ಹಂಪಿಯಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಪಡಿಸಿ: ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಮೂಲಸೌಕರ್ಯ ಉತ್ತಮಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ  ಹೈಕೋರ್ಟ್ ಸೋಮವಾರ ಸಲಹೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಮೂಲಸೌಕರ್ಯ ಉತ್ತಮಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ  ಹೈಕೋರ್ಟ್ ಸೋಮವಾರ ಸಲಹೆ ನೀಡಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲದ ಸುತ್ತಮುತ್ತಲಿನ ಸಂರಕ್ಷಿತ ಪ್ರದೇಶಗಳಲ್ಲಿನ ಅಕ್ರಮ ಕಟ್ಟಡಗಳ ತೆರವು ಸಂಬಂಧ 2016ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯ ವೇಳೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠವು ಮೇಲಿನ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ.

ರಾಜ್ಯ ಇತ್ತೀಚಿನ ದಿನಗಳಲ್ಲಿ ಪ್ರವಾಸೋದ್ಯಮದಲ್ಲಿ ಹಿಂದುಳಿದಿದೆ ಎಂದು ಅಭಿಪ್ರಾಯಪಟ್ಟಿರುವ ಪೀಠವು ಪ್ರವಾಸಿ ತಾಣಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಯಿಂದ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುತ್ತಾರೆ. ಇದರಿಂದ ಸರ್ಕಾರಕ್ಕೆ ಆದಾಯವೂ ವೃದ್ಧಿಯಾಗಲಿದೆ. ಆದ್ದರಿಂದ ಈ ಸಲಹೆಯನ್ನು ಸರ್ಕಾರಕ್ಕೆ ಮುಟ್ಟಿಸುವಂತೆ ಅಡ್ವೊಕೇಟ್ ಜನರಲ್‌ಗೆ ಸೂಚನೆ ನೀಡಿದೆ.

ವಿಚಾರಣೆ ವೇಳೆ ಪೀಠವು “ಕರ್ನಾಟಕ 1990ರ ದಶಕದಲ್ಲಿ ಪ್ರವಾಸೋದ್ಯಮದಲ್ಲಿ ನಂಬರ್ ಒನ್ ಸ್ಥಾನದಲ್ಲಿತ್ತು. ಈಗ ಬಹುಶಃ ಮಧ್ಯಪ್ರದೇಶ ಮೊದಲ ಸ್ಥಾನದ್ಲಲಿರಬೇಕು. ಐತಿಹಾಸಿಕ ಹಂಪಿಯಲ್ಲಿ ಸದ್ಯ ಇರುವ ಮೂಲಸೌಕರ್ಯ ಪ್ರವಾಸಿಗರಿಗೆ ಸಾಲುತ್ತಿಲ್ಲ, ಅಲ್ಲಿನ ಮೂಲಸೌಕರ್ಯಗಳನ್ನು ಸಾಕಷ್ಟು ಪ್ರಮಾಣದಲ್ಲಿ ಉನ್ನತೀಕರಿಸಬೇಕಿದೆ. ಈ ಮೂಲಸೌಕರ್ಯ ಕೊರತೆ ಸಮಸ್ಯೆ ಬಗ್ಗೆ ಸರ್ಕಾರ ಏನಾದರೂ ಮಾಡಲೇಬೇಕಿದೆ’’ ಎಂದು ಹೇಳಿತು.

ವಿಶ್ವ ಪಾರಂಪರಿಕ ತಾಣಗಳಲ್ಲಿ ಮೂಲಸೌಕರ್ಯ ವೃದ್ಧಿ ಸಂಬಂಧ ಸರ್ಕಾರ ಸದಾ ತಜ್ಞರ ಜತೆ ಸಮಾಲೋಚನೆ ನಡೆಸುತ್ತಿರಬೇಕಾಗುತ್ತದೆ ಎಂದ ಪೀಠವು ಸಣ್ಣ ರಾಷ್ಟ್ರಗಳೂ ಸಹ ತಮ್ಮ ಬಜೆಟ್ ನಲ್ಲಿ ಪ್ರವಾಸಿ ತಾಣಗಳ ಮೂಲಸೌಕರ್ಯ ಅಭಿವೃದ್ಧಿಗೆ ಹಣ ಮೀಸಲಿರಿಸುತ್ತವೆ. ಹಲವು ದೇಶಗಳು ಆದಾಯಕ್ಕೆ ಪ್ರವಾಸಿ ತಾಣಗಳನ್ನೇ ನೆಚ್ಚಿಕೊಂಡಿವೆ ಎಂದು ಅವಲೋಕಿಸಿತು.

ಅಲ್ಲದೆ, ಕರ್ನಾಟಕದಲ್ಲಿ ದೊಡ್ಡ ಸಂಖ್ಯೆಯ ಪ್ರವಾಸಿ ತಾಣಗಳಿದ್ದು, ಅವುಗಳ ಅಭಿವೃದ್ಧಿ ಹಾಗೂ ಮೂಲಸೌಕರ್ಯ ವೃದ್ಧಿಗೆ ಅತ್ಯುತ್ತಮ ವಿಷಯಗಳನ್ನು ಸರ್ಕಾರ ರೂಢಿಸಿಕೊಳ್ಳಬೇಕು. ಈ ರೀತಿ ಪ್ರವಾಸಿ ಸ್ಥಳಗಳಲ್ಲಿ ಉತ್ತಮ ಮೂಲಸೌಕರ್ಯಗಳನ್ನು ನೀಡಿದರೆ ಹೆಚ್ಚಿನ ಜನರು ಆ ತಾಣಗಳಿಗೆ ಭೇಟಿ ನೀಡುತ್ತಾರೆ, ಸಹಜವಾಗಿಯೇ ಸರ್ಕಾರಕ್ಕೆ ಆದಾಯವೂ ಹೆಚ್ಚುತ್ತದೆ ಎಂದು ಪೀಠ ಹೇಳಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com