮರುಪರಿಶೀಲನೆ ಮಾಡಬೇಕೆಂದು ಚಿಂತನೆ ನಡೆಸಲಾಗಿದೆ. ಇಲ್ಲಿಯವರೆಗೆ ಕೆಲವು ಅಂಶಗಳನ್ನ ಮಾತ್ರ ಪರಿಗಣನೆಗೆ ತೆಗೆದುಕೊಂಡಿದ್ದೇವೆ. ಮುಖ್ಯವಾದ ಕೆಲ ಅಂಶಗಳನ್ನ ಪರಿಗಣನೆಗೆ ತೆಗೆದುಕೊಂಡಿಲ್ಲ. ಹಾಗಾಗಿ ಮತ್ತೆ ಪುನರ್ ಪರಿಶೀಲನೆ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಪೊಲೀಸ್ ಇಲಾಖೆಯಲ್ಲಿ ಕನಿಷ್ಠ ಶೇ.70 ಸಿಬ್ಬಂದಿಗಳಿಗೆ ವಸತಿ ಒದಗಿಸಲು ತೀರ್ಮಾನ ಮಾಡಿದ್ದೇವೆ. ಕಠಿಣ ಪರಿಸ್ಥಿತಿಯಲ್ಲಿ ಕೆಲಸ ಮಾಡುವ ಪೊಲೀಸರ ಕುಟುಂಬಗಳು ಚೆನ್ನಾಗಿರಬೇಕು ಎಂಬ ಉದ್ದೇಶದಿಂದ ಈ ತೀರ್ಮಾನ ಮಾಡಿದ್ದೇವೆ. ಹಣಕಾಸಿನ ಸಚಿವರು ಸಿಎಂ ಸಿದ್ದರಾಮಯ್ಯ ಇದಕ್ಕೆ ಎಲ್ಲಾ ರೀತಿಯ ಸಹಕಾರ ಕೊಟ್ಟಿದ್ದಾರೆ ಎಂದು ಹೇಳಿದರು.
ಪಿಎಸ್ಐ ನೇಮಕಾತಿ ಹಗರಣವನ್ನು ಪರಿಹರಿಸಲು ಸಾಧ್ಯವಾಗಲಿಲ್ಲ, ಪರಿಣಾಮ 545 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಸ್ಥಗಿತಗೊಂಡಿದೆ. 1,000 ಪಿಎಸ್ಐ ಹುದ್ದೆಗಳು ಖಾಲಿ ಇರುವುದರಿಂದ ನಿಯಮ 32ರ ಪ್ರಕಾರ 600 ಸಹಾಯಕ ಸಬ್ಇನ್ಸ್ಪೆಕ್ಟರ್ಗಳಿಗೆ (ಎಎಸ್ಐ) ಪಿಎಸ್ಐಗಳಾಗಿ ಬಡ್ತಿ ನೀಡಿದ್ದೇವೆಂದು ತಿಳಿಸಿದರು.
ಪೊಲೀಸ್ ಇಲಾಖೆ ಸರಕಾರದ ಮುಖವಿದ್ದಂತೆ, ಪೊಲೀಸ್ ಇಲಾಖೆ ಉತ್ತಮವಾಗಿ ಕೆಲಸ ಮಾಡಿದರೆ ಸರಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ, ಸಿಬ್ಬಂದಿಗೆ ಟೆಕ್ ಆಧಾರಿತ ತರಬೇತಿ ನೀಡುತ್ತಿರುವುದರಿಂದ ಇಲಾಖೆ ತಂತ್ರಜ್ಞಾನಕ್ಕೆ ಹೊಂದಿಕೊಳ್ಳುತ್ತಿದೆ. ರಾಜ್ಯವು ಭಾರತದ ಮೊದಲ ಸೈಬರ್ ಕ್ರೈಂ ಸೆಂಟರ್ ಕಾರ್ಯಾರಂಭ ಮಾಡಿದೆ. ಬೆಂಗಳೂರಿನಲ್ಲಿ ತಂತ್ರಜ್ಞಾನದ ಪ್ರಗತಿಯಿಂದ ಸೈಬರ್ ಕ್ರೈಮ್ ಕೂಡ ಹೆಚ್ಚಾಗುತ್ತಿದೆ. ಇದು ಇಲಾಖೆಗೆ ಎದುರಾಗಿರುವ ದೊಡ್ಡ ಸವಾಲಾಗಿದೆ. ಬಿಟ್ಕಾಯಿನ್ ಪ್ರಕರಣದ ತನಿಖೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಹಗರಣದ ಎಲ್ಲಾ ಮುಖಗಳು ಹೊರಬರಲಿವೆ" ಎಂದು ಹೇಳಿದರು.
Advertisement