ಬೆಳಗಾವಿ: ಗೋಕಾಕ್​ನಲ್ಲಿ ಯುವಕನ ಬರ್ಬರ ಹತ್ಯೆ, 7 ಮಂದಿಯ ಬಂಧನ

ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದಲ್ಲಿ 23 ವರ್ಷದ ಯುವಕನನ್ನು ಭಾನುವಾರ ರಾತ್ರಿ ಬರ್ಬರವಾಗಿ ಹತ್ಯೆ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದಲ್ಲಿ 23 ವರ್ಷದ ಯುವಕನನ್ನು ಭಾನುವಾರ ರಾತ್ರಿ ಬರ್ಬರವಾಗಿ ಹತ್ಯೆ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಆದಿಜಾಂಬವ ನಗರದ ನಿವಾಸಿ ಸಂತೋಷ ಶಾನೂರ್ ಅವರನ್ನು ನಿನ್ನೆ ರಾತ್ರಿ ಹತ್ಯೆ ಮಾಡಲಾಗಿದ್ದು, ಘಟನೆಯ ಮೃತ ಯುವಕನ ಸಮುದಾಯಕ್ಕೆ ಸೇರಿದ ಸುಮಾರು 150 ಜನ, ಹತ್ತು ಆರೋಪಿಗಳ ಮನೆಗಳ ಬಳಿ ಜಮಾಯಿಸಿ ಕಲ್ಲು ತೂರಾಟ ನಡೆಸಿದ್ದಾರೆ. ಹೀಗಾಗಿ ರಾತ್ರಿಯಿಡೀ ಪರಿಸ್ಥಿತಿ ಉದ್ವಿಗ್ನವಾಗಿತ್ತು.

ಪೊಲೀಸರು ಸ್ಥಳಕ್ಕಾಗಮಿಸಿ, ಸಾಕಷ್ಟು ಮನವೊಲಿಕೆಯ ನಂತರ ಜನರನ್ನು ಚದುರಿಸಿದರು ಮತ್ತು ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಮೌನೇಶ್ ಎಂಬವರ ಮೇಲೆ ಆರೋಪಿಗಳ ಗುಂಪು ಹಲ್ಲೆ ನಡೆಸಿತ್ತು. ಹೀಗಾಗಿ, ಶಾನೂರ್ ತನ್ನ ಸ್ನೇಹಿತರೊಂದಿಗೆ ಆರೋಪಿಗಳ ಮನೆಗೆ ತೆರಳಿ ಅವರ ಕೃತ್ಯದ ಬಗ್ಗೆ ಪ್ರಶ್ನಿಸಿದ್ದಾರೆ. ಇದು ಎರಡೂ ಕಡೆಯವರ ನಡುವೆ ವಾಗ್ವಾದಕ್ಕೆ ಕಾರಣವಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಜಗಳದ ವೇಳೆ ಆರೋಪಿಗಳ ಗುಂಪು, ಸಂತೋಷ್ ಶಾನೂರ್ ಮೇಲೆ ಕತ್ತಿ ಹಾಗೂ ಚಾಕುವಿನಿಂದ ಹಲ್ಲೆ ನಡೆಸಿದೆ. ಇದರಿಂದ 
ಗಂಭೀರವಾಗಿ ಗಾಯಗೊಂಡಿದ್ದ ಶಾನೂರ್ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿರುವುದಾಗಿ ಎಂದು ಅಧಿಕಾರಿ ತಿಳಿಸಿದ್ದಾರೆ.

ಪೊಲೀಸ್ ವರಿಷ್ಠಾಧಿಕಾರಿ (ಬೆಳಗಾವಿ) ಭೀಮಾಶಂಕರ್ ಗುಳೇದ್ ಮಾತನಾಡಿ, ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ. ಈಗಾಗಲೇ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದೇವೆ. ತಲೆಮರೆಸಿಕೊಂಡಿರುವ ಉಳಿದ ಮೂವರನ್ನು ಬಂಧಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com